ಪೋಗದಿರೆಲೊ ರಂಗ ಬಾಗಿಲಿಂದಾಚೆಗೆ
ಭಾಗವತರು ಕಂಡರೆತ್ತಿಕೊಂಡೊಯ್ವರೊ
ಸುರಮುನಿಗಳು ತಮ್ಮ ಹೃದಯ ಗಹ್ವರದಲ್ಲಿ
ಪರಮಾತ್ಮನ ಕಾಣದೆ ಅರಸುವರು
ದೊರಕದ ವಸ್ತುವು ದೊರಕಿತು ತಮಗೆಂದು
ಹರುಷದಿಂದಲಿ ನಿನ್ನ ಕರೆದೆತ್ತಿಕೊಂಬರು
ಅಗಣಿತ ಗುಣ ನಿನ್ನ ಜಗದ ನಾರಿಯರೆಲ್ಲ
ಹಗೆಯಾಗಿ ನೋಡ್ವರೋ ಗೋಪಾಲನೆ
ಮಗುಗಳ ಮಾಣಿಕ್ಯ ತಗುಲಿತು ಕರಕೆಂದು
ವೇಗದಿಂದಲಿ ಬಂದು ಬಿಗಿದಪ್ಪಿಕೊಂಬರು
ದಿಟ್ಟ ನಾರಿಯರೆಲ್ಲ ಇಷ್ಟವ ಸಲಿಸೆಂದು
ಅಟ್ಟಟ್ಟಿ ಬೆನ್ನಿಂದೆ ತಿರುಗುವರು
ಸೃಷ್ಟೀಶ ಪುರಂದರ ವಿಠ್ಠಲ ರಾಯಗೆ
ಇಷ್ಟಿಷ್ಟು ಬೆಣ್ಣೆಯ ಕೊಟ್ಟೆನೋ ರಂಗಯ್ಯ
No comments:
Post a Comment