ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Saturday, April 23, 2011

ಜೀ ಕನ್ನಡ ವಾಹಿನಿ ಮುಖ್ಯಸ್ಥರಿಗೊಂದು ಬಹಿರಂಗ ಆಗ್ರಹ ಪತ್ರ

ಮಾನ್ಯರೆ, 
ಈ ಪತ್ರವನ್ನು ಅತ್ಯಂತ ನೋವು, ವಿಷಾದ, ಕಳವಳದಿಂದ ನಿಮಗೆ ಬರೆಯುತ್ತಿದ್ದೇವೆ. ಪತ್ರ ಓದಿದ ನಂತರವಾದರೂ ನೀವು ನಮ್ಮ ಭಾವನೆಗಳಿಗೆ ಸ್ಪಂದಿಸುತ್ತೀರೆಂಬ ನಂಬಿಕೆ ಇದೆ. ಲಕ್ಷ-ಕೋಟಿ ಜನರನ್ನು ತಲುಪುವ ಮೀಡಿಯಾಗಳು ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಬೇಕು. ಇದು ಕಾನೂನಿನ ಪರಿಭಾಷೆಗಳಿಗೆ ಮಾತ್ರ ಒಳಪಡುವ ವಿಷಯ ಎಂದು ಯಾರೂ ಭಾವಿಸಬೇಕಾಗಿಲ್ಲ, ಕಾನೂನನ್ನೂ ಮೀರಿದ ನೈತಿಕತೆ, ಮಾನವೀಯತೆಯ ಹೊಣೆಗಾರಿಕೆಯನ್ನೂ ಒಪ್ಪಿ ಅನುಸರಿಸಬೇಕಾಗುತ್ತದೆ. ತಾವು ಇಡೀ ಪತ್ರವನ್ನು ಓದಿ, ಸೂಕ್ತ, ಅತ್ಯಗತ್ಯ, ಸಕಾಲಿಕ ನಿರ್ಧಾರಕ್ಕೆ ಬರುವಿರೆಂಬ ನಂಬುಗೆ ನಮಗಿದೆ.

ನಮ್ಮ ತಕರಾರು, ಸಿಟ್ಟು, ಆತಂಕ ಇರುವುದು ನಿಮ್ಮ ವಾಹಿನಿಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ೯ ಗಂಟೆಗೆ ಪ್ರಸಾರವಾಗುವ ಬೃಹತ್ ಬ್ರಹ್ಮಾಂಡ ಎಂಬ ಜ್ಯೋತಿಷ್ಯ ಸಂಬಂಧಿ ಕಾರ್ಯಕ್ರಮದ ಕುರಿತು. ಈ ಕಾರ್ಯಕ್ರಮವನ್ನು ನಡೆಸಿಕೊಡುವವರು ಶ್ರೀ ನರೇಂದ್ರ ಬಾಬು ಶರ್ಮ ಎಂಬುವವರು. ಇವರು ನಿಮ್ಮ ಚಾನಲ್‌ನಲ್ಲಿ ಕಾರ್ಯಕ್ರಮ ನಡೆಸಿಕೊಡುವುದಕ್ಕೆ ಮುನ್ನ ಸುವರ್ಣ ವಾಹಿನಿಯಲ್ಲಿ ಭವ್ಯ ಬ್ರಹ್ಮಾಂಡ ಎಂಬ ಹೆಸರಿನಲ್ಲಿ, ಅದಕ್ಕೂ ಮುನ್ನ ಕಸ್ತೂರಿ ವಾಹಿನಿಯಲ್ಲಿ ಬ್ರಹ್ಮಾಂಡ ಎಂಬ ಹೆಸರಿನಲ್ಲಿ ಇದೇ ಸ್ವರೂಪದ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು. ಬಹಳಷ್ಟು ಜನರಿಗೆ ಗೊತ್ತಿರುವ ಪ್ರಕಾರ ತೀರಾ ಇತ್ತೀಚಿನವರೆಗೆ ನರೇಂದ್ರ ಶರ್ಮ ಅವರು ಕನ್ನಡ ಸಿನಿಮಾಗಳಲ್ಲಿ ಜೂನಿಯರ್ ಆರ್ಟಿಸ್ಟ್ ಆಗಿದ್ದವರು.

ನರೇಂದ್ರ ಶರ್ಮ ಅವರು ಕಸ್ತೂರಿ ವಾಹಿನಿ ಹಾಗು ಸುವರ್ಣ ವಾಹಿನಿಗಳಲ್ಲಿ ಬ್ರಹ್ಮಾಂಡ ನಡೆಸುತ್ತಿದ್ದಾಗಲೇ ಅವರು ಬಳಸುವ ಭಾಷೆ, ಹೇಳುವ ಹಸಿಹಸಿ ಸುಳ್ಳುಗಳು ಮಾನವಂತರ, ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿತ್ತು. ಮಹಿಳೆಯರನ್ನು ವಿನಾಕಾರಣ ನಿಂದಿಸುವುದು-ಅವಹೇಳನ ಮಾಡುವುದು, ಕೆಳಜಾತಿಯ ಜನರನ್ನು ಗುರಿಪಡಿಸಿ ತಿರಸ್ಕಾರದಿಂದ ಮಾತನಾಡಿ ಅಪಮಾನಿಸುವುದು, ಜ್ಯೋತಿಷ್ಯದ ಹೆಸರಿನಲ್ಲಿ ಸುಳ್ಳುಗಳ ಕಂತೆ ಕಟ್ಟಿ ಜನರನ್ನು ಬೆದರಿಸುವುದು ಇವರು ಹಿಂದಿನಿಂದ ಮಾಡಿಕೊಂಡು ಬಂದಿರುವ ಕೆಲಸ. ಅದನ್ನು ಅವರು ನಿಮ್ಮ ಜೀ ವಾಹಿನಿಯಲ್ಲೂ ಮಾಡುತ್ತಿದ್ದಾರೆ ಹಾಗು ಅದು ಈಗ ಅತಿರೇಕಕ್ಕೆ ತಲುಪಿದೆ.

ನಿಮ್ಮ ಜೀ ವಾಹಿನಿಯ ವೇದಿಕೆಯನ್ನು ಬಳಸಿಕೊಂಡು ನರೇಂದ್ರ ಶರ್ಮ ಏನೇನು ಮಾತನಾಡಿದ್ದಾರೆ ಎಂಬುದಕ್ಕೆ ಕೆಲವು ಸ್ಯಾಂಪಲ್‌ಗಳನ್ನು ಇಲ್ಲಿ ಒದಗಿಸುತ್ತಿದ್ದೇವೆ. ದಯವಿಟ್ಟು ಗಮನವಿಟ್ಟು ಓದಬೇಕಾಗಿ ವಿನಂತಿ.

೧. ನಾನು ಜಗನ್ಮಾತೆಯ ಪುತ್ರ. ಆಕೆ ಮೇ.೧೨ರಂದು ಭೂಮಿಗೆ ಬರುತ್ತಿದ್ದಾಳೆ. ಬಂದವಳು ಭೂಮಿಯನ್ನು ನಾಶಪಡಿಸುತ್ತಾಳೆ. ನಾನು ಇದನ್ನು ಘೋಷಿಸಿರುವುದರಿಂದ, ಜಗನ್ಮಾತೆ ನನ್ನ ಮಾತು ಉಳಿಸುವ ದೃಷ್ಟಿಯಿಂದಲಾದರೂ ಪ್ರಳಯ ನಡೆಸುತ್ತಾಳೆ.

೨. ಕರ್ನಾಟಕದ ಯಾವ ದೇವಸ್ಥಾನಗಳಲ್ಲೂ ದೇವರಿಲ್ಲ. ಕರ್ನಾಟಕದಲ್ಲಿ ಸಾಧು ಸಂತರು ಮಾತ್ರ ಇದ್ದಾರೆ. ದೇವರು ಇರುವುದೆಲ್ಲ ತಮಿಳುನಾಡಿನಲ್ಲಿ. ಅಲ್ಲಿನ ಧರ್ಮಕ್ಷೇತ್ರಗಳಲ್ಲಿ. ಹಾಗಾಗಿ ನಾನು ತಮಿಳುನಾಡಿನ ದೇವಸ್ಥಾನಗಳಿಗೆ ಹೋಗುವಂತೆ ಭಕ್ತರಿಗೆ ಹೇಳುತ್ತೇನೆ.

೩. ಹೆಣ್ಣು ಮಕ್ಕಳು ನೈಟಿ ತೊಡಬಾರದು. ಸಲ್ವಾರ್ ಕಮೀಜ್ ಹಾಕಿದರೆ ಗರ್ಭಕೋಶದ ಕ್ಯಾನ್ಸರ್ ಬರುತ್ತೆ. ರಾತ್ರಿ ಗಂಡನ ಜತೆ ಮಲಗಿ ಬೆಳಿಗ್ಗೆ ಎದ್ದ ಕೂಡಲೇ ಅಡುಗೆ ಮನೆಗೆ ಹೋಗಬಾರದು. ಹೆಣ್ಣು ಮಕ್ಕಳು ಮನೆಯಲ್ಲಿ ಇದ್ದರೆ ಲಕ್ಷಣ. ಅಗಲವಾದ ಬಿಂದಿ ಇಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಬೂಬಮ್ಮಗಳ ಹಾಗೆ ಕಾಣುತ್ತೀರಿ. (ಬೂಬಮ್ಮ ಎಂದರೆ ಮುಸ್ಲಿಂ ಹೆಂಗಸು)

೪. ಬೆಳಿಗ್ಗೆ ಎದ್ದ ಕೂಡಲೇ ಪೊರಕೆಯನ್ನು, ಹಜಾಮರ ಮುಖವನ್ನು ನೋಡಬಾರದು. ನೋಡಿದರೆ ಕೆಟ್ಟದಾಗುತ್ತದೆ.

೫. ಇಡೀ ಜಗತ್ತು ಮುಳುಗಿ ಹೋಗುತ್ತದೆ, ಬೆಳಗಾವಿಯ ಒಂದು ಹಳ್ಳಿ ಮಾತ್ರ ಉಳಿದುಕೊಳ್ಳುತ್ತದೆ. ಪಾಪಿಗಳು ಮಾಡಿದ ತಪ್ಪಿಗಾಗಿ ಪಾಪಿಗಳಲ್ಲದವರೂ ನಾಶವಾಗುತ್ತಾರೆ.

೬. ಹಾವು ಎಂದರೆ ದೇವರು. ಜಪಾನ್ ದೇಶದವರು ಹಾವು ತಿನ್ನುತ್ತಾರೆ, ಅದಕ್ಕೆ ಸುನಾಮಿ ಬಂದಿದ್ದು.

ಇವು ಕೆಲವು ಸ್ಯಾಂಪಲ್‌ಗಳು ಮಾತ್ರ. ಈತನ ಇನ್ನಷ್ಟು ಭಯಾನಕ ಉಪದೇಶಗಳ ಕುರಿತು ಈ ಹಿಂದೆ ಇದೇ ಬ್ಲಾಗ್ ನಲ್ಲಿ ಪ್ರಸ್ತಾಪಿಸಿದ್ದೇವೆ. ಒಮ್ಮೆ ಓದಿ ನೋಡಲು ವಿನಂತಿ.  ಈ ಬಗೆಯ ದುರ್ಬೋಧನೆಗಳನ್ನು ನೀಚಾತಿನೀಚರಷ್ಟೆ ಸಮರ್ಥಿಸಿಕೊಳ್ಳಬಹುದು. ಹೀಗಾಗಿ ನೀವು ಇವುಗಳನ್ನೆಲ್ಲ ಒಪ್ಪಲಾರಿರಿ ಎಂದು ನಮ್ಮ ನಂಬಿಕೆ. ನರೇಂದ್ರ ಶರ್ಮ ಬಳಸುವ ಭಾಷೆ ಎಷ್ಟು ಕೊಳಕಾಗಿದೆಯೆಂದರೆ ಆತ ಪದೇಪದೇ ಮುಂಡೇವು, ಮುಂಡೆ (ಗಂಡ ಸತ್ತ ಹೆಂಗಸು), ಕಳ್ ನನ್ ಮಕ್ಕಳು, ಗೂಬೆ, ಗುಗ್ಗು, ದರಿದ್ರದವು.. ಇತ್ಯಾದಿ ಪದಗಳನ್ನೇ ಬಳಸುತ್ತಾರೆ. ವೇದೋಪನಿಷತ್ತುಗಳನ್ನು ಓದಿದ ವ್ಯಕ್ತಿ ಇಷ್ಟು ಅಸಭ್ಯವಾದ ಭಾಷೆಯಲ್ಲಿ ಸಾರ್ವಜನಿಕವಾಗಿ ಮಾತನಾಡಲು ಸಾಧ್ಯವೇ?

ಕಪಟ ಜ್ಯೋತಿಷಿಗಳು ಹರಡುವ ಮೂಢನಂಬಿಕೆಗಳ ಕುರಿತು ಸ್ವಾಮಿ ವಿವೇಕಾನಂದರು ಹೀಗೆ ಹೇಳಿದ್ದರು:
 ಜ್ಯೋತಿಷ್ಯ ಮುಂತಾದುವನ್ನು ಹೇಳಿ ಉದರಪೋಷಣೆ ಮಾಡಿಕೊಳ್ಳುವವರ ಹತ್ತಿರ ಸಂಬಂಧವನ್ನು ಇಟ್ಟುಕೊಳ್ಳಕೂಡದು ಎನ್ನುವನು ಬುದ್ಧ. ಅವನಿಗೆ ಇದರ ರಹಸ್ಯ ಚೆನ್ನಾಗಿ ಗೊತ್ತಾಗಿರಬೇಕು. ತಾರೆಯೊಂದು ನನ್ನ ಜೀವನದ ಮೇಲೆ ತನ್ನ ಪ್ರಭಾವವನ್ನು ಬೀರಿ ವ್ಯಥೆಯನ್ನು ತಂದರೆ ನನ್ನ ಜೀವನ ಕುರುಡು ಕಾಸಿಗೂ ಯೋಗ್ಯವಲ್ಲ. ಜ್ಯೋತಿಷ್ಯ ಮುಂತಾದ ರಹಸ್ಯಗಳನ್ನೆಲ್ಲಾ ನೆಚ್ಚುವುದು ದೌರ್ಬಲ್ಯದ ಚಿಹ್ನೆ. ಈ ಸ್ವಭಾವ ನಿಮ್ಮ ಮನಸ್ಸಿನಲ್ಲಿ ಬಲವಾಗುತ್ತಿದ್ದರೆ ನೀವು ಒಬ್ಬ ವೈದ್ಯನನ್ನು ನೋಡಿ; ಒಳ್ಳೆಯ ಆಹಾರ ಮತ್ತು ವಿಶ್ರಾಂತಿಯನ್ನು ತೆಗೆದುಕೊಳ್ಳಿ..... ಜ್ಯೋತಿಷ್ಯ ಮುಂತಾದವುಗಳಲ್ಲೆಲ್ಲಾ ಸ್ವಲ್ಪ ಸತ್ಯಾಂಶವಿದ್ದರೂ ಅದನ್ನು ನಾವು ನಿರ್ಲಕ್ಷ್ಯದಿಂದ ನೋಡಬೇಕು..... ಮೂಢಭಾವನೆಗಳು ನಾಯಿಕೊಡೆಯಂತೆ ನಮ್ಮ ದೇಶದಲ್ಲಿ ಹಬ್ಬುತ್ತಿವೆ. ವಿಚಾರ ಮಾಡದ ಸ್ತ್ರೀಯರು ಇನ್ನೂ ಸ್ವಾತಂತ್ರ್ಯಕ್ಕೆ ಹೋರಾಡುತ್ತಿರುವರು. ಒಬ್ಬ ಹಣಕ್ಕಾಗಿ ಮತ್ತೊಬ್ಬರನ್ನು ಮೋಸ ಮಾಡಿದರೆ ಅವನನ್ನು ಮೋಸಗಾರ ಎನ್ನುವಿರಿ. ಇತರರನ್ನು ಅಧ್ಯಾತ್ಮಿಕ ದೃಷ್ಟಿಯಿಂದ ಪಾಪಿಗಳು ಎಂದು ಮೋಸಗೊಳಿಸುವವರು ಎಂತಹ ಪಾಪಿಗಳಿರಬೇಕು? ಇದು ಪರಮಪಾತಕ. ಸತ್ಯ ನಿಮ್ಮನ್ನು ಧೀರರನ್ನಾಗಿ ಮಾಡಬೇಕು; ಮೌಢ್ಯತೆಯಿಂದ ಪಾರಾಗುವಂತೆ ಮಾಡಬೇಕು. ಇದೇ ಸತ್ಯದ ಪರೀಕ್ಷೆ.... ಬೇಕಾದರೆ ತಾರೆಗಳನ್ನು ನಿಮ್ಮ ಬೊಗಸೆಯಿಂದ ಎತ್ತಿ ನುಂಗಿಹಾಕಬಹುದು. ನಿಮ್ಮ ನೈಜಸ್ವಭಾವ ಅಂತಹುದು. ಧೀರರಾಗಿ, ಎಲ್ಲಾ ವಿಧದ ಮೂಢನಂಬಿಕೆಗಳಿಂದ ಪಾರಾಗಿ, ಮುಕ್ತರಾಗಿ.
ಇವತ್ತು ನಿಮ್ಮ ಚಾನಲ್ ಮೂಲಕ ನರೇಂದ್ರ ಶರ್ಮ ಅವರು ಇಡೀ ಕರ್ನಾಟಕವನ್ನು ಮೌಢ್ಯದಲ್ಲಿ ಮುಳುಗಿಸಲು ಯತ್ನಿಸುತ್ತಿದ್ದಾರೆ. ಅಮೆರಿಕದ ಕೆಲವು ಸ್ವತಂತ್ರ ಕ್ರಿಶ್ಚಿಯನ್ ಗುಂಪುಗಳು ಹರಡುತ್ತಿರುವ ಪ್ರಳಯದ ಥಿಯರಿಗಳನ್ನೇ (http://www.coffetoday.com/the-doomsday-is-on-may-21-2011/907618/
http://www.ebiblefellowship.com/may21/
http://en.wikipedia.org/wiki/Harold_Camping
http://www.allvoices.com/contributed-news/8599025-worlds-doomsday-fixed-for-6-pm-on-21st-may-2011)  ಕದ್ದು ತಂದು, ಅವುಗಳನ್ನು ಜಗನ್ಮಾತೆಯ ಹೆಸರಿನಲ್ಲಿ ಬದಲಾಯಿಸಿ, ಈ ವರ್ಷವೇ ಪ್ರಳಯವಾಗುತ್ತದೆ ಎಂದು ಭೀತಿ ಸೃಷ್ಟಿಸುತ್ತಿದ್ದಾರೆ. ಪ್ರಳಯವನ್ನು ತಪ್ಪಿಸಲು ಸಾಧ್ಯವಿರುವುದು ನನಗೆ ಮಾತ್ರ, ಹೀಗಾಗಿ ನಾನು ಹೇಳಿದಂತೆ ಕೇಳಿ ಎಂದು ಜನರನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ.

ಹಿಂದೆ ಕಸ್ತೂರಿ ವಾಹಿನಿಯಲ್ಲಿದ್ದಾಗ ಸಹ ಲೋಕ ಕಲ್ಯಾಣ, ಇತ್ಯಾದಿ ಬೊಗಳೆ  ಮಾತುಗಳನ್ನು ಹೇಳಿ ಅರಮನೆ ಮೈದಾನದಲ್ಲಿ ದೊಡ್ಡ ಯಾಗವೊಂದನ್ನು ನಡೆಸಿದ ನರೇಂದ್ರ ಶರ್ಮ ಅವರು ಇದಕ್ಕಾಗಿ ಕೋಟ್ಯಂತರ ರೂಪಾಯಿ ಹಣವನ್ನು ಮುಗ್ಧ, ಅಮಾಯಕ ಜನಸಾಮಾನ್ಯರಿಂದ ಪಡೆದಿದ್ದರು. ಎಷ್ಟು ಹಣ ಪಡೆದಿದ್ದೀರಿ, ಸ್ವಲ್ಪ ಲೆಕ್ಕ ಕೊಡಿ ಎಂದು ಪತ್ರಕರ್ತರು ಪತ್ರಿಕಾಗೋಷ್ಠಿಯೊಂದರಲ್ಲಿ ಕೇಳಿದಾಗ ನರೇಂದ್ರ ಶರ್ಮ ಗೋಷ್ಠಿಯನ್ನೇ ನಿಲ್ಲಿಸಿ ಹೊರಟುಹೋಗಿದ್ದರು. ನರೇಂದ್ರ ಶರ್ಮ ಅವರು ಸಾರ್ವಜನಿಕರ ದೇಣಿಗೆ ಪಡೆಯಲೆಂದೇ ಎರಡು ಟ್ರಸ್ಟ್‌ಗಳನ್ನು ರಚಿಸಿಕೊಂಡಿದ್ದಾರೆ. ಈ ಟ್ರಸ್ಟ್‌ಗಳಿಗೂ ನಿಮ್ಮ ಚಾನಲ್‌ಗಳಿಗೂ ಯಾವ ಸಂಬಂಧವಿರುವುದಿಲ್ಲ. ಪ್ರಚಾರಕ್ಕೆ ನಿಮ್ಮ ಚಾನಲ್‌ಗಳು, ಹಣ ವಸೂಲಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವ ಟ್ರಸ್ಟ್‌ಗಳು! ಈ ದುರ್ ವ್ಯವಹಾರ ನಿಲ್ಲಿಸಲು ನೀವು ಹೇಳಿದರೆ, ಅವರು ಚಾನಲ್ ಬದಲಾಯಿಸುತ್ತಾರೆ.  ಬ್ರಹ್ಮಾಂಡ, ಭವ್ಯ ಬ್ರಹ್ಮಾಂಡ, ಬೃಹತ್ ಬ್ರಹ್ಮಾಂಡ ಆಯಿತು, ಇನ್ನು ಸೂಪರ್ ಬ್ರಹ್ಮಾಂಡ ಸೃಷ್ಟಿಯಾಗಬಹುದು ಅಷ್ಟೆ.

ಇಂಥ ಕಾರ್ಯಕ್ರಮ ಬೇಕೆ ಎಂದು ನೀವು ಯೋಚಿಸಲೇಬೇಕಾದ ಸಮಯವಿದು. ನಿಜ, ಈ ಕಾರ್ಯಕ್ರಮದಿಂದ ನಿಮಗೆ ಟಿಆರ್‌ಪಿ ಹೆಚ್ಚಾಗಿರಬಹುದು. ಆದರೆ ಜನ ಹೆಚ್ಚು ನೋಡುತ್ತಾರೆ ಎಂಬ ಕಾರಣಕ್ಕೆ ಅದು ಶ್ರೇಷ್ಠವಾದ ಕಾರ್ಯಕ್ರಮ ಎಂದು ಭಾವಿಸುವುದು ಮೂರ್ಖತನ. ಬೀದಿಯಲ್ಲಿ ಒಬ್ಬ ಹುಚ್ಚ ವಿಚಿತ್ರವಾಗಿ ಮಾತನಾಡುತ್ತ, ಬಟ್ಟೆ ಬಿಚ್ಚಿಕೊಂಡು ಓಡಾಡುತ್ತಿದ್ದರೆ ಆತನನ್ನು ಎಲ್ಲರೂ ನೋಡುತ್ತಾರೆ. ಮಾಮೂಲಿಯಂತೆ ಓಡಾಡುವ ನಮ್ಮ, ನಿಮ್ಮನ್ನು ಯಾರೂ ಗಮನಿಸುವುದಿಲ್ಲ. ಎಲ್ಲರೂ ನೋಡುತ್ತಾರೆ ಅನ್ನುವ ಕಾರಣಕ್ಕೆ ಬೆತ್ತಲೆ ಹುಚ್ಚನನ್ನು ಪ್ರೋತ್ಸಾಹಿಸುವುದು ಸರಿಯೇ? ಬೆತ್ತಲೆ ಓಡಾಡುವ ಹುಚ್ಚನಿಗೆ ಬಟ್ಟೆ ಕೊಡಿಸಿ, ಯಾವುದಾದರೂ ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಬೇಕೇ ಹೊರತು, ಹುಚ್ಚನೇ ಶ್ರೇಷ್ಠ ಎಂದು ಭಾವಿಸಬೇಕಾಗಿಲ್ಲ. ಒಬ್ಬ ಹುಚ್ಚನನ್ನು ಸಹಿಸಿಕೊಂಡ ಪರಿಣಾಮ ಈಗ ಬೀದಿ ತುಂಬ ಹುಚ್ಚರು ಸೇರಿಬಿಡುತ್ತಾರೆ. ಆ ಅಪಾಯವನ್ನೂ ನಾವು ಎದುರಿಸುತ್ತಿದ್ದೇವೆ.

ಇದೆಲ್ಲವನ್ನೂ ಗಮನಿಸಿ ತಾವು ದಯಮಾಡಿ ನರೇಂದ್ರ ಶರ್ಮ ಅವರ ಬ್ರಹತ್ ಬ್ರಹ್ಮಾಂಡ ಕಾರ್ಯಕ್ರಮವನ್ನು ಈಗಿಂದೀಗಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸುತ್ತೇವೆ. ಈ ಕಾರ್ಯಕ್ರಮ ಅನೈತಿಕ, ಅಪ್ರಜಾಸತ್ತಾತ್ಮಕ, ಮಾನವ ವಿರೋಧಿಯಾಗಿದೆ.

ಇದನ್ನು ನಾವು ನಿಮ್ಮ ಬೇಡಿಕೆ ಎಂದು ಹೇಳುತ್ತಿಲ್ಲ, ಆಗ್ರಹ ಎಂದೇ ಹೇಳುತ್ತಿದ್ದೇವೆ. ಯಾಕೆಂದರೆ ಇದು ಕಾನೂನು ಪ್ರಕಾರವೂ ಅಪರಾಧ. ನೀವು ಹಾಗು ನರೇಂದ್ರ ಶರ್ಮ ಸರ್ಕಾರ ರಚಿಸಿರುವ ನಿಯಮಾವಳಿಗಳನ್ನು ಗಾಳಿಗೆ ತೂರಿರುವುದು ಸ್ಪಷ್ಟ.

ನಿಮಗೆ ಚೆನ್ನಾಗಿ ಗೊತ್ತಿದೆ. ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಇಲಾಖೆ ಸಿದ್ಧಪಡಿಸಿರುವ ಮಾರ್ಗಸೂಚಿಗಳನ್ನು ನೀವು ತಪ್ಪದೇ ಪಾಲಿಸಬೇಕು. ಮಾರ್ಗಸೂಚಿಗಳನ್ನು ಅಲಕ್ಷ್ಯ ಮಾಡಿದ ಎಂಟಿವಿ, ಟಿವಿ೫ ಮುಂತಾದ ಚಾನಲ್‌ಗಳನ್ನು ಶಿಕ್ಷಿಸಲಾಗಿರುವ ಉದಾಹರಣೆಗಳೂ ನಮ್ಮ ಮುಂದಿವೆ. ಟಿವಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳು ಒಟ್ಟು ೧೩ ವಿವಿಧ ಕಾಯ್ದೆಗಳ ವ್ಯಾಪ್ತಿಗೆ ಒಳಪಡುತ್ತವೆ. ಹೀಗಾಗಿ ತಮಗೆ ಕಾನೂನಿನ ಹೊಣೆಗಾರಿಕೆಯೂ ಇದೆ. ಅವುಗಳನ್ನು ನಿಮಗೆ ನೆನಪಿಸಲು ಯತ್ನಿಸುತ್ತೇವೆ.

ಕಾಯ್ದೆಗಳು ಹೀಗಿವೆ.

1. Cable Television Network (Regulation) Act, 1995 and Certification Rules there under.
2. Drugs and Cosmetics Act, 1940.
3. Emblems and Names (Prevention of Improper Use) Act, 1950.
4. Drugs (Control) Act 1950.
5. Drugs and Magic Remedies (Objectionable Advertisements) Act, 1954.
6. Prevention of Food & Adulteration Act, 1954.
7. Prize Competitions Act, 1955.
8. Indecent Representation of Women (Prohibition) Act, 1986.
9. Trade and Merchandise Marks, Act 1999.
10. Copyright Act, 1957.
11. Cigarette and other Tobacco Products Act 2003.
12. Consumer Protection Act, 1986.
13. The Prevention of Cruelty to Animals Act, 1960


ಪ್ರಸಾರ ವೇಳೆ ಕಾನೂನು ಉಲ್ಲಂಘನೆಯನ್ನು ಮೂರು ಹಂತದಲ್ಲಿ ವಿಚಾರಣೆಗೆ ಒಳಪಡಿಸಬಹುದು. ಮೂರನೆ ಹಂತದಲ್ಲಿ ಸರಕಾರ ನೇಮಿಸಿದ ಸಮಿತಿ ಚಾನೆಲ್ ಮುಖ್ಯಸ್ಥ ತಪ್ಪಿತಸ್ಥ ಎಂದು ಕಂಡುಬಂದರೆ, ಪ್ರಸ್ತುತ ಕಾರ್ಯಕ್ರಮವನ್ನು ಪ್ರಸರಣ ಮಾಡದಂತೆ ನಿರ್ದೇಶಿಸಬಹುದು, ಕ್ಷಮಾಪಣೆಯನ್ನು ಬಿತ್ತರಿಸುವಂತೆ ಹೇಳಬಹುದು ಹಾಗೂ ದಂಡ ವಿದಿಸಬಹುದು. ಈ ಪ್ರಕ್ರಿಯೆಗೆ ದೂರು ದಾಖಲಿಸುವುದು ಮುಖ್ಯ.ಮಾರ್ಗಸೂಚಿ ಸ್ಪಷ್ಟ ಮಾತುಗಳಲ್ಲಿ ಕಾರ್ಯಕ್ರಮಗಳಲ್ಲಿ ಅವಹೇಳನಕಾರಿ ಭಾಷೆ, ಜಾತಿ ನಿಂದನೆ, ಮೂಢನಂಬಿಕೆ ವೈಭವೀಕರಣ ಹಾಗೂ ಜನರನ್ನು ದಿಕ್ಕುತಪ್ಪಿಸುವುದನ್ನು ಖಂಡಿಸುತ್ತದೆ.

ಕಂಟೆಂಟ್ ಸರ್ಟಿಫಿಕೇಷನ್ ನಿಯಮಾವಳಿ ೨೦೦೮ ಪ್ರಕಾರ ಯಾವುದೇ ನಿರ್ದಿಷ್ಟ ಜಾತಿ, ಕೋಮು ಅಥವಾ ನಂಬಿಕೆ ವಿರುದ್ಧ ಮಾತನಾಡುವುದು ಅಪರಾಧ. ಜೊತೆಗೆ ಯಾವುದೇ ಒಂದು ಆಚರಣೆಯನ್ನು ಶ್ರೇಷ್ಠ ಅಥವಾ ಕನಿಷ್ಟ ಎಂದು ಬಿಂಬಿಸುವಂತಿಲ್ಲ. ಹಾಗೆಯೇ ಲಿಂಗ ಅಸಮಾನತೆಯನ್ನು ಹೇಳುವಂತಿಲ್ಲ.

ನಿಮ್ಮ ಬೃಹತ್ ಬ್ರಹ್ಮಾಂಡ ಕಾರ್ಯಕ್ರಮ ಈ ಎಲ್ಲ ಕಾಯ್ದೆಗಳನ್ನು ಉಲ್ಲಂಘಿಸಿರುವುದು ಸ್ಪಷ್ಟ. ಈ ಕಾರ್ಯಕ್ರಮ ಸ್ತ್ರೀಯರನ್ನು ಕೆಟ್ಟದಾಗಿ ಚಿತ್ರಿಸುತ್ತದೆ. ಹಜಾಮರನ್ನು ನೋಡಬಾರದು ಎನ್ನುವ ಮೂಲಕ ಅಸ್ಪೃಶ್ಯತೆಯನ್ನು ಪ್ರಚಾರ ಮಾಡುತ್ತಿದೆ. ಜನರಲ್ಲಿ ಪ್ರಳಯದ ಭೀತಿಯನ್ನು ಸೃಷ್ಟಿಸುತ್ತಿದೆ. ಮಾಂಸಾಹಾರಿಗಳನ್ನು ಈತ ಕೀಳಾಗಿ ನಿಂದಿಸುವ ಮೂಲಕ ಜನಾಂಗೀಯ ನಿಂದನೆಯನ್ನು ಈ ಕಾರ್ಯಕ್ರಮ ಪೋಷಿಸುತ್ತಿದೆ.

ಭಾರತದ ಸಂವಿಧಾನವು ಜನರಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಾಗಬೇಕು ಎನ್ನುತ್ತದೆ. ಆಧುನಿಕ ಕಾಲಘಟ್ಟದಲ್ಲಿ ನಾವು ಇನ್ನೂ ಕಂದಾಚಾರಗಳ ನರಕದಲ್ಲೇ ಕೊಳೆಯುತ್ತಿದ್ದೇವೆ. ಈ ಕೆಟ್ಟ ಬೆಳವಣಿಗೆಯನ್ನು ಟಿವಿ ಚಾನಲ್ ಗಳು ನಿರಂತರವಾಗಿ ಪೋಷಿಸುತ್ತಿವೆ. ಈ ನಿಟ್ಟಿನಲ್ಲಿ ನಿಮ್ಮ ಚಾನಲ್ ಸೇರಿದಂತೆ ಎಲ್ಲ ಚಾನಲ್ ಗಳು ಟಿಆರ್ಪಿ ಆಸೆಗೆ ಬಲಿಬೀಳದೆ ಕಾಲದ ಅಗತ್ಯಕ್ಕೆ ತಕ್ಕಂಥ, ಮನುಷ್ಯರನ್ನು ಎಲ್ಲ ಮೌಢ್ಯಗಳಿಂದ ಬಿಡುಗಡೆಗೊಳಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಅಗತ್ಯವಿದೆ.

ಈ ಕಾರ್ಯಕ್ರಮವನ್ನು ಕೂಡಲೇ ನಿಲ್ಲಿಸಬೇಕೆಂದು ಮತ್ತೊಮ್ಮೆ ಆಗ್ರಹಪಡಿಸುತ್ತೇವೆ. ಒಂದು ವೇಳೆ ನಿಲ್ಲಿಸದೇ ಹೋದಲ್ಲಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ದೂರು ಸಲ್ಲಿಸುವುದೂ ಸೇರಿದಂತೆ, ಪ್ರಜಾಸತ್ತಾತ್ಮಕ ಹೋರಾಟಗಳನ್ನು ನಡೆಸಬೇಕಾಗುತ್ತದೆ ಎಂದು ತಿಳಿಸಲು ವಿಷಾದಿಸುತ್ತೇವೆ.

ಧನ್ಯವಾದಗಳು.
 
http://www.facebook.com/?ref=home#!/home.php?sk=group_215654381781569&view=doc&id=216937311653276



ಓದುಗರಿಗೊಂದು ಮನವಿ: ದಯಮಾಡಿ ಈ ಪತ್ರದ ಧಾಟಿಯ ಪತ್ರಗಳನ್ನು ಅಥವಾ ಇದೇ ಪತ್ರವನ್ನು ನಿಮ್ಮ ಐಡಿಗಳಿಂದ  ಈ feedbackzeekannada@zeenetwork.com  ಇಮೇಲ್ ಅಥವಾ ಜೀ ಕನ್ನಡ, ನಂ.೩೯, ಯುನೈಟೆಡ್ ಮ್ಯಾನ್ಷನ್, ಮೂರನೇ ಮಹಡಿ, ಮಹಾತ್ಮಗಾಂಧಿ ರಸ್ತೆ, ಬೆಂಗಳೂರು-೧ ಈ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕಾಗಿ ವಿನಂತಿ. ಸಾಧ್ಯವಾಗುವುದಾದರೆ ಈ ಅಭಿಯಾನವನ್ನು ಬೆಂಬಲಿಸುವ ಬ್ಲಾಗರ್‌ಗಳು ಈ ಪತ್ರವನ್ನು ಯಥಾವತ್ತಾಗಿ ತಮ್ಮ ಬ್ಲಾಗ್‌ಗಳಲ್ಲಿ ಪ್ರಕಟಿಸಬೇಕೆಂದು ಕೋರುತ್ತೇವೆ. ಹಾಗೆಯೇ ಇದನ್ನು ಫೇಸ್‌ಬುಕ್ ಹಾಗು ಇತರ ಸೋಷಿಯಲ್ ನೆಟ್‌ವರ್ಕ್‌ಗಳಲ್ಲಿ ಶೇರ್ ಮಾಡಲು ವಿನಂತಿಸುತ್ತೇವೆ.

3 comments:

  1. Even me too hate that nerendra sharma, my mom was believing him blindly, i told her lot of time that he use vbad words and he is pure vegetarian na... then how come he know mutton chaps, chilly chicken, tandoori etc? once he said...' adna tinno badlu kakka tinni...' who given rights to him to talk like this? about us? always he use the word 'Parivarthane.... parivarthane...' i think he doesn't know the meaning of that word coz he use that word for evrything.
    I f**kingly HATE him

    ReplyDelete
  2. he is a dabba, loafer, kantri, kittodonu..... b...maga

    ReplyDelete
  3. Avna jathakane anamge gottilla, inna berobbara jathaka, bhavishya helthana he is not 420 sir he is not.... HE IS 420x420x420x420=Narendra Sharma..!!]

    -Jai Prakash
    goldendreams.123@gmail.com

    ReplyDelete