ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Friday, March 18, 2011

ಕನಕದಾಸರು

ಕನಕದಾಸರು ಕನ್ನಡದ ಪ್ರಮುಖ ಸಂತ ಕವಿಗಳಲ್ಲಿ ಒಬ್ಬರು. ಅವರು ಮೇಲು ಜಾತಿ ಮತ್ತು ವರ್ಗಗಳವರು ಒಡ್ಡಿದ ಅಗ್ನಿಪರೀಕ್ಷೆಯಲ್ಲಿ ಪಾಡುಪಟ್ಟು, ತನ್ನ ಭಕ್ತಿ-ಪ್ರತಿಭೆಗಳನ್ನು ತೋರಿಸಬೇಕಾಯಿತು. ಅವರು ಅನುಭವಿಸಿದ ತಲ್ಲಣಗಳು ಮತ್ತು ಇಕ್ಕಟ್ಟುಗಳು ಅವರ ಕೃತಿಗಳಲ್ಲಿ ಹಲವು ಬಗೆಗಳಲ್ಲಿ ಮೂಡಿಬಂದಿವೆ. ಕನಕದಾಸರು ಕೀರ್ತನೆಗಳು ಮತ್ತು ಕಾವ್ಯಗಳು ಎರಡನ್ನೂ ರಚಿಸಿದ ಕೆಲವೇ ಕೆಲವು ಹರಿದಾಸರಲ್ಲಿ ಒಬ್ಬರೆಂಬ ಸಂಗತಿಯನ್ನು ಗಮನಿಸಬೇಕು.

ಆ ಕಾಲದ ಸಾಹಿತ್ಯಸಂದರ್ಭದಲ್ಲಿ ಕನಕದಾಸರಿಗೆ ವಿಶಿಷ್ಟವಾದ ಹಿನ್ನೆಲೆಯಿತ್ತು. ಅವರು   ಹಿಂದುಳಿದ ಜಾತಿಯಲ್ಲಿ ಹುಟ್ಟಿದವರು, ಆದರೆ, ಅವರು ಸಾಮಂತ ರಾಜರೋ ಪಾಳೆಯಗಾರರೋ ಆಗಿದ್ದುದರಿಂದ ಅವರಿಗೆ ಯುದ್ಧ ಮತ್ತು ಆಡಳಿತಗಳ ನೇರವಾದ ಅನುಭವವಿತ್ತು. ಅವರ ತವರು ನೆಲವಾದ ಕಾಗಿನೆಲೆಯಲ್ಲಿ ಇಂದಿಗೂ ಇರುವ ಆದಿಕೇಶವನ ಗುಡಿಯ ದೇವತೆಯಾದ ಕೇಶವನು ಅವರ ಆರಾಧ್ಯದೈವವಾಗಿದ್ದು ಅವೆರ ಅಂಕಿತವಾದ ‘ಕಾಗಿನೆಲೆಯಾದಿಕೇಶವರಾಯ‘ ಎನ್ನುವುದು ಅಲ್ಲಿಂದಲೇ ಬಂದಿದೆ. ಅವರು ಕರ್ನಾಟಕ ಹಾಗೂ ಮಹಾರಾಷ್ಟ್ರಗಳಲ್ಲಿ ಮಾಡಿದ ನಿರಂತರವಾದ ತಿರುಗಾಟಗಳು ಮತ್ತು ಮತಾಂಧರಾದ ಧಾರ್ಮಿಕ ಮುಖಂಡರೊಂದಿಗಿನ ಅವರ ಮುಖಾಮುಖಿಗಳು ಸಾಹಸ-ವಿಷಾದಗಳೀಂದ ಕೂಡಿವೆ. ಅವರ ಯಾತನೆಗಳು, ಭಾವಗೀತೆಯಂತಹ ಕೀರ್ತನೆಗಳಲ್ಲಿ ಬಹಳ ಸಮರ್ಥವಾದ ಅಭಿವ್ಯಕ್ತಿಯನ್ನು ಪಡೆದಿವೆ. ಕನಕದಾಸರ ಹಿರಿಯರೂ ಸಮಕಾಲೀನರೂ ಆದ ವ್ಯಾಸರಾಯರು, ಪುರಂದರದಾಸರು ಮುಂತಾದವರು ಅವರ ಭಕ್ತಿ ಮತ್ತು ಪ್ರತಿಭೆಗಳನ್ನು ಮೆಚ್ಚಿ ಕೊಂಡಾಡಿದ್ದಾರೆ. ಆದರೆ, ಮತಾಂಧರಾದ ಮೇಲುಜಾತಿಗಳವರು ಅವರ ಯೋಗ್ಯತೆಯನ್ನು ಪ್ರಶ್ನಿಸಿದರು. ಅವರು ಶ್ರೀವೈಷ್ಣವ ಸಿದ್ಧಾಂತವನ್ನು ಇಷ್ಟಪಟ್ಟಿದ್ದರೆಂಬ ಊಹಾಪೋಹಗಳಿವೆ. ಅದೇನೇ ಇರಲಿ, ದ್ವೈತ ತಾತ್ವಿಕತೆಯ ಮೂಲ ನೆಲೆಗಳಿಗೆ ಕೊಂಚವಾದರೂ ನಿಷ್ಠೆಯನ್ನು ತೋರಿಸುವುದು ಅವರಿಗೆ ಅನಿವಾರ್ಯವಾಗಿತ್ತು. ಆದ್ದರಿಂದಲೇ, ಅವರ ಅನೇಕ ಕೀರ್ತನೆಗಳು ಆ ಧರ್ಮದ ಚೌಕಟ್ಟನಲ್ಲಿ ರಚಿತವಾಗಿವೆ. ಆದರೆ, ಅವರು ಅಂತರಂಗದ ಭಾವನೆಗಳಿಗೆ ಕಟ್ಟುಪಾಡಿಲ್ಲದೆ, ನುಡಿಗೊಡುವ ಅನೇಕ ಕೀರ್ತನೆಗಳನ್ನು ಹಾಡಿಕೊಂಡಿದ್ದಾರೆ. ಕನಕದಾಸರ ಕೀರ್ತನೆಗಳು ಈ ವ್ಯಥೆಯಿಂದ ಆರ್ದ್ರವಾಗಿದ್ದು,  ಜಾತಿಪದ್ಧತಿಯ ಪರಿಣಾಮವಾದ ಅಸಮಾನತೆಯ ವಿರುದ್ಧ ಗಟ್ಟಿಯಾದ ದನಿಯೆತ್ತುತ್ತವೆ. ಅನೇಕ ಕೀರ್ತನೆಗಳು ದ್ವೈತಸಿದ್ಧಾಂತದ ಚೌಕಟ್ಟಿನಿಂದ ಆಚೆಗೆ ಹೋಗುವುದಿಲ್ಲವೆನ್ನುವುದು ನಿಜವಾದರೂ ಅವುಗಳೊಳಗೆ ಆಳವಾದ ವಿಷಾದವೂ ಇದೆ

        ಭಾಮಿನಿ ಷಟ್ಪದಿಯಲ್ಲಿ ರಚಿತವಾಗಿರುವ ‘ನಳಚರಿತೆ‘ ಕನ್ನಡದ ಜನಪ್ರಿಯ ಕಾವ್ಯಗಳಲ್ಲಿ ಒಂದು.   ಇದರಲ್ಲಿ ಒಂಬತ್ತು ಅಧ್ಯಾಯಗಳಿದ್ದು ಅವು ಸುಮಾರು 480 ಪದ್ಯಗಳನ್ನು ಒಳಗೊಂಡಿವೆ. ಒಂದು ನೆಲೆಯಲ್ಲಿ ಇದು ನಿಜವಾದ ಪ್ರೇಮಿಗಳು ಎದುರಿಸುವ ಪಡಿಪಾಟಲುಗಳನ್ನು ನಿರೂಪಿಸುವುದರಿಂದಲೇ ಆತ್ಮೀಯವಾಗುತ್ತದೆ. ಮಹಾಭಾರತದಿಂದ ತೆಗೆದುಕೊಳ್ಳಲಾಗಿರುವ ಈ ಉಪಾಖ್ಯಾನವು ನಳ-ದಮಯಂತಿಯರ ಜೀವನವನ್ನು ಸರಳವಾದರೂ ಶಕ್ತಿಶಾಲಿಯಾದ ಶೈಲಿಯಲ್ಲಿ ನಿರೂಪಿಸುತ್ತದೆ. ಇ ದಂಪತಿಗಳು ಎದುರಿಸಿದ ಕಾಡು ಮತ್ತು ಕಾಳ್ಗಿಚ್ಚುಗಳ ವರ್ಣನೆಯು ಬಹಳ ಸಹಜವಾಗಿದೆ. ಈ ಕಾವ್ಯವು ತನ್ನ ಅನೇಕ ಆಶಯಗಳನ್ನು ಜಾನಪದದಿಂದ ತೆಗೆದುಕೊಂಡಿದೆ. ‘ನಳಚರಿತೆ‘ ಮುಖ್ಯವಾಗಿ ಮನುಷ್ಯಜೀವಿಗಳ ಕಷ್ಟಸುಖಗಳ ಹಂಚಿಕೊಳ್ಳುವಿಕೆಯೇ ವಿನಾ ತಾತ್ವಿಕವಾದ ಉಪದೇಶವಲ್ಲ.

‘ಮೋಹನತರಂಗಿಣಿ‘ ಸಾಂಗತ್ಯವೆಂಬ ಛಂದೋಪ್ರಕಾರವನ್ನು ಬಳಸಿಕೊಂಡಿರುವ ದೊಡ್ಡ ಗಾತ್ರದ ಕಾವ್ಯ.   ಈ ಕಾವ್ಯವು ಕೃಷ್ಣನ ಮೊಮ್ಮಗನಾದ ಅನಿರುದ್ಧ ಮತ್ತು ಬಾಣಾಸುರನ ಮಗಳಾದ ಉಷಾರ ಪ್ರಣಯಕಥೆಯನ್ನು ವಸ್ತುವಾಗಿ ಹೊಂದಿದೆ. ಈ ಕಾವ್ಯವು ಕೂಡ ಯಾವುದೇ ಕೃಷ್ಣಕಥೆಯ ಮೂಲ ಆಕರಗಳಾದ ಭಾಗವತ, ಹರಿವಂಶ, ವಿಷ್ಣುಪುರಾಣ ಮತ್ತು ಮಹಾಭಾರತಗಳಿಂದ ತನಗೆ ಅಗತ್ಯವಾದ ವಿವರಗಳನ್ನು ತೆಗೆದುಕೊಂಡಿದೆ. ಮನ್ಮಥನ ಹುಟ್ಟು, ಶಂಬರಾಸುರನ ವಧೆ, ಉಷಾ ಮತ್ತು ಅನಿರುದ್ಧರ ಪ್ರಣಯ, ಬಾಣಾಸುರವಧೆ ಮುಂತಾದವು ಈ ಕಾವ್ಯದ ಮುಖ್ಯ ಘಟನೆಗಳು. ಅದೆಲ್ಲಕ್ಕಿಂತ ಮುಖ್ಯವಾಗಿ ಮೋಹನತರಂಗಿಣಿಯು ತನ್ನ ಕಾಲದ ಕರ್ನಾಟಕದ ಜೀವನಶೈಲಿಯ ಮೇಲೆ ಬೆಳಕು ಚೆಲ್ಲುತ್ತದೆ. ನಿಧಾನಗತಿಯ ಹಾಗೂ ಗೇಯತೆಯ ಕಡೆಗೆ ಒಲಿಯುವ ಸಾಂಗತ್ಯದ ಛಂದಸ್ಸು, ಈ ಕಾವ್ಯದ ವಸ್ತುವಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ.

‘ರಾಮಧಾನ್ಯಚರಿತ್ರೆ‘ಯು ಇಡೀ ಕನ್ನಡ ಸಾಹಿತ್ಯಚರಿತ್ರೆಯಲ್ಲಿಯೇ ಬಹಳ ಅನನ್ಯವಾದ ಕಾವ್ಯ. ಜಾತಿಪದ್ಧತಿ ಮತ್ತು ಜನಾಂಗಿಕ ಭೇದದಿಂದ ಉಂಟಾಗುವ ದಾರುಣ ಯಾತನೆಯನ್ನು ಬಹಳ ಸಾಂಕೇತಿಕವಾಗಿ ಮತ್ತು ಅನುಪಮವಾದ ಕಲ್ಪನಾಶಕ್ತಿಯ ಬಲದಿಂದ ಕಟ್ಟಿಕೊಡುವುದು ಈ ಕಾವ್ಯದ ಹೆಗ್ಗಳಿಕೆ. ಅದು ಅಹಂಕಾರಿಯಾದ ಬತ್ತ ಮತ್ತು ವಿನಯದಿಂದ ತಲೆಬಾಗಿದ, ಜನಸಾಮಾನ್ಯರ ಆಹಾರವಾದ ನರೆದಲೆಗಳ ನಡುವೆ ನಡೆಯುವ ಕಾಲ್ಪನಿಕವಾದ ಮುಖಾಮುಖಿಯ ಕಥನ. ಅವರಿಬ್ಬರ ನಡುವೆ ಯಾರು ಶ್ರೇಷ್ಠರೆನ್ನುವ ವಿಷಯದಲ್ಲಿ ಜಗಳ ನಡೆಯುತ್ತದೆ. ಕೊನೆಯ ತೀರ್ಮಾನವನ್ನು ಕೊಡುವ ಕೆಲಸವನ್ನು ರಾಮನು ನಿರ್ವಹಿಸಬೇಕಾಗುತ್ತದೆ. ಅವನು ಒಂದು ಪರೀಕ್ಷಯನ್ನು ಮಾಡಿ ನರೆದಲೆಗದ ಪರವಾದ ತೀರ್ಮಾನವನ್ನು ಕೊಡುತ್ತಾನೆ. ಅದನ್ನು ರಾಗಿ ಎಂದು ಕರೆಯುತ್ತಾನೆ. (ರಾಘವ ಧಾನ್ಯ)  ಈ ಕಾವ್ಯಕ್ಕೆ ಇರುವ ಸಾಂಕೇತಿಕ ಹಾಗೂ ಸಾಮಾಜಿಕವಾದ ಮಹತ್ವವನ್ನು ಕನ್ನಡ ಸಾಹಿತ್ಯದ ಪ್ರಧಾನಧಾರೆಯು ಗುರುತಿಸಿದ್ದು ಈಚೆಗೆ. ಹಿಂದುಳಿದ ವರ್ಗಗಳು ಮುಂದೆ ಬಂದಿದ್ದಕ್ಕೂ ಈ ಕಾವ್ಯದ ಮರುಹುಟ್ಟಿಗೂ ಇರುವ ಸಂಬಂಧವು ಕಾಕತಾಳೀಯವಲ್ಲ. ಈ ಕಾವ್ಯವನ್ನು ಅಂಚಿಗೆ ತಳ್ಳಿ,  ಕಡಿಮೆ ಆಸ್ಫೋಟಕವಾದ ಕಾವ್ಯಗಳನ್ನು ಹೊಗಳಿರುವುದು, ಕನ್ನಡ ಸಾಹಿತ್ಯವಿಮರ್ಶೆಯ ಮಾನದಂಡಗಳ ಬಗ್ಗೆ, ಮುಖ್ಯವಾದ ಸತ್ಯಗಳನ್ನು ಹೇಳುತ್ತದೆ.

    ‘ಕನಕನ ಮುಂಡಿಗೆಗಳು‘, ಒಗಟಿನ ಹೊರ ಆವರಣದೊಳಗೆ, ಮಹತ್ವದ ತಾತ್ವಿಕ ಸಂಗತಿಗಳನ್ನು ಹೊಂದಿರುವ, ಚಿಕ್ಕ ಗೇಯ ಕವಿತೆಗಳನ್ನು ಒಳಗೊಳ್ಳುತ್ತವೆ. ಇವುಗಳನ್ನು ಅರ್ಥ ಮಾಡಿಕೊಳ್ಳು ತಾಂತ್ರಿಕವಾದ ಪರಿಭಾಷೆಯ ನಿಕಟ ಪರಿಚಯ ಇರಬೇಕು. ‘ಹರಿಭಕ್ತಸಾರ‘ದಲ್ಲಿ ಭಾಮಿನಿ ಷಟ್ಪದಿಯಲ್ಲಿ ರಚಿತವಾಗಿರುವ 110 ಪದ್ಯಗಳಿವೆ. ಅವು ಕನಕದಾಸರ ಜೀವನದೃಷ್ಟಿ ಮತ್ತು ನೈತಿಕ ನೆಲೆಗಟ್ಟನ್ನು ಬಹಳ ಭಾವನಾತ್ಮಕವೂ ಸರಳವೂ ಆದ ಶೈಲಿಯಲ್ಲಿ ಹೇಳುತ್ತದೆ.

     ಒಟ್ಟಂದದಲ್ಲಿ ಹೇಳುವುದಾದರೆ, ಕನ್ನಡ ಸಾಹಿತ್ಯದ ಚರಿತ್ರೆಯಲ್ಲಿ ಕನಕದಾಸರಿಗೆ ವಿಶಿಷ್ಟವಾದ ಸ್ಥಾನವಿದೆ. ನಮ್ಮ ಸಮಕಾಲೀನ ವಾತಾವರಣದಲ್ಲಿ ಅವರ ಕಾವ್ಯ ಮತ್ತು ಜೀವನಗಳು ಸ್ಫೂರ್ತಿದಾಯಕವಾಗಿವೆ. ಏಕೆಂದರೆ, ಇಂದು ಹಿಂದುಳಿದ ವರ್ಗಗಳ ಕಲಾಪ್ರತಿಭೆ ಮತ್ತು ಸಾರ್ವಜನಿಕ ಸಮ್ಮತಿಯನ್ನು ಪಡೆಯುವ ಅವರ ಪ್ರಯತ್ನಗಳು ಮುನ್ನೆಲೆಗೆ ಬಂದಿವೆ.

ಕನಕನ ಕಿಂಡಿ

ಉಡುಪಿಯ ಕನಕನ ಕಿಂಡಿಯ ಬಗ್ಗೆ ಸ್ವತಃ ಕನಕದಾಸರ ಕೃತಿಗಳಲ್ಲಾಗಲೀ ಇತರೆ ಕೃತಿಗಳಲ್ಲಾಗಲೀ ಮಠದ ದಾಖಲೆಗಳಲ್ಲಾಗಲೀ ಚರಿತ್ರೆಯ ಪುಟಗಳಲ್ಲಾಗಲೀ ಶಾಸನಗಳಲ್ಲಾಗಲೀ ಎಲ್ಲಿಯೂ ಪ್ರಸ್ತಾಪವಾಗಿಲ್ಲ. ಇನ್ನು ಉಡುಪಿಯ ಆ ದೇವಾಲಯವಾದರೋ ಆಗಮಾದಿಗಳಲ್ಲಿ ಹೇಳಿರುವ ವಾಸ್ತುವಿನ್ಯಾಸದನ್ವಯ ಕಟ್ಟಿಯೂ ಇಲ್ಲ. ಅಲ್ಲಿ ಬಲಿಕಲ್ಲು, ಧ್ವಜಸ್ತಂಭ, ಅಂತರಾಳ, ಅರ್ಧಮಂಟಪ, ಪ್ರದಕ್ಷಿಣಾಪಥಗಳೂ ಇಲ್ಲ. ಇನ್ನು ಪ್ರಾಣದೇವರ ಪ್ರತಿಷ್ಠಾಪನೆಯೂ ವಿಭಿನ್ನವೇ. ಉಡುಪಿಯ ಶ್ರೀಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರು ಕ್ರಿಸ್ತಶಕ ೧೨೩೮ (ಶಕವರ್ಷ ೧೧೬೦ ಹೇವಿಲಂಬಿ ಸಂವತ್ಸರ ಮಾಘ ಶುದ್ಧ ತದಿಗೆ) ನೇ ವರ್ಷದಲ್ಲಿ ಪಶ್ಚಿಮಾಭಿಮುಖಿಯಾಗಿ ಪ್ರತಿಷ್ಠೆ ಮಾಡಿದ್ದರಾಗಲೀ ಪೂರ್ವಾಭಿಮುಖವಾಗಿ ಅಲ್ಲ. ತಮಗೆ ಪಶ್ಚಿಮ ಸಮುದ್ರದಿಂದ ಲಭ್ಯವಾದ ಆ ಮೂರ್ತಿಯನ್ನು ಪಶ್ಚಿಮಕ್ಕೇ ಮುಖಮಾಡಿ ಪ್ರತಿಷ್ಠಿಸಿ ಪಶ್ಚಿಮ ಸಮುದ್ರಾಧೀಶ್ವರನನ್ನಾಗಿ ಕರೆದರೆನ್ನುವುದೇ ಸತ್ಯಸ್ಯ ಸತ್ಯ. ಇದಕ್ಕೆ ದಾಖಲೆಯಾಗಿ ಕನಕದಾಸರ ಸಮಕಾಲೀನರಾದ ಸುರೋತ್ತಮ ತೀರ್ಥರ ಹೇಳಿಕೆ,ಅದರ ತಾತ್ಪರ್ಯ ಹೀಗಿದೆ:'ದೇವತಾವಿಗ್ರಹಗಳನ್ನು ಪೂರ್ವಾಭಿಮುಖಿಯಾಗಿಯೇ ಸ್ಥಾಪಿಸಬೇಕೆಂದು ಏನೂ ಇಲ್ಲ, ಆದ್ದರಿಂದಲೇ ಮಧ್ವರು ಈ ಕೃಷ್ಣನ ಪ್ರತಿಮೆಯನ್ನು ಪಶ್ಚಿಮಾಭಿಮುಖಿಯಾಗಿ ಸ್ಥಾಪಿಸಿದ್ದಾರೆ". ಮಧ್ವರು ಶ್ರೀಕೃಷ್ಣಪಾದಾಂಬುಜಾರ್ಚಕರಾಗಿ ತಮ್ಮ ಮತ್ತು ತಮ್ಮ ಎಂಟು ಮಂದಿ ಶಿಷ್ಯರು ಮತ್ತು ಅವರ ಪರಂಪರೆಯವರ ನಿತ್ಯಾರ್ಚನೆಗಾಗಿ ಸ್ಥಾಪಿಸಿದ ಮೂರ್ತಿ ಇದು. ಈ ಮೂರ್ತಿ ಮತ್ತು ಅದರ ಅರ್ಚನೆ ಮಠದ ಖಾಸಗಿ ಕ್ರಿಯೆಗಳಾಗಿದ್ದು ಸಾರ್ವಜನಿಕರಿಗೆ ತೆರೆದಿಟ್ಟದ್ದಲ್ಲ.

ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀಸಂಗಮದಂತೆ. ಅವರು ಮೂರು ಮಂದಿಯೂ ಒಂದೇ ಓರಗೆಯವರು ಒಂದೇ ಮನಸ್ಸಿನವರು. ಪರಸ್ಪರ ಗೌರವಾದರಗಳನ್ನು ಹೊಂದಿದ್ದವರು. ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ ಔನ್ನತ್ಯಗಳ ಅರಿವಿತ್ತು. ೧೨೦ ವರ್ಷಗಳ ಕಾಲ ಬದುಕಿದ್ದ ವಾದಿರಾಜ(೧೪೮೦-೧೬೦೦)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗಪಡಿಸಿಕೊಂಡು ಮಠದಲ್ಲಿ ಪ್ರವೇಶ ಪಡೆಯುವ ದಾರ್ಷ್ಟ್ಯವೂ ಕನಕರಿಗಿರಲಿಲ್ಲ. ಕೃಷ್ಣನ ಮೂರ್ತಿಯ ಎದುರು ದರ್ಶನಾಪೇಕ್ಷೀ ಭಕ್ತರ ಅನುಕೂಲಕ್ಕಾಗಿ ಇದ್ದ ಧೂಳಿದರ್ಶನ ಕಿಂಡಿಯ ಬಳಿ ವಾದಿರಾಜರೂ ಕನಕದಾಸರೂ ಲೋಕಾಭಿರಾಮದ ಮಾತುಗಳನ್ನಾಡುತ್ತಿದ್ದರು. ಅದೇ ಕಿಂಡಿಯೇ ಮುಂದೆ ಕನಕನ ಕಿಂಡಿಯಾಯಿತು ಹೊರತು ಸಿನಿಮೀಯವಾಗಿ ಅಲ್ಲ. ಕನಕದಾಸರು ಪುಣ್ಯಪುರುಷರೆಂದು ಬಿಂಬಿಸಲು ಅವರ ಕಾವ್ಯಕೃಷಿಯೇ ಮಹತ್ತಾದ ಸಾಕ್ಷಿಯಾಗಿ ನಿಲ್ಲುವುದರಿಂದ ಕಿಂಡಿಯ ಸಹಾಯ ಅವರಿಗೆ ಬೇಕಾಗಿಯೂ ಇಲ್ಲ.

ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೆ ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು. ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ ಸಾರಸ್ವತ ಲೋಕದ ಪ್ರಜ್ವಲ ತಾರೆಯಾಗಿದ್ದಾರೆ.ವೆ೦ಕಟೇಷ್ ಹೊಸುರ್

ಕನಕದಾಸರ ಒ೦ದು ಕೀರ್ತನೆ

ಕನಕದಾಸರ ಕಾವ್ಯದ ಸರಾಗತೆಗೆ ಒ೦ದು ಉದಾಹರಣೆ:

                ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
                ನೀ ದೇಹದೊಳಗೊ, ನಿನ್ನೊಳು ದೇಹವೊ

                ಬಯಲು ಆಲಯದೊಳಗೊ, ಆಲಯವು ಬಯಲೊಳೊಗೊ
                ಬಯಲು ಆಲಯವೆರಡು ನಯನದೊಳಗೊ
                ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
                ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ

                ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
                ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
                ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
                ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ

                ಕುಸುಮದೊಳು ಗ೦ಧವೊ, ಗ೦ಧದೊಳು ಕುಸುಮವೊ
                ಕುಸುಮ ಗ೦ಧಗಳೆರಡು ಘ್ರಾಣದೊಳಗೊ
                ಅಸಮಭವ ಕಾಗಿನೆಲೆಯಾದಿ ಕೇಶವರಾಯ
                ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ
http://www.classicalkannada.org/, http://kn.wikipedia.org/wiki/

1 comment: