Friday, February 22, 2013

ಅರಣ್ಯಪರ್ವ: ೦೨. ಎರಡನೆಯ ಸಂಧಿ

ಸೂ: ಸಕಲ ಯದುಬಲ ಸಹಿತ ಭಕ್ತ -
ಪ್ರಕರ ಪಾಲಕನೊಲವಿನಲಿ ಕಾ
ಮ್ಯಕ ಮಹಾಕಾನನಕೆ ಬಿಜಯಂಗೈದನುಸುರಾರಿ

ಅರಸ ಕೇಳೈ ದ್ವಾರಕಾಪುರ
ವರಕೆ ಬಂದುದು ವಾರ್ತೆ ಪೀತಾಂ
ಬರನ ಬಹಳಾಸ್ಥಾನದಲಿ ವರ್ತಿಸಿದುದಡಿಗಡಿಗೆ
ಧರೆಸಹಿತ ನಿಜವಸ್ತು ವಾಹನ
ಪರಮವಿಭವವ ಬಿಸುಟು ಭಾರಿಯ
ಪರಿಭವದಿ ನಟ್ಟಡವಿಯೊಕ್ಕರು ಪಾಂಡುಸುತರೆಂದು ೧

ಕೇಳಿ ತಲೆದೂಗಿದನು ಮೂಗಿನ
ಮೇಲುವೆರಳಿನ ಹೊತ್ತ ದುಗುಡದ
ತೂಳಿದಬ್ಬೆಯ ನಟ್ಟನೋಟದ ನೆಗ್ಗಿದುತ್ಸವದ
ಹೂಳಿದೂಹೆಯ ಹಿಳಿದ ನೆಗಹಿನ
ಹೇಳಲರಿದೆನೆ ಹುದಿದ ಭಾವದ
ಲಾಲಿಸಿದನುಸುರಾರಿ ದೂತವ್ರಜದ ಬಿನ್ನಪವ ೨

ಅಕಟ ಕಪಟ ದ್ಯೂತದಲಿ ನೃಪ
ಮುಕುರನುನ್ನತಿ ಮುರಿದುದೇ ಕೌ
ಳಿಕದಲೀ ಕೌರವರು ಕೊಂಡರೆ ಧರ್ಮಜನ ನೆಲನ
ಅಕುಟಿಲರಿಗೇಕಿದು ನಿರಾಬಾ
ಧಕರಿಗೇಕಿದು ಸಕಲ ಸುಜನ
ಪ್ರಕರ ವಂದ್ಯರಿಗೇಕೆನುತ್ತಸುರಾರಿ ಚಿಂತಿಸಿದ ೩

ಹಿರಿದು ಹರಿ ಚಿಂತಿಸಿದನೀ ವ್ಯತಿ
ಕರವನರಿಯದ ಮುಗುದರಿದನಾ
ರರಿವರೈ ವಿಶ್ವಂಭರಾ ಭಾರಾಪನೋದನಕೆ
ಧರಣಿಯಲಿ ಮೈಗೊಂಡು ದೈತ್ಯರ
ನೊರಸಿದನು ಬಳಿಕುಳಿದ ಪಾಂಡವ
ಕುರುನೃಪರ ಕದಡಿಸಿದನೆಲೆ ಭೂಪಾಲ ಕೇಳೆಂದ ೪

ಏನನೆಂಬೆನು ಜೀಯ ಕಡು ದು
ಮ್ಮಾನದಲಿ ಹೊರವಂಟು ಬಂದನು
ದಾನವಾಂತಕನೈದಿದವು ದಂಡಿಗೆಗಳರಸಿಯರ
ಆ ನಿಖಿಳ ನೃಪವರ್ಗ ಯಾದವ
ಸೇನೆ ಕವಿದುದು ಪಾಂಡುಪುತ್ರರ
ಕಾನನವ ಕರುಣಾಳು ಹೊಕ್ಕನು ಹಲವು ಪಯಣದಲಿ ೫

ಕೇಳಿದಾಗಳೆ ಬಂದರಾ ಪಾಂ
ಚಾಲ ಕೇಕಯ ಧೃಷ್ಟಕೇತು ನೃ
ಪಾಲ ಕುಂತೀಭೋಜ ಸೃಂಜಯ ಸೋಮಕಾದಿಗಳು
ಮೇಲೆ ಮೇಲೀ ನಾಲ್ಕು ದಿನದಲಿ
ಮೂಲೆಯರಸುಗಳಿವರ ಕಂಡುಪ
ಲಾಲಿಸಲು ಬರುತಿರ್ದರಾ ಕಾಮ್ಯಕ ವನಾಂತರಕೆ ೬

ಇವರು ಬಂದರು ನಿಖಿಳ ಭೂಸುರ
ನಿವಹ ಸಹಿತಿದಿರಾಗಿ ವರ ಬಾಂ
ಧವರೊಳಭಿವಂದ್ಯರಿಗೆ ತತ್ಸಮರಿಗೆ ಕನಿಷ್ಠರಿಗೆ
ಅವರಿಗವರವರುಚಿತ ಸತ್ಕಾ
ರವನು ಮಾಡಿ ಮುರಾರಿಯಂಘ್ರಿಯ
ನವಿರಳಾಶ್ರುಗಳಿಂದ ನಾದಿದರರಸ ಕೇಳೆಂದ ೭

ಬೇರೆ ಬೇರೈವರನು ತೆಗೆದು ಮು
ರಾರಿಯಪ್ಪಿದನಡಿಗಡಿಗೆ ದೃಗು
ವಾರಿಗಳನೊರಸಿದನು ಪೀತಾಂಬರದ ಸೆರಗಿನಲಿ
ಸಾರು ಸಾರೆನಲುಗ್ಗಡಣೆಯ ವಿ
ಕಾರವಿನ್ನೇಕೆನುತ ರಾಯನ
ನಾರಿ ಬಂದಳು ಕವಿದು ಬಿದ್ದಳು ಹರಿಯ ಚರಣದಲಿ ೮

ಒರಲಿದಳು ದೆಸೆಯೊಡನೊರಲೆ ಮಿಗೆ
ಹೊರಳಿದಳು ಹರಿ ಪಾದದಲಿ ಮೈ
ಮರೆದಳಂಗನೆ ತನುವ ಮುಸುಕಿದ ಕೇಶಪಾಶದಲಿ
ಕರಗಿದಳು ಕಂದಿದಳು ಮಮ್ಮಲ
ಮರುಗಿ ಕರುಗಂದಿದಳು ದೃಗು ಜಲ
ದೊರತೆಯುಕ್ಕಿತು ಮೇಲೆ ಮೇಲೆ ಮಹೀಶನಂಗನೆಗೆ ೯

ಹಿಂದೆ ಸೆಳೆಸೀರೆಯಲಕಟ ಗೋ
ವಿಂದ ರಕ್ಷಿಸನಾಥನಾಥ ಮು
ಕುಂದ ಕಾಯೈ ಕೃಷ್ಣ ರಕ್ಷಿಸು ಕರುಣಿಸಸುರಾರಿ
ಇಂದಿರಾಪತಿಯೇ ಯಶೋದಾ
ನಂದನನೆ ಕಾರುಣ್ಯನಿಧಿ ಸಲ
ಹೆಂದರುಳುಹಿದ ದೈವ ನೀ ಮೈದೋರಿದೈ ತನಗೆ ೧೦

ಶ್ರುತಿಗಳಿಗೆ ಮೈದೋರೆ ಸುಪತಿ
ವ್ರತೆಯರಿಗೆ ಗೋಚರಿಸೆ ಯತಿ ಸಂ
ತತಿಯ ನಿರ್ಮಳ ಸಾರ ಸಮ್ಯಜ್ಞಾನ ದೀಧಿತಿಗೆ
ಮತಿಗೊಡದ ಮಹಿಮಾಂಬುನಿಧಿಯೆನ
ಗತಿಶಯವನೇ ಮಾಡಿ ಲಜ್ಜಾ
ಸ್ಥಿತಿಯನುಳುಹಿದ ದೈವ ನೀ ಮೈದೋರಿದೈ ತನಗೆ ೧೧

ಪೆಸರುಗೊಂಡರೆ ಹಿಂದೆ ಬಂದು
ಬ್ಬಸದ ಭಾರ ವ್ಯಸನವನು ಹಿಂ
ಗಿಸಿದೆ ಸಾಕ್ಷಾದ್ದೃಷ್ಟ ದರುಶನವೇನನಿತ್ತಪುದೊ
ಹೆಸರುಗೊಳಲರಿಯದೆ ಮನೋವಾ
ಗ್ವಿಸರ ಮರಳಿದ ತರ್ಕ ನಿಗಮ
ಪ್ರಸರಣದ ಪರದೈವ ನೀ ಮೈದೋರಿದೈ ತನಗೆ ೧೨

ಪತಿಗಳಿವರಂಜಿದರು ಧರ್ಮ
ಸ್ಥಿತಿಯನರಿದವರಳುಕಿದರು ತ
ತ್ಪಿತೃ ಪಿತಾಮಹ ಗುರುಗಳಡಗಿದರವನಿಯಲಿ ಬಗಿದು
ಗತಿವಿಹೀನೆಗೆ ಕೃಷ್ಣ ನೀನೇ
ಗತಿಯೆನುತ ಬಾಯ್ಬಿಡಲು ಲಜ್ಜಾ
ಸ್ಥಿತಿಯನುಳುಹಿದ ದೈವ ನೀ ಮೈದೋರಿದೈ ತನಗೆ ೧೩

ದಾನ ಯಜ್ಞ ತಪೋವ್ರತಾನು
ಷ್ಠಾನ ನಿಷ್ಠರು ಕಾಣರಷ್ಟ ವಿ
ಧಾನ ಯೋಗದ ಸಿದ್ಧರರಿಯರು ನಿನ್ನ ಸುಳಿವುಗಳ
ಜ್ಞಾನಮಧ್ಯ ತ್ರಿಪುಟಿಯನು ಸಂ
ಧಾನ ರಹಿತ ಜ್ಞಪ್ತಿರೂಪನು
ತಾನೆನಿಪ ಪರಬೊಮ್ಮ ನೀ ಮೈದೋರಿದೈ ತನಗೆ ೧೪

ಕಾಯಿದೈ ಪ್ರಹ್ಲಾದ ಮಾರ್ಕಂ
ಡೇಯ ವನಗಜವಂಬರೀಷನ
ಕಾಯಿದೈ ಕಾರುಣ್ಯದಲಿ ಪಾತಕಿಯಜಾಮಿಳನ
ಕಾಯಿದೈ ಗೋವಿಂದಯೆನೆ ತ
ನ್ನಾಯತಿಕೆಯಭಿಮಾನವನು ನೀ
ಕಾಯಿದೈ ಹರಿಯೆನುತ ಪದದಲಿ ಹೊರಳಿದಳು ತರಳೆ ೧೫

ಏಳು ತಾಯೆ ಸರೋಜಮುಖಿ ಪಾಂ
ಚಾಲೆ ನೊಂದೌ ತಂಗಿಯೆನುತ ಕೃ
ಪಾಳು ಕಂಬನಿದೊಡೆದು ಕೊಡಹಿದನವಯವದ ರಜವ
ಮೇಲು ಮುಚ್ಚಳ ತೆರೆದ ತನುವಿನ
ಹೇಳಿಗೆಯ ಶೋಕಾಹಿಯಂತಿರೆ
ಲೋಲಲೋಚನೆಯಳಲು ಮಿಗೆ ಹೆಕ್ಕಳಿಸಿತಡಿಗಡಿಗೆ ೧೬

ಆ ಸಕಲ ಪರಿವಾರವಾ ಧರ
ಣೀಶರಾ ಮುನಿ ನಿಕರವಾ ಜನ
ವಾ ಸತೀ ನಿಕುರುಂಬವಾ ಗಜ ಘೋಟಕ ವ್ರಾತ
ಆ ಸರೋಜಾನನೆಯ ಬಹಳ
ಕ್ಲೇಶಗಳ ಕಂಡಕ್ಷಿಜಲ ವಾ
ರಾಸಿಯಲಿ ತೇಕಾಡುತಿರ್ದುದು ರಾಯ ಕೇಳೆಂದ ೧೭

ಮುಡಿಯ ಸಂವರಿಸಬಲೆ ಸೀರೆಯ
ನುಡು ನವಾಂಬರವಿದೆ ವಿರೋಧವ
ಬಿಡು ಸುಯೋಧನ ರಾಜಸಂತತಿಯುರಿದುದಿನ್ನೇನು
ಕೆಡಿಸಿಕೊಂಡರು ನಾಯ್ಗಳಿನ್ನದ
ನುಡಿದು ಫಲವೇನಕಟ ಕೈಕೊಂ
ಡಡವಿಯನುಭವ ಸವೆಯೆ ಸೈರಿಪುದೆಂದನಸುರಾರಿ ೧೮

ತುರುಬು ಕಟ್ಟುವ ಹದನ ನಿಮ್ಮಡಿ
ಯರಿಯದೆಂಬೆನೆ ಸಕಲ ಸಚರಾ
ಚರದ ಚೇತನರೂಪ ದೇಹಿ ನಿಕಾಯ ಕೃತಸಾಕ್ಷಿ
ತೈದು ದುಶ್ಯಾಸನನ ವಕ್ಷದೊ
ಳೊರೆವ ರಕುತದೊಳದ್ದಿ ಕಟ್ಟುವ
ದುರುಬನರಿಯಾ ಕೃಷ್ಣಯೆಂದಳು ಕಮಲಮುಖಿ ನಗುತ ೧೯

ಐಸಲೇ ದುರ್ಯೋಧನಾದಿಗ
ಳೇಸರವದಿರು ಭೀಮ ಪಾರ್ಥರ
ಬೀಸರಕೆ ಬಲುಗೈಯೆ ಬರ್ಹಿರ್ಮುಖರ ಭಾರವಣೆ
ದೂಸಕನ ರಕ್ತದಲಿ ನಿನ್ನಯ
ಕೇಶವನು ಕಟ್ಟಿಸುವೆ ನಿನ್ನಯ
ಭಾಷೆ ತನ್ನದು ತಾಯೆ ತವಕಿಸಬೇಡ ನೀನೆಂದ ೨೦

ವರ ತಪಸ್ವಿನಿ ನೀನು ನಿನ್ನನು
ಕೆರಳಿಚಿದರೇ ಕುನ್ನಿಗಳು ಮಿಗೆ
ಭರತಸಂತತಿ ಫಲಿತ ಕದಳಿಯ ತೆರದೊಳಾಯಿತಲ
ಕುರುಡನರಿಯದೆ ಹೋದರೆಯು ಕಂ
ಗುರುಡಾದರೆ ಭೀಷ್ಮ ವಿದುರಾ
ದ್ಯರು ಮಹಾದೇವೆನುತ ಮುರರಿಪು ತೂಗಿದನು ಶಿರವ ೨೧

ಶಕುನಿ ಕಲಿಸಿದ ಕಪಟವೇ ಕೌ
ಳಿಕದ ಜೂಜಿದು ನಿಮ್ಮನೀ ಕಾ
ಮ್ಯಕಕೆ ತಂದುದು ಜೂಜಿನಲಿ ತಾನಿಲ್ಲಲೇಯೆನಲು
ಸಕಲ ಜೀವರ ಕರ್ಣಸಾಕ್ಷಿ
ಪ್ರಕರ ಚೈತನ್ಯ ಸ್ವರೂಪಾ
ತ್ಮಕನು ನೀನಲ್ಲಿಲ್ಲ ಹುಸಿಯಲ್ಲೆಂದಳಿಂದುಮುಖಿ ೨೨

ದೇವಿ ತಾನಿದನರಿದೊಡಾ ವಸು
ದೇವನಾಣೆ ಮಹಾದ್ಭುತವನದ
ನೇವೊಗಳ್ವೆನು ಯದುನೃಪಾಲ ವಿಪತ್ಪರಂಪರೆಯ
ನೀವು ಮಾಡಿದ ಯಜ್ಞ ಮುಖದ ವ
ಳಾವಳಿಯೊಳಾವಿರಲು ಮುತ್ತಿತು
ದೇವರಿಪುಬಲ ನಿಕರವಸ್ಮದ್ದ್ವಾರಕಾಪುರಿಯ ೨೩

ಲಗ್ಗೆಗಳುಕುವುದಲ್ಲಲೇ ಬಲು
ದುರ್ಗಮದು ದುರ್ಭೇದವವರೊಳ
ಗಗ್ಗಳೆಯರಿದ್ದುದು ಹಲಾಯುಧ ಮನ್ಮಥಾದಿಗಳು
ಬಗ್ಗಿ ಕವಿವ ಕಠೋರ ದೈತ್ಯರ
ನುಗ್ಗುನುರಿ ಮಾಡಿದರು ಹರಣದ
ಸುಗ್ಗಿ ಮೆರೆದುದು ಮಾರ್ಬಲದೊಳಬುಜಾಕ್ಷಿ ಕೇಳೆಂದ ೨೪

ಅಳುಕಿ ಮುತ್ತಿಗೆದೆಗೆದು ಸಾಲ್ವನ
ದಳ ಮುರಿದು ನಿಜಪುರಕೆ ಹಾಯ್ವುದು
ಗೆಲವು ಸಾತ್ಯಕಿ ರಾಮಕಾಮಾದಿಗಳ ವಶವಾಯ್ತು
ಬಳಿಕ ನಿಮ್ಮಯ ರಾಜಸೂಯಕೆ
ಕಳಶವಿಟ್ಟು ಮದೀಯ ನಗರಿಯ
ಕಳವಳವ ಸಂತೈಸಿ ನಡೆದೆವು ಸಾಲ್ವ ಪಟ್ಟಣಕೆ ೨೫

ಏನನೆಂಬೆನು ಸಾಲ್ವಪುರದ ನ
ವೀನ ಮಾಯಾರಚನೆಯನು ನಮ
ಗಾನಲಸದಳವುಳಿದ ಗೀರ್ವಾಣರಿಗೆ ಗೋಚರವೆ
ದಾನವನ ಮಾಯಾಪುರದ ಸಂ
ಸ್ಥಾನ ವರ್ಮವನರಿದು ಶರ ಸಂ
ಧಾನದಲಿ ಸಂಹರಿಸಿದೆವು ಸಾಲ್ವಾದಿ ರಿಪುಭಟರ ೨೬

ಅತ್ತಲಾ ಕೋಳಾಹಳದಲಿರ
ಲಿತ್ತಲಾದುದು ಜೂಜು ನಿಮ್ಮ ವಿ
ಪತ್ತು ಕಂಡುದು ತೆರಹ ತಪ್ಪಿಸಿ ನಮ್ಮ ಸುಳಿವುಗಳ
ಇತ್ತಲಾವಿರೆ ಮೇಣು ದೋರಕಿ
ಯತ್ತಲಿರೆ ನೀವಡವಿವೊಕ್ಕರೆ
ಹೆತ್ತಳೋ ದೇವಕಿ ಮಗನನೆಂದನು ಮುರಧ್ವಂಸಿ ೨೭

ಮಗನ ಕರೆದರೆ ಯಮನ ದೂತರ
ತಗುಳುವಂದು ಸಮೀಪವರ್ತಿಯೆ
ನಗಧರ ಶ್ರೀಕಾಂತ ಸಲಹೆನೆ ಮುನಿ ಕುಮಾರಕನ
ಉಗುಳಿಚಿದೆಲಾ ಮೃತ್ಯುವಿನ ತಾ
ಳಿಗೆಯೊಳಂದು ಸಮೀಪವರ್ತಿಯೆ
ಜಗದುದರ ನೀ ಜಾಣನಹೆಯೆಂದಳು ಸರೋಜಮುಖಿ ೨೯

ಆಯಿತೇಳೌ ತಂಗಿ ನೀ ಪಿರಿ
ದಾಯಸವನನುಭವಿಸಲುದಿಸಿದೆ
ರಾಯನಾಡಿದ ಭಾಷೆ ಸಲಲಿ ವನಪ್ರವಾಸದಲಿ
ವಾಯುತನುಜನ ಕೈಯಲೇ ನಿ (ಪಾ: ನೀ)
ನ್ನಾಯತಿಕೆಯಹುದಾ ಪ್ರತಿಜ್ಞೆಗೆ
ತಾಯೆ ತಾ ಹೊಣೆಯೆಂದು ಕೊಟ್ಟನು ಸತಿಗೆ ನಂಬುಗೆಯ ೩೦

ಸಂತವಿಟ್ಟನು ಬೇರೆ ಬೇರೆ ಕೃ
ತಾಂತಸುತ ಭೀಮಾದಿಗಳ ಮುನಿ
ಸಂತತಿಯ ಮನ್ನಿಸಿದನವರವರುಚಿತ ವೃತ್ತಿಯಲಿ
ಎಂತು ಹದಿಮೂರಬುದವೀ ನೃಪ
ಸಂತತಿಗೆ ಸೌಹಾರ್ದವಕಟ ವ
ನಾಂತರದೊಳೆಂದಸುರರಿಪು ನುಡಿದನು ಯುಧಿಷ್ಠಿರಗೆ ೩೧

ಕಳುಹುವುದು ಸೌಭದ್ರೆಯನು ನಿಜ
ಲಲನೆಯರನವರವರ ತಾಯ್ವನೆ
ಗಳಿಗೆ ಬೀಳ್ಕೊಡು ನಿಮ್ಮ ಪಂಚದ್ರೌಪದೀಸುತರ
ಹಳುವ ದಾಟಲಿ ದ್ರುಪದ ನಂದನೆ
ಯಳಲ ಶಿಖಿಗಿಂಧನವಲೇ ಕುರು
ಕುಲದ ಕರಡದ ಬಣಬೆ ಕಾದುರುಹುವುದು ಕೇಳೆಂದ ೩೨

ಎಂದು ಕಳುಹಿ ಸುಭದ್ರೆಯನು ನರ
ನಂದನನ ಬೀಳ್ಕೊಡಿಸಿದನು ನೃಪ
ನಂದನರ ಕಳುಹಿಸಿದನಾ (ಪಾ: ಕಳುಹಿದನಾ) ಪಾಂಚಾಲ ನೃಪನೊಡನೆ
ಇಂದುವದನೆಯ ಸಂತವಿಟ್ಟು ಮು
ಕುಂದ ರಥವೇರಿದನು ಕುಂತೀ
ನಂದನರು ಕಳುಹುತ್ತ ಬಂದರು ಕಮಲಲೋಚನನ ೩೩

ಬೀಳುಗೊಂಡರು ಕೃಷ್ಣನನು ಪಾಂ
ಚಾಲಪತಿಯನು ಪಂಚ ಕೇಕಯ
ಚೋಳ ಕೇರಳ ಪಾಂಡ್ಯ ಕುಂತೀಭೋಜ ನಂದನರ
ಬೀಳುಕೊಟ್ಟರು ಧೃಷ್ಟಕೇತು ನೃ
ಪಾಲ ಮೊದಲಾದಖಿಳ ಧರಣೀ
ಪಾಲಕರು ದುಗುಡದಲಿ ಹೊಕ್ಕರು ತಮ್ಮ ನಗರಿಗಳ ೩೪

ಸಂತವಿಸಿ ಪಾಂಡುವರನಾ ಮುನಿ
ಸಂತತಿಯ ಮನ್ನಿಸಿ ಮಹೀಭಾ
ರಾಂತರವ ನಿಶ್ಚಯಿಸಿ ಭಾರತ ಪಾರಿಶೇಷಕವ
ಅಂತಕಾಂತಕ ನಲವು ಮಿಗೆ ಜಗ
ದಂತರಂಗಸ್ಥಾಯಿ ಲಕ್ಷ್ಮೀ
ಕಾಂತ ಬಿಜಯಂಗೈದು ಹೊಕ್ಕನು ದೋರಕಾಪುರಿಯ ೩೫





ಕೃಪೆ :  http://gaduginabharata.blogspot.in/
Contributors

ವಿರಾಟಪರ್ವ: ೦೧. ಒಂದನೆಯ ಸಂಧಿ

ಸೂ: ಕಾಯಿದರು ಸತ್ಯವನು ವನವಾ
ಸಾಯತವ ನೆರೆ ಗೆಲಿದು ಪಾಂಡವ
ರಾಯರೋಲೈಸಿದರು ಬಂದು ವಿರಾಟನಗರಿಯಲಿ

ಕೇಳು ಜನಮೇಜಯ ಧರಿತ್ರೀ
ಪಾಲ ಮುನಿಜನ ನೃಪಜನಂಗಳ
ಬೀಳುಗೊಟ್ಟನು ಭೂಮಿಪತಿ ಬಲವಂದು ಹುತವಹನ
ಮೇಲು ಶಕುನದ ಚಾರು ನಿನದವ
ನಾಲಿಸುತ ಸೋದರರು ಸಹಿತ ವ
ನಾಲಯವ ಹೊರವಂಟು ಸಾರಿದರೊಂದು ವಟಕುಜವ ೧

ಬಂದು ವಟಕುಜದಡಿಯಲನಿಬರು
ನಿಂದು ದುರುಪದಿ ಸಹಿತ ಬಳಲಿಕೆ
ಯಿಂದ ವಿಶ್ರಮಿಸಿದರು ಚಿಂತಿಸಿ ಧರ್ಮನಂದನನು
ಹಿಂದೆ ಹನ್ನೆರಡಬುದ ಸವೆದವು
ಮುಂದಣನುವಿಂಗೇನು ಗತಿ ಬಳಿ
ಕೊಂದು ವರುಷಜ್ಞಾತವಾಸಕ್ಕಾವ ಠಾವೆಂದ ೨

ಬಡಗಲವರದು ಮೂಡಣರಸುಗ
ಳೊಡೆ ಗೆಣೆಯರಾಗಿಹರು ತೆಂಕಣ
ಕಡೆಯವರು ಕಂಡಿಹರು ಕೆಲಬಲದವರು ಕೊಂಡೆಯರು
ಪಡುವಣವರತಿ ಕೃಶರು ನಾವಿ
ನ್ನಡಗಿರಲು ತೆರನಾವುದೆಂದೆನೆ
ನುಡಿದನರ್ಜುನ ದೇವನವನೀಪತಿಗೆ ವಿನಯದಲಿ ೩

ವಳಿತವನು ಹೊಕ್ಕಿರಿದು ಕೌರವ
ರೊಳಗೆ ಹಗೆಯಾಗಿಹನು ಕೀಚಕ
ಬಲ ವಿರಾಟನಿಗವನ ದೆಸೆಯಿಂ ಭಯವಿಹೀನವವದು
ಮುಳಿದು ಹೇಳಿಕೆಯಾದ ರವಿಸುತ
ಕಲಿ ತ್ರಿಗರ್ತಾದಿಗಳೆನಿಪ ಮಂ
ಡಳಿಕರನು ಕೈಕೊಳ್ಳದಾಳುವರವರು ಪಶ್ಚಿಮವ ೪

ನೃಪತಿ ನಿಶ್ಚೈಯಿಸಿದನು ಮತ್ಸ್ಯಾ
ಧಿಪನ ನಗರಿಯೊಳಲ್ಲಿ ಸೈರಿಸಿ
ಕೃಪಣತನದಲಿ ನೂಕಬೇಕಹುದು ನುಡಿದ ವತ್ಸರವ
ಗುಪಿತವೆಂತಳವಡುವುದಾಶ್ರಯ
ದಪದೆಸೆಯನೆಂತಾನುವಿರಿ ನಿ
ಷ್ಕೃಪೆಯೊಳೆಂತಾನೆಂಬೆನೆಂದನು ಧರ್ಮನಂದನನು ೫

ದೇವ ನಿಮ್ಮಯ ಮತವೆ ಮತವೆಮ
ಗಾವ ವೇಷದ ವಿವರ ನಿಮಗದ
ನೀವು ಬೆಸಸುವುದೆಂದು ಭೀಮಾರ್ಜುನರು ಬಿನ್ನವಿಸೆ
ನಾವು ಭೂಸುರವೇಷದಲಿ ಸಂ
ಭಾವಿತರು ಮತ್ತಲ್ಲಿ ಸನ್ಯಾ
ಸಾವಲಂಬನ ಕಂಕನೆಂಬಭಿಧಾನ ತನಗೆಂದ ೬

ವಲಲನೆಂಬಭಿಧಾನದಲಿ ನೃಪ
ನಿಳಯವನು ಸಾರುವೆನು ತಾನೆಂ
ದುಲಿಯೆ ಮಾರುತಿ ನುಡಿದ ವರ ನಾಟ್ಯವಿದ ವೇಷವನು
ಫಲುಗುಣನು ಹಯ ಗೋ ನಿವಾಸ
ಸ್ಥಳ ವಿಳಾಸಿತರೆನಲು ಯಮಳರು
ಲಲನೆ ಬಿನ್ನಹ ಮಾಡಿದಳು ಸೈರಂಧ್ರಿ ವೇಷವನು ೭

ತೊಳಲಿದಿರಿ ಹನ್ನೆರಡು ವರುಷವು
ಹಳುವದಲಿ ಸೊಂಪಡಗಿ ಪರರೊಡ
ನುಳಿಗೆಲಸದೋಲಗವಿದೆಂತೈ ಸಾರ್ವಭೌಮರಿಗೆ
ಬಳಲಿದಿರಿ ಹಿರಿದಾಗಿ ನಿಮ್ಮುವ
ನಳಲಿಸಿದೆನೆನ್ನಿಂದ ಪಾಪಿಗ
ಳೊಳರೆ ಭುವನದೊಳೆಂದು ಕುಂತೀಸೂನು ಬಿಸುಸುಯ್ದ ೮

ಒಡಲ ಬಳಿ ನೆಳಲಿಂಗೆ ಗತಿ ಬೇ
ರ್ಪಡಿಸಿಹುದೆ ಸುಖದುಃಖವಿವು ನಿ
ಮ್ಮಡಿಗಳಲಿ ತನು ನಾಲ್ಕರಲಿ ಜೀವಾತ್ಮ ನೀವೆಮಗೆ
ಅಡವಿಯೇ ಸಾಮ್ರಾಜ್ಯ ನಿಮ್ಮಡಿ
ಯೊಡನಿರಲು ನೀವಿಲ್ಲದಾ ಪುರ
ವಡವಿ ನಮಗಹುದೆಂದು ಬಿನ್ನವಿಸಿದರು ಭೂಪತಿಗೆ ೯

ತುಷ್ಟನಾದನು ನೃಪತಿ ಕೃತ ಪರಿ
ಶಿಷ್ಟಪಾಲನು ಜಗದೊಳತ್ಯು
ತ್ಕೃಷ್ಟ ಚರಿತನು ತೆಂಕ ದೆಸೆಗೆ ಸಹೋದರರು ಸಹಿತ
ದುಷ್ಟ ಮೃಗಗಳ ಬೇಂಟೆಯಾಡಿ ವ
ಸಿಷ್ಠ ಮುನಿಯಾಶ್ರಮದ ಸುಜನರ
ರಿಷ್ಟವನು ಪರಿಹರಿಸುತೈತಂದನು ಸರಾಗದಲಿ ೧೦

ಕಾಳಿ ಪರಮ ಕರಾಳಿ ಸುರಮುನಿ
ಮೌಳಿಮಂಡಿತ ಚರಣಿ ಖಳ ದನು
ಜಾಳಿ ಮರ್ದಿನಿ ಘನ ಕಪರ್ದಿ ವರಾರ್ಧ ತನುಯುತಳೆ
ಶೂಲ ಪರಶು ಪರಶ್ವಧಾದಿಗ
ಳಾಳುತೊಪ್ಪುವ ಕರಚತುಷ್ಟಯೆ
ಪಾಲಿಸೆಮ್ಮನೆನುತ್ತ ದುರ್ಗೆಯನಂದು ನುತಿಸಿದರು ೧೧

ಬಂದು ಮತ್ಸ್ಯ ಪುರೋಪಕಂಠದ
ನಂದನದ ಕೆಲಕಡೆಯಲನಿಬರು
ನಿಂದು ನಾಲಕು ದೆಸೆಯನೀಕ್ಷಿಸಿ ನಿಜನಿವಾಸದಲಿ
ತಂದು ಚರ್ಮದಲಖಿಳ ಕೈದುವ
ನೊಂದು ಹೆಣನಾಕಾರದಲಿ ಬಿಗಿ
ದೊಂದು ಬನ್ನಿಯ ಮರನ ತುದಿಯಲಿ ಕಟ್ಟಲೇರಿದರು ೧೨

ತೆಗೆಯದಿರಿ ನೀವೆಂದು ತುರುಗಾ
ಹಿಗಳನಂಜಿಸಿ ಧರ್ಮಸುತ ದೃಗು
ಯುಗವ ಮುಚ್ಚಿ ಸುರೇಂದ್ರ ಯಮ ವರುಣಾದಿಗಳಿಗೆರಗಿ
ವಿಗಡನೀ ಕಲಿಭೀಮನೀ ಕೈ
ದುಗಳನೀತಂಗೀಯದಿರಿ ಕೈ
ಮುಗಿದು ಬೇಡಿದನೆಂದು ಸುರರಿಗೆ ನುಡಿದನವನೀಶ ೧೩

ಈವುದಾ ಬೇಡಿದರೆ ಪಾರ್ಥಂ
ಗೀವುದೀಯಜ್ಞಾತ ವಾಸದೊ
ಳೀ ವಿಗಡ ಭೀಮಂಗೆ ಕೊಡದಿರಿಯೆನಲು ಖತಿಗೊಂಡ
ನೀವು ಕುಂತಿಯ ಮಕ್ಕಳಾದಿರಿ
ನಾವು ದುರ್ಯೋಧನನವರು ತ
ಪ್ಪಾವುದಿದಕೆಂದನಿಲಸುತನೌಡತ್ತಿ ಗರ್ಜಿಸಿದ ೧೪

ಸುರನಿಕರ ಕಾದಿರಲಿ ಮೇಣೀ
ಧರಣಿ ಕೊಡೆನೆಂದಿರಲಿ ಹಸ್ತಿನ
ಪುರಿಗೆ ಧಾಳಿಯನಿಡುವೆನಮರರ ಮೋರೆಗಳ ತಿವಿದು
ಉರುತರಾಸ್ತ್ರವನೊಯ್ವೆನೆಂದ
ಬ್ಬರಿಸಿ ಮಾರುತಿ ನುಡಿಯೆ ತಮ್ಮನ
ಬರಸೆಳೆದು ಬಿಗಿದಪ್ಪಿ ಮೈದಡವಿದನು ಭೂಪಾಲ ೧೫

ಅವಧಿಯೊಂದೇ ವರುಷವಿದರೊಳ
ಗೆವಗೆ ಸೈರಣೆಯುಂಟು ನೀ ಮುನಿ
ದವಗಡಿಸಿದೊಡೆ ಬಳಿಕ ಸೈರಿಸಲರಿಯೆ ಮನ ಮುಳಿದು
ಅವನಿಯಲಿ ಹನ್ನೆರಡು ವರುಷವು
ನವೆದುದುಂ ನಿಷ್ಫಲವಲಾ ಕೌ
ರವರಿಗತಿ ಲಾಗಹುದು ನೀನೇ ಬಲ್ಲೆ ಹೋಗೆಂದ ೧೬

ಹದುಳವಿಟ್ಟನು ಭೀಮನನು ನಿ
ರ್ಮದನು ಮತ್ಸ್ಯನ ಪುರಿಗೆ ಯತಿ ವೇ
ಷದಲಿ ಬಂದನು ಹೊನ್ನ ಸಾರಿಯ ಚೀಲ ಕಕ್ಷದಲಿ
ಇದಿರೊಳಾನತರಾಯ್ತು ಕಂಡವ
ರುದಿತ ತೇಜಃಪುಂಜದಲಿ ಸೊಂ
ಪೊದವಿ ಬರಲು ವಿರಾಟ ಕಾಣಿಸಿಕೊಂಡು ಬೆಸಗೊಂಡ ೧೭

ಇತ್ತ ಬಿಜಯಂಗೈಯಿ ಹಿರಿಯರಿ
ದೆತ್ತಣಿಂದೈತಂದಿರೈ ಅ
ತ್ಯುತ್ತಮದ ವೇಷದ ಮಹಾತ್ಮರ ಕಂಡು ಬದುಕಿದೆವು
ಇತ್ತಪೆವು ಬೇಡಿದುದ ನಾವೆನೆ
ಸುತ್ತಬಳಸೆವು ರಾಜಸೇವೆ ನಿ
ಮಿತ್ತ ಬಂದೆವು ಮುನ್ನಿನೋಲಗವಂತರಿಸಿತಾಗಿ ೧೮

ಕೆಟ್ಟುದಿಂದ್ರಪ್ರಸ್ಥ ಪಾಂಡವ
ರುಟ್ಟು ಹೋದರು ನಾರ ಸೀರೆಯ
ನಟ್ಟಡವಿ ಮನೆಯಾಯ್ತು ರಾಜಾನ್ವಯದ ರಾಯರಿಗೆ
ಬಿಟ್ಟರೆಮ್ಮನು ಜಠರಭರಣಕೆ
ನೆಟ್ಟನಾಶ್ರಯವಿಲ್ಲದಿರೆ ಕಂ
ಗೆಟ್ಟು ಬಂದೆವು ಕಂಕನೆಂಬಿಧಾನ ತನಗೆಂದ ೧೯

ಓಲಗಕೆ ಬಂದಖಿಳರಾಯರ
ಮೌಳಿಮೌಕ್ತಿಕಮಣಿಮಯೂಖ ನಿ
ವಾಳಿಯಲಿ ನೆರೆ ಮೆರೆವುದಾತನ ಪಾದಪದ್ಮಯುಗ
ಕಾಲವಾವನನಾವ ಪರಿಯಲಿ
ಕೀಳು ಮಾಡದು ಧರ್ಮಪುತ್ರನ
ನಾಳುಗೊಂಡನು ಮತ್ಸ್ಯನೆಲೆ ಜನಮೇಜಯ ಕ್ಷಿತಿಪ ೨೦

ಆದುದೈ ನಿರ್ವಾಹ ಕಂಕಂ
ಗಾದುದಾ ಮತ್ಸ್ಯೇಶನಿಂದ ವಿ
ವಾದವಿಲ್ಲದೆ ಸೇವೆ ನಿಜವಾದಂತೆಯಿರುತಿರಲು
ಹೋದವಿತ್ತಲು ಕೆಲವು ದಿನ ತನ
ಗಾದ ಸಾಹಾಯ್ಯದಲಿ ರಿಪುಬಲ
ಭೇದಿ ಮಾರುತಿ ಬಂದು ಕಂಡನು ಮತ್ಸ್ಯಭೂಪತಿಯ ೨೧

ಏನು ಪರಿಣತೆ ನಿನಗೆ ಬಾಣಸಿ
ಯಾನು ಭೀಮನ ಮನೆಯವನು ಮ
ತ್ತೇನು ಭುಜಬಲವರಿವೆನಗ್ಗದ ಮಲ್ಲವಿದ್ಯೆಯಲಿ
ನೀನಧಿಕನೆಂದಾ ಸಮೀರನ
ಸೂನುವನು ಮನ್ನಿಸಿದನಿತ್ತಲು
ಮಾನನಿಧಿ ಮರುದಿವಸ ಹೊಕ್ಕನು ಪಾರ್ಥನಾ ಹೊಳಲ ೨೨

ಸುರಪನರಸಿಯ ಶಾಪದಲಿ ಸಿತ
ತುರಗನರೆವೆಣ್ಣಾಗಿ ಮತ್ಸ್ಯೇ
ಶ್ವರನ ಮಗಳಿಗೆ ನಾಟ್ಯವಿದ್ಯಾಭ್ಯಾಸ ಸಂಗದಲಿ
ಇರಲು ಯಮಳರು ತುರಗ ಗೋವ್ರಜ
ಭರಣರಾದರು ಬಳಿಕ ಪಾಂಡವ
ರರಸಿ ಸಾರಿದಳೊಲವಿನಲಿ ವೈರಾಟ ಪಟ್ಟಣವ ೨೩

ತರಣಿಗಂಜಿದಡಿಂದು ತಲೆಗಾ
ಯ್ದಿರಿಸಿದನೊ ಮರೆಯಾಗಿ ತಿಮಿರದ
ಹೊರಳಿಗಳನೆನೆ ಮುಡಿಗೆ ಮೋಹಿದ ವೇಣಿವಲ್ಲರಿಯ
ಹಿರಿದು ಸೈರಿಸಲಾರನೆಂದೊಡ
ನಿರಿಸಿದನೊ ಕೈರವವನೆನಲೆಂ
ದರರೆ ಕಂಗಳ ಢಾಳವೊಪ್ಪಿರೆ ಬಂದಳಬುಜಮುಖಿ ೨೪

ಮೊಲೆಯ ಮೇಲುದ ಜಾರೆ ಜಾರಿದ
ರಳಿ ಮನರು ಕಂಗಳಿನ ಮಿಂಚಿನ
ಹಿಳುಕಿನೆಡೆ ನಡೆಗೆಟ್ಟು ನಿಂದರು ಚಿತ್ತವಿಹ್ವಲರು
ತೆಳುವಸರು ತಲೆದೋರೆ ತೋರಿದು
ದಲಗು ಮರು ಮೊನೆಯೆನುತ ವಿಟರಳ
ವಳಿಯೆ ನಡೆತರುತಿರ್ದಳಂಗನೆ ರಾಜವೀಧಿಯಲಿ ೨೫

ಎಲೆಲೆ ಮದನನ ಗಜವು ತೊತ್ತಳ
ದುಳಿದುದೋ ಕಾಮುಕರೆನೆನೆ ಗಾ
ವಳಿಯೊಳಗೆ ಗಾರಾಯ್ತು ಗರುವಿಕೆ ವಿಟ ವಿದೂಷಕರ
ಅಳುಕಿದರು ಮನುಮಥನ ಗರುಡಿಯ
ಬಲುವೆಗಾರರು ಬಂದಳಗ್ಗದ
ನಳಿನಮುಖಿ ಬಹುಜನದ ಮನಕಚ್ಚರಿಯನೊದವಿಸುತ ೨೬

ಜನದ ಜಾಣಕ್ಕಾಡಲಾ ಮೋ
ಹನ ಮಹಾಂಬುಧಿಯೊಳಗೆ ನೃಪನಂ
ಗನೆಯ ಭವನಕೆ ಬರಲು ಬೆರಗಾಯ್ತಖಿಳ ನಾರಿಯರು
ವನಿತೆ ಮಾನಿಸೆಯಲ್ಲ ಮನುಜರಿ
ಗಿನಿತು ರೂಪೆಲ್ಲಿಯದು ವಿಸ್ಮಯ
ವೆನುತ ಮನದೊಳಗಳುಕಿದರು ಮತ್ಸ್ಯೇಶನರಸಿಯರು ೨೭

ಬರವ ಕಂಡು ಸುದೇಷ್ಣೆ ಮನದಲಿ
ಹರುಷ ಮಿಗೆ ಹೊಂಗಿದಳು ಕರೆ ಕರೆ
ತರುಣಿಯಾರೆಂದಟ್ಟಿದಳು ಕೆಳದಿಯರನನಿಬರನು
ಸರಸಿಜಾಯತದಂದವನು ಮೋ
ಹರಿಸಿ ಮುಂಚುವ ಪರಿಮಳವನಂ
ದರಸಿ ಬೀರುತ ಬಂದು ಹೊಕ್ಕಳು ರಾಜಮಂದಿರವ ೨೮

ಕೆಳದಿಯರು ಕಾಣಿಸಿದರರಸನ
ಲಲನೆಯರು ಪರಿಯಂಕ ಪೀಠದ
ಕೆಲಕೆ ಕರೆದಳು ಕಮಲವದನೆಯನುಚಿತ ವಚನದಲಿ
ನಳಿನಮುಖಿ ನೀನಾರು ನಿನಗಾ
ರೊಳರು ರಮಣರು ಮಾಸಿಕೊಂಡಿಹ
ಮಲಿನ ವೃತ್ತಿಯಿದೇಕೆನುತ ಬೆಸಗೊಂಡಳಂಗನೆಯ ೨೯

ಅತುಳಬಲ ಗಂಧರ್ವರೈವರು
ಪತಿಗಳೆನಗುಂಟೆನ್ನ ಚಿತ್ತಕೆ
ಖತಿಯ ಮಾಡಿದರೊಂದು ವರುಷವು ಬಿಡುವೆನವರುಗಳ
ಸತತವಾ ಕುಂತೀಕುಮಾರರ
ಸತಿಯರೋಲೈಸಿದ್ದೆ ಬಳಿಕವ
ರತಿ ಗಹನವನನಿಷ್ಠರಾದರು ತನಗೆ ಬರವಾಯ್ತು ೩೦

ಏನ ಮಾಡಲು ಬಲ್ಲೆಯೆಂದರೆ
ಮಾನಿನಿಯ ಸಿರಿಮುಡಿಯ ಕಟ್ಟುವ
ಸೂನ ಮುಡಿಸುವ ವರ ಕಟಾಕ್ಷಕೆ ಕಾಡಿಗೆಯನಿಡುವ
ಏನ ಹೇಳಿದ ಮಾಡಬಲ್ಲೆನು
ಸಾನುರಾಗದೊಳೆಂದೆನಲು ವರ
ಮಾನಿನಿಯ ನಸುನಗುತ ನುಡಿಸಿಳಂದು ವಿನಯದಲಿ ೩೧

ಎನಲು ಮೆಚ್ಚಿದಳಾ ವಿರಾಟನ
ವನಿತೆ ವೀರರ ವಧುವನಾ ಸಖಿ
ಜನದೊಳಗೆ ನೇಮಿಸಿದಳಬನಿರಿಗಾಯ್ತು ನಿರ್ವಾಹ
ಮನದ ಢಗೆಯಡಗಿದವು ಮತ್ಸ್ಯೇ
ಶನ ಪುರಾಂತರದೊಳಗೆ ಮೈ ಮರೆ
ಸನುಪಮಿತ ಭುಜಸತ್ವರಿದ್ದರು ಭೂಪ ಕೇಳೆಂದ ೩೨

ಆ ಸುದೇಷ್ಣಾ ದೇವಿಯರ ನಿಡು
ಕೇಶವನು ಹಿಕ್ಕುವಳು ಮುದದಲಿ
ಸೂಸು ಮಲ್ಲಿಗೆಯರಳ ದೆಖ್ಖಾಳವನು ಮುಡಿಸುವಳು
ಆ ಸತಿಯ ಮನವೊಲಿದು ನಡೆವಳು
ಲೇಸು ಲೇಸೆಂದೆನಿಸಿ ಬಾಳುವ
ಭಾಷೆಯನು ಸಲಿಸುತ್ತಲಿರ್ದಳು ಪತಿಗಳಾಜ್ಞೆಯಲಿ ೩೩

ಜವನ ಮಗ ಸನ್ಯಾಸಿ ವೇಷದಿ
ಪವನಸುತ ಬಾಣಸಿನ ಮನೆಯಲಿ
ದಿವಿಜರಾಯನ ತನಯನಿರ್ದ ಶಿಖಂಡಿ ವೇಷದಲಿ
ಜವಳಿ ಮಕ್ಕಳು ತುರಗ ಗೋವ್ರಜ
ನಿವಹರಾದರು ಕಮಲಮುಖಿ ಕಾ
ಲವನು ಕಳೆದಳು ರಾಯನೊಲುಮೆಯ ಕೆಳದಿಯರ ಕೂಡ ೩೪





ಕೃಪೆ :  http://gaduginabharata.blogspot.in/
Contributors

ವಿರಾಟಪರ್ವ: ೦೨. ಎರಡನೆಯ ಸಂಧಿ

ಸೂ: ಕುಸುಮಶರನುರವಣೆಯ ಗಾಯದ
ಲೆಸುಗೆವಡೆದನು ಕೀಚಕನು ತ
ನ್ನಸುವಿನಳತೆಯ ನೋಡದೆಯೆ ತುಡುಕಿದನು ದ್ರೌಪದಿಯ

ಕೇಳು ಜನಮೇಜಯ ಧರಿತ್ರೀ
ಪಾಲ ನಿಮ್ಮಯ ಪೂರ್ವ ಪೃಥ್ವೀ
ಪಾಲರಿದ್ದರು ಗುಪುತದಿಂದ ವಿರಾಟನಗರಿಯಲಿ
ಕಾಲ ಸವೆದುದು ಹತ್ತು ತಿಂಗಳ
ಮೇಲೆ ಮತ್ತೊಂದತಿಶಯೋಕ್ತಿಯ
ನಾಲಿಸೈ ವಿಸ್ತರದೊಳರುಪುವೆನೆಂದನಾ ಮುನಿಪ ೧

ಆ ವಿರಾಟನ ರಾಜಧಾನಿಯೊ
ಳೀ ವಿಳಾಸದಿ ಮುಸುಕಿ ತಾವ್ ಪರ
ಸೇವೆಯಲಿ ಪಾಂಡವರು ಕಳೆದರು ಹತ್ತು ಮಾಸವನು
ರಾವಣನು ಮುನ್ನಂದು ಸೀತಾ
ದೇವಿಗಳುಪಿದ ಕಥೆಯವೋಲ್ ಸಂ
ಭಾವಿಸಿದ ಕೀಚಕವಿಡಂಬವ ಕೇಳು ಭೂಪಾಲ ೨

ಒಂದು ದಿವಸ ವಿರಾಟನರಸಿಯ
ಮಂದಿರಕ್ಕೋಲೈಸಲೆಂದೈ
ತಂದನಾಕೆಯ ತಮ್ಮ ಕೀಚಕನತುಳ ಭುಜಬಲನು
ಹಿಂದೆ ಮುಂದಿಕ್ಕೆಲದ ಸತಿಯರ
ಸಂದಣಿಯ ಮಧ್ಯದಲಿ ಮೆರೆವರ
ವಿಂದವದನೆಯ ಕಂಡು ಕಾಣಿಕೆಗೊಟ್ಟು ಪೊಡಮಟ್ಟ ೩

ಅನುಜನನು ತೆಗೆದಪ್ಪಿ ಸಿಂಹಾ
ಸನದ ಕೆಲದಲಿ ಕುಳ್ಳಿರಿಸಿ ಮನ
ದಣಿಯಲಂಗನೆ ಮನ್ನಿಸಿದಳೈ ತತ್ಸಹೋದರನ
ತನುಪುಳಕ ತಲೆದೋರಲವನು
ಬ್ಬಿನಲಿ ಸತ್ಕೃತನಾಗಿ ಕಮಳಾ
ನನೆಯರನು ಕಂಡನು ಸುದೇಷ್ಣೆಯ ಮೇಳದಬಲೆಯರ ೪

ಅವರ ಮಧ್ಯದಲಮಲ ತಾರಾ
ನಿವಹದಲಿ ರೋಹಿಣಿಯವೋಲ್ ಸುರ
ಯುವತಿಯರಲೂರ್ವಶಿಯವೋಲ್ ನದಿಗಳೊಳು ಜಾಹ್ನವಿಯ
ಅವಯವದ ಪರಿಮಳಕೆ ಪಸರಕೆ
ಕವಿವ ತುಂಬಿಯ ಸಾರ ಸಂಗೀ
ತವನು ಕೇಳುತ ಕಂಡನವ ಪಾಂಚಾಲ ನಂದನೆಯ ೫

ಮೊದಲೊಳವನವಳಂಗವಟ್ಟವ
ನೊದವಿ ನೋಡಿದೊಡಲ್ಲಿಯೇ ಗಾ
ಢದಲಿ ನಟ್ಟವು ಕೀಳಲರಿದಾಯ್ತಾಲಿಗಳನಲುಗಿ
ಮದನ ಮಸೆದೋರಿದನು ಹೂಗಣೆ
ಹೃದಯವನು ತಾಗಿದುದು ಹರ ಹರ
ಹೆದರಿದನು ಹಮ್ಮೈಸಿದನು ಖಳನೊಂದು ನಿಮಿಷದಲಿ ೬

ನಿಂದು ನೋಡಿದ ದ್ರೌಪದಿಯ ಮೊಗ
ದಂದವನು ಕಂಡಾಗ ಕೀಚಕ
ನೊಂದನೆನೆ ಮೊಗ ತೆಗೆಯಲೆಚ್ಚನು ಕಾಮ ಕೈಗೂಡಿ
ಅಂದು ಬೆರಗಾದನು ವಿಳಾಸಿನಿ
ಯಿಂದು ತಳೆದಳು ಮನವನಿವಳಾ
ರೆಂದು ಭಾವಿಸಿ ಚಾಚಿದನು ಕದಪಿನಲಿ ಕರತಳವ ೭

ತಿಳಿಯಿವಳು ಮೂಜಗವ ಮೋಹಿಪ
ತಿಲಕವೋ ಕಾಮಂಗೆ ಕಟ್ಟಿದ
ಕಳನ ಭಾಷೆಗೆ ನಿಂದ ಮಾಸಾಳೋ ಮಹಾದೇವ
ಕೊಲೆಗಡಿಗ ಕಂದರ್ಪಕನ ಕೂ
ರಲಗೊ ಮದನನ ಸೊಕ್ಕಿದಾನೆಯೊ
ನಳಿನಮುಖಿಯಿವಳಾರ ಸತಿಯೆಂದಳುಪಿ ನೋಡಿದನು ೮

ಜಗವ ಕೆಡಹಲು ಜಲಜವಿಶಿಖನು
ಬಿಗಿದ ಬಲೆಯಿವಳಲ್ಲಲೇ ಯೋ
ಗಿಗಳ ಯತಿಗಳನೆಸಲು ಕಾಮನು ಮಸೆದ ಕೂರಲಗು
ಮುಗುದನಾದನು ಕಾಮನಂಬುಗ
ಳುಗಿದವೆದೆಯಲಿ ನಟ್ಟ ದೃಷ್ಟಿಯ
ತೆಗೆಯಲಾರದೆ ಸೋತು ಕೀಚಕ ಪಾತಕವ ನೆನೆದ ೯

ಸೂರೆವೋಯಿತು ಚಿತ್ತ ಕಂಗಳು
ಮಾರುವೋದವು ಖಳನ ಧೈರ್ಯವು
ತೂರಿ ಪೋದದು ಕರಣದಲಿ ಕಳವಳದ ಬೀಡಾಯ್ತು
ಮೀರಿ ಪೊಗುವಂಗಜನ ಶರದಲಿ
ದೋರುವೋಯಿತು ಹೃದಯ ಕಣ್ಣಿರಿ
ಗಾರೆಯಿವಳಾರೆನುತ ಗಜಬಜಿಸಿದನು ನಿಮಿಷದಲಿ ೧೦

ರತಿಯ ಚೆಲುವಂತಿರಲಿ ಸಿರಿ ಪಾ
ರ್ವತಿಯ ರೂಪಂತಿರಲಿ ಬೊಮ್ಮನ
ಸತಿಯ ಸೊಬಗಂತಿರಲಿಯೀ ಬಾಲಕಿಯ ರೂಪಿಂಗೆ
ಪ್ರತಿಯ ಕಾಣೆನು ಪಾಂಡವರ ದುರು
ಪತಿಯ ರೂಪಿಂಗೈದು ಮಡಿಯೀ
ಸತಿಯ ವಿಭ್ರಮವೈದಿತೆನ್ನಯ ಮನವನೆನುತಿರ್ದ ೧೧

ಅರಿವು ತಲೆಕೆಳಗಾಯ್ತು ಧೈರ್ಯದ
ನಿರಿಗೆ ನಗೆಗೆಡೆಯಾಯ್ತು ಲಜ್ಜೆಯ
ಹೊರಿಗೆ ಬರಿದೊರೆಯಾಯ್ತು ಕರಿಮೊಳೆಯೋಯ್ತು ಭಯಬೀಜ
ಮರವೆ ಗರಿಗಟ್ಟಿತು ಮನೋಭವ
ನಿರಿಗೆಲಸ ಬಲುಹಾಯ್ತು ಹೊಗಳುವ
ಡರಿಯನಾತನ ತನುವಿನಂತಸ್ತಾಪದೇಳ್ಗೆಯನು ೧೨

ಬೀಳುಗೊಂಡದು ಲಜ್ಜೆ ಮಹಿಮೆಯ
ಕೀಲು ಕಳಚಿತು ದ್ರುಪದ ತನುಜೆಯ
ನಾಲಿಯಲಿ ನುಂಗಿದನು ಮನದಲಿ ಸತಿಯ ಸೆರೆವಿಡಿದು
ಕೇಳು ಬಿನ್ನಹವಕ್ಕ ನಿಮ್ಮಡಿ
ಯೋಲೆಕಾತಿಯರೊಳಗೆ ಮೀಟಿನ
ಮೇಲುಗೈಯಿವಳಾವಳೆಂದಗ್ರಜೆಯ ಬೆಸುಗೊಂಡ ೧೩

ಈಕೆ ಗಂಧರ್ವರ ರಮಣಿ ನ
ಮ್ಮಾಕೆಯಾಗಿರೆ ಮಾನ್ಯವೃತ್ತಿಯೊ
ಳೀಕೆಯನು ಸಲಹುವೆವು ಬಲ್ಲಿದರಿವಳ ವಲ್ಲಭರು
ಸಾಕು ಬೀಡಾರಕ್ಕೆ ನೀ ಹೋ
ಗೀಕೆ ನಿನಗಹಳಲ್ಲ ನಿಂದಿರು
ಕಾಕನಾಡದಿರೆನುತ ಬೀಳ್ಕೊಟ್ಟಳು ನಿಜಾನುಜನ ೧೪

ತಾರಿತಂತಃಕ್ಕರಣ ಕಾಮನ
ಕೂರುಗಣೆ ಕಾಲಿಕ್ಕಿದವು ಮನ
ದೇರು ಮುಚ್ಚಿತು ದುಗುಡ ಬಲಿದದು ಮುಸುಕು ಮೋರೆಯಲಿ
ಮೀರಿ ನಿಜಮಂದಿರಕೆ ಢಗೆ ಮೈ
ದೋರೆ ಬಂದನು ಮರುದಿವಸ ತಲೆ
ಮಾರಿ ಕಂಡನು ದ್ರೌಪದಿಯನರಮನೆಯ ಬಾಗಿಲಲಿ ೧೫

ಕಳುಹಿದನು ತನ್ನೊಡನೆ ಬಹ
ಗಾವಳಿಯ ಪರಿವಾರವನು ತನ್ನಯ
ಬಳಿಯ ಹಡಪದ ಬಾಲಕನ ಹಿಂದಿಕ್ಕಿ ನಡೆತಂದು
ಒಲಿದು ಸಿಂಹದ ಸತಿಗೆ ನರಿ ಮನ
ವಳುಪುವಂತಿರೆ ಗರುಡನರಸಿಗೆ
ನಲಿದು ಫಣಿ ಬಯಸುವವೊಲೈದಿದ ಬಾಲಕಿಯ ಬಳಿಗೆ ೧೬

ಖಳನ ಮನವಿಂಗಿತವನಾಗಳೆ
ತಿಳಿದು ಕಾಮಿನಿ ಬೆದರಿದಳು ಕಳ
ವಳಿಗ ಸೋತನು ಕೆಟ್ಟೆನೆಂದಳು ತನ್ನ ಮನದೊಳಗೆ
ತೊಲಗಿ ಹಿಂದಡಿಯಿಡಲು ಕೀಚಕ
ನಳುಕದೈತಂದಬುಜವದನೆಯ
ಬಳಿಗೆ ಬಂದನು ನುಡಿಸಲಾಗದೆ ತರಳೆ ನೀನೆಂದ ೧೭

ಎಲೆ ಮರುಳೆ ಬೇಡಳುಪದಿರು ಕೂ
ರಲಗ ಕೊರಳಿಗೆ ಬಯಸದಿರು ಕಳ
ವಳಿಸದಿರು ಕೈಯೊಡನೆ ನಿನ್ನರಮನೆಗೆ ತೆರಳುವುದು
ಸುಲಭೆ ನಾ ನಿನಗಲ್ಲ ನಿನ್ನನು
ಕೆಲರು ನಗುವರು ಪರದ ಸದ್ಗತಿ
ತೊಲಗುವುದು ಬೇಡಕಟಯೆಂದಳು ಪಾಂಡವರ ರಾಣಿ ೧೮

ನಿಲ್ಲೆಲೆಗೆ ಸೈರಂಧ್ರಿ ಕಾಮನ
ಬಲ್ಲೆಹದ ಬಲುಗಾಯ ತಾಗಿತು
ಬಲ್ಲೆ ನೀನೌಷಧಿಯ ರಕ್ಷಿಸಿಕೊಂಬುದೆನ್ನೊಡಲ
ಮೆಲ್ಲನಡಿಯಿಡು ಮಾತ ಮನ್ನಿಸು
ಚೆಲ್ಲೆಗಂಗಳನೆನ್ನ ಮುಖದಲಿ
ಚೆಲ್ಲಿ ಸಪ್ರಾಣಿಸಲು ಬೇಹುದು ವಿಗತಜೀವನವ ೧೯

ಎಲೆಗೆ ಪಾತಕಿ ನಿನ್ನ ಕಣ್ಣೆಂ
ಬಲಗಿನಲಿ ತನ್ನೆದೆಯ ನೋಯಿಸಿ
ತೊಲಗಬಹುದೇ ಕರುಣವಿಲ್ಲವೆ ನಿನ್ನ ಮನದೊಳಗೆ
ಒಲಿದು ಬಂದೆನು ಕಾಮನೂಳಿಗ
ಬಲುಹು ಎನ್ನವ ಭಯವ ತಗ್ಗಿಸಿ
ತಲೆಯ ಕಾಯಲು ಬೇಕೆನುತ ಕೀಚಕನು ಕೈಮುಗಿದ ೨೦

ಪರರ ಸತಿಗಳುಪಿದೊಡೆ ಪಾತಕ
ದೊರಕುವುದು ನಿಜಲಕ್ಷ್ಮಿ ತೊಲಗುಗು
ಧರೆಯಳೊಗ್ಗದ ಕೀರ್ತಿ ಮಾಸುಗು ಗತಿಗೆ ಕೇಡಹುದು
ಕೊರಳು ಹಲವಾದಸುರನಂತಕ
ಪುರವನೈದಿದ ಕಥೆಯ ನೀ ಕೇ
ಳ್ದರಿಯಲಾ ಕಡುಪಾಪಿ ಹೋಗೆಂದಳು ಸರೋಜಮುಖಿ ೨೧

ಮೇಲೆ ಸದ್ಗತಿ ಬೆಂದು ಹೋಗಲಿ
ಕಾಲನವರೈತರಲಿ ಬಂಧುಗ
ಳೇಳಿಸಲಿ ತನ್ನವರು ತೊಲಗಲಿ ರಾಣಿಯರು ಬಿಡಲಿ
ಬಾಲೆ ನಿನಗಾನೊಲಿದೆ ಕಾಮನ
ಕೋಲು ಎನ್ನನು ಮರಳಲೀಯದು
ಲೋಲಲೋಚನೆ ಬಿರುಬ ನುಡಿಯದೆ ತನ್ನನುಳಹೆಂದ ೨೨

ಎಳೆನಗೆಯ ಬೆಳುದಿಂಗಳನು ನೀ
ತಳಿತು ತಾಪವ ಕೆಡಿಸು ಮಧುರದ
ಮೆಲುನುಡಿಯ ಸುಧೆಯಿಂದ ತೃಷ್ಣೆಯನಕಟ ಪರಿಹರಿಸು
ಅಳಿಮನದ ಬಡತನವ ನಿನ್ನಯ
ಕಳಸ ಕುಚ ಲಕ್ಷ್ಮಿಯಲಿ ಕಳೆ ಮನ
ದೊಲವನಿತ್ತಲು ತಿದ್ದಬೇಹುದು ಕಾಂತೆ ಕೇಳೆಂದ ೨೩

ಕೇಳಿ ಕಿವಿ ಮುಚ್ಚಿದಳು ತನ್ನಯ
ಮೇಳದೈವರ ನೆನೆದು ಹರ ಹರ
ಶೂಲಪಾಣಿ ಮುಕುಂದಯೆನುತವೆ ರವಿಯನೀಕ್ಷಿಸುತ
ಕಾಳು ಮೂಳನಲಾ ಖಳಾಗ್ರಣಿ
ಮೇಲುಗಾಣನಲಾ ಮದಾಂಧನ
ಸೋಲಿಸುವರಾರುಂಟೆನುತ ತಲೆ ಬಾಗಿದಳು ತರಳೆ ೨೪

ಎಲೆ ದುರಾತ್ಮ ಮಹಾಪರಾಧವ
ಬಳಸುವರೆ ಬಯಲಿಂಗೆ ನಿನ್ನಯ
ಕುಲದ ಬೇರನು ಕೊಯ್ವರೇ ಬಹುದಾವುದಿದರಿಂದ
ಹಳಿವು ಹೊದ್ದದೆ ಹೆತ್ತವರು ಮ
ಕ್ಕಳುಗಳೆಂಬೀ ಬದುಕು ಮಾಣದೆ
ಯೆಳಸಿಕೊಂಬಂತಾಯಿತೆಂದಳು ಪಾಂಡವರ ರಾಣಿ ೨೫

ಕಾತರಿಸದಿರು ಮಂದಿವಾಳದ
ಮಾತುಗಳು ಸಾಕಕಟ ತೊಲಗೈ
ಸೋತಡೇನದು ಮನುಜಧರ್ಮದ ಚಿತ್ತಚಪಲವಲ
ಈ ತತುಕ್ಷಣ ಜಾರು ಕೇಳಿದ
ಡಾತಗಳು ಸೈರಿಸರು ದೇವ
ವ್ರಾತದಲಿ ಬಲ್ಲಿದರು ತನ್ನವರೆಂದುಳಿಂದುಮುಖಿ ೨೬

ಸಾವು ತಪ್ಪದು ತನಗೆ ಕಾಮನ
ಡಾವರವು ಘನ ನಿನ್ನ ನೆರೆದೇ
ಸಾವೆನಲ್ಲದೆ ಕಾಮನಂಬಿಂಗೊಡಲನೊಪ್ಪಿಸೆನು
ಭಾವೆ ನೂಕದಿರೆನ್ನ ವರ ರಾ
ಜೀವಮುಖಿ ಕೃಪೆ ಮಾಡು ತನ್ನಯ
ಜೀವನವನುಳುಹೆನುತ ಕಮಲಾನನೆಗೆ ಕೈಮುಗಿದ ೨೭

ಮರುಳತನ ಬೇಡೆಲವೊ ಗಂಧ
ರ್ವರಿಗೆ ಹೆಂಡತಿ ತಾನು ನಿನ್ನಯ
ದುರುಳತನವನು ಸೈರಿಸರು ತನ್ನವರು ಬಲ್ಲಿದರು
ಸೊರಹದಿರು ಅಪಕೀರ್ತಿ ನಾರಿಯ
ನೆರೆಯದಿರು ನೀ ನಿನ್ನ ನಿಳಯಕೆ
ಮರಳುವುದು ಲೇಸೆಂದು ತೃಣವನು ಹಿಡಿದು ಸಾರಿದಳು ೨೮

ದ್ರೌಪದಿಗೆ ಖಳ ನುಡಿದನೆನ್ನಾ
ಟೋಪವನು ನೀನರಿಯೆ ಬಡವರ
ಕೋಪವೌಡಿಗೆ ಮೃತ್ಯು ನಿನ್ನವರೆನ್ನದೇಗುವರು
ಆಪೆನವರಂತಿರಲಿ ನೀನೆನ
ಗೋಪಳಾದರೆ ಸಾಕು ಮಲೆತಡೆ
ಯಾ ಪಿನಾಕಿಗೆ ತೆರಳುವೆನೆ ಬಳಿಕಲ್ಲಿ ನೋಡೆಂದ ೨೯

ಹುಳುಕನಲ್ಲಾ ತುಂಬಿ ಕೋಗಿಲೆ
ಗಳಹನಲ್ಲಾ ಶಶಿ ವಸಂತನ
ಬಲುಹು ಮಾನ್ಯರನಿರಿಯದೇ ತಂಗಾಳಿ ಧಾರ್ಮಿಕನೆ
ಖಳನಲಾ ಮಾಕಂದ ಲೋಕದ
ಕೊಲೆಗಡಿಗನಲ್ಲಾ ಮನೋಭವ
ನಿಳಿಕೆಗೊಂಬರೆ ಪಾಪಿಯೊಲಿಯದೆ ಕೊಲುವರೇಯೆಂದ ೩೦

ಒಲಿದು ನಿನ್ನನು ನಾವು ಕೊಲ್ಲೆವು
ಕೊಲುವ ಸುಭಟರು ಬೇರೆ ಬಯಲಿಗೆ
ಹಲವ ಗಳಹಿದರೇನು ಫಲವಿಲ್ಲಕಟ ಸಾರಿದೆನು
ತಿಳುಪಿದೊಡೆಯೆನ್ನವರು ನಿನ್ನಯ
ತಲೆಯನರಿದೂ ತುಷ್ಟರಾಗರು
ಕಲಕುವರು ನಿನ್ನನ್ವಯಾಬ್ಧಿಯನೆಂದಳಿಂದುಮುಖಿ ೩೧

ಕುಲದೊಳೊಬ್ಬನು ಜನಿಸಿ ವಂಶವ
ನಳಿದನಕಟಕಟೆಂಬ ದುರ್ಯಶ
ವುಳಿವುದಲ್ಲದೆ ಲೇಸಗಾಣೆನು ಬರಿದೆ ಗಳಹದಿರು
ಕೊಲೆಗಡಿಕೆಯೊ ಪಾಪಿ ಹೆಂಗಸು
ಹಲಬರನು ಕೊಲಿಸಿದಳು ಸುಡಲೆಂ
ದಳಲುವರು ನಿನ್ನಖಿಳ ರಾಣಿಯರೆಂದಳಿಂದುಮುಖಿ ೩೨

ಹರಿ ವಿರಂಚಿಗಳಾದೊಡೆಯು ಸಂ
ಗರದೊಳೆನಿಗಿದಿರಿಲ್ಲ ಮರುಳೇ
ತರುಣಿ ನಿನ್ನೊಡನೇನು ತೋರಾ ನಿನ್ನ ವಲ್ಲಭರ
ಪರಸತಿಯ ಸೆರೆಗೈಯೆ ಮುತ್ತಿತು
ನೆರೆದು ಕೋಡಗವಿಂಡು ಸುಭಟನು
ಸರಿದನಂತಕ ನಗರಿಗರಿಯಾಯ್ತೆಂದಳಿಂದುಮುಖಿ ೩೩

ನೀರೆ ನೂಕದಿರೆನ್ನ ಮನ ಮು
ಮ್ಮಾರುವೋದದು ನೀನು ಚಿತ್ತವ
ಸೂರೆಗೊಂಡೀ ಮದನನಂಬಿಂಗೊಡಲ ಹೂಣಿಸುವೆ
ಜಾರದಿರುಯೆನ್ನೆದೆಗೆ ತಾಪವ
ಬೀರದಿರು ಕಾರುಣ್ಯವನು ಕೈ
ದೋರೆನೆಗೆ ಕಮಲಾಕ್ಷಿ ಮರಣವ ಮಾಣಿಸಕಟೆಂದ ೩೪

ಮರುಳೆ ಮನದ ವಿಕಾರ ಮಾರಿಯ
ಸರಸವಾಡುವರುಂಟೆ ಮೃತ್ಯುವ
ನೆರೆವರೇ ದಳ್ಳುರಿಯ ಪ್ರತಿಮೆಯನಪ್ಪುವರೆ ಬಯಸಿ
ಸರಳಕಂಗೈಸುವರೆ ಪಾಪಿಯೆ
ಮರಳು ನಿನ್ನರಮನೆಗೆಯೆನ್ನಯ
ಗರುವ ಗಂಡರು ಕಡಿದು ಹರಹುವರೆಂದಳಿಂದುಮುಖಿ ೩೫

ತೋಳ ತೆಕ್ಕೆಯ ತೊಡಿಸಿ ಕಾಮನ
ಕೋಲ ತಪ್ಪಿಸು ಖಳನ ಕಗ್ಗೊಲೆ
ಯೂಳಿಗವ ಕೇಳುಸುರದಿಹರೆ ಸಮರ್ಥರಾದವರು
ಸೋಲಿಸಿದ ಗೆಲವಿಂದ ಬಲು ಮಾ
ತಾಳಿಯಿವನೆನ್ನದಿರು ಹರಣದ
ಮೇಲೆ ಸರಸವೆ ಕಾಯಬೇಹುದು ಕಾಂತೆ ಕೇಳೆಂದ ೩೬

ಉಳಿದ ತನ್ನರಸಿಯರ ನಿನ್ನಯ
ಬಳಿಯ ತೊತ್ತಿರ ಮಾಡುವೆನು ಕೇ
ಳೆಲೆಗೆ ತನ್ನೊಡಲಿಂಗೆಯೊಡೆತನ ನಿನ್ನದಾಗಿರಲಿ
ಲಲನೆ ನಿನ್ನೊಳು ನಟ್ಟ ಲೋಚನ
ತೊಲಗಲಾರದು ತನ್ನ ಕಾಯವ
ಬಳಲಿಸದೆ ಕೃಪೆ ಮಾಡಬೇಹುದೆನುತ್ತ ಕೈಮುಗಿದ ೩೭

ನ್ಯಾಯವನು ಮಿಗೆ ಗೆಲುವದೀಯ
ನ್ಯಾಯವಧಮನ ಧರ್ಮ ಮಾರ್ಗ
ಸ್ಥಾಯಿಗಳ ತಿಮಿರಕ್ಕೆ ಭಾಸ್ಕರಗಾವುದಂತರವು
ಕಾಯರೆನ್ನವರವರ ಕೈಗುಣ
ದಾಯತವ ಬಲ್ಲನರೆ ಬಲ್ಲರು
ನಾಯಿ ಸಿಂಹಕ್ಕಿದಿರೆ ಫಡ ಹೋಗೆಂದು ತಿರುಗಿದಳು ೩೮

ಹೂಣೆ ಹೊಕ್ಕುದು ವಿರಹದಾಸೆಯ
ಕಾಣೆನಾಕೆಯ ಮಾತಿನಲಿ ಮುಂ
ಗಾಣಿಕೆಯಲೇ ಸೂರೆ ಹೋದದು ಮನದ ಸರ್ವಸ್ವ
ತ್ರಾಣ ಸಡಿಲಿತು ಬುದ್ಧಿ ಕದಡಿ ಕೃ
ಪಾಣಪಾಣಿ ವಿರಾಟ ರಾಯನ
ರಾಣಿಯರಮನೆಗೈದಿದನು ಕಂಡನು ನಿಜಾಗ್ರಜೆಯ ೩೯

ಹಣೆಯನಂಘ್ರಿಗೆ ಚಾಚಲೆತ್ತಿದ
ಳಣಕಿಗನ ತೆಗೆದಪ್ಪಿ ಮದವಾ
ರಣನೆ ಕುಳ್ಳಿರೆನುತ್ತ ನೋಡಿದಳಾ ಸಹೋದರನ
ಹೆಣ ಮುಸುಡು ಬಿದ್ದಿದೆ ಲತಾಂಗಿಯ
ಕೆಣಕಿದನೊ ಕಡುಪಾಪಿ ವಂಶವ
ಹಣಿದವಾಡದೆ ಮಾಣನೇಗುವೆನೆನುತ ಮರುಗಿದಳು ೪೦

ಅಳುಕಿತಗ್ಗದ ಮಹಿಮೆ ಮುಸುಡಿನ
ಬೆಳಕು ಕಂದಿತು ಬಹಳ ಚಿಂತಾ
ಜಲಧಿಯೊಳಗದ್ದಂತೆ ಸೊಂಪಡಗಿತು ನಿಜಾಕಾರ
ಕುಲಶಿರೋಮಣಿ ಹೇಳು ಚಿತ್ತದ
ನೆಲೆಯನೆನೆ ನಸುನಾಚಿ ಮದನನ
ಹಿಳುಕು ಸುಮತಿಯ ಸೀಳೆ ಬಳಿಕಿಂತೆಂದನವ ನಗುತ ೪೧

ಬೇರೆ ಬಿನ್ನಹವೇನು ಸತಿಯರ
ನೂರು ಮಡಿ ಚೆಲುವಿನಲಿ ಚಿತ್ತವ
ಸೂರೆಗೊಂಡಿಹಳವಳು ನಿನ್ನೋಲಗದ ಸತಿಯರಲಿ
ಮಾರಿದಳು ಮದನಂಗೆ ಜೀವಿಸ
ಲಾರೆನಾಕೆಯನೊಳಗು ಮಾಡಿಸಿ
ತೋರಿದೊಡೆ ತನ್ನೊಡಲೊಳಸುವಿಂಗಿಹುದು ನಿರ್ವಾಹ ೪೨

ಕೀರ್ತಿಲತೆ ಕುಡಿಯೊಣಗಿತೈ ಮದ
ನಾರ್ತನಾದೈ ಕುಲಕೆ ಕಾಲನ
ಮೂರ್ತಿ ನೀನವತರಿಸಿದೈ ಸಂಹರಿಸಿದೈ ಕುಲವ
ಸ್ಫೂರ್ತಿಗೆಡೆ ಮನುಜರಿಗೆ ರಾವಣ
ನಾರ್ತಿಯಪ್ಪುದು ಅರಿಯಲಾ ಕಡು
ಧೂರ್ತತನಕಂಜುವೆನೆನುತ ನಡುಗಿದಳು ನಳಿನಾಕ್ಷಿ ೪೩

ಬೇಟವೇ ಪರವಧುವಿನಲಿ ಕೈ
ಮಾಟವೇ ಪರವಿತ್ತದಲಿ ತೆಗೆ
ದೋಟವೇ ಕದನದಲಿ ಗುಣವೇ ರಾಜಪುತ್ರರಿಗೆ
ಆಟವಿಕರೊಡನಾಡಿ ಕಲಿತು ವಿ
ರಾಟನನು ಕೊಲಲೆಣಿಸಿದೈ ನಿ
ನ್ನಾಟಕಂಜುವೆನೆನುತ ಮುಖದಿರುಹಿದಳು ತರಲಾಕ್ಷಿ ೪೪

ಅವಳ ಗಂಡರು ಸುರರು ಸುರರಿಗೆ
ನವಗದಾವಂತರವು ಮುಳಿದೊಡೆ
ದಿವಿಜ ದಳಕಿದಿರಾರು ನಮ್ಮನದಾರು ಕಾವವರು
ಅವಳ ತೊಡಕೇ ಬೇಡ ಸತಿಯರ
ನಿವಹದಲಿ ನೀನಾರ ಬಯಸಿದ
ಡವಳ ನಾ ಮುಂದಿಟ್ಟು ಮದುವೆಯನೊಲಿದು ಮಾಡುವೆನು ೪೫

ಅಕ್ಕ ಮರುಳೌ ಚಿತ್ತವವಳಲಿ
ಸಿಕ್ಕಿ ಬೇರ್ವರಿಯಿತ್ತು ಬರಿದೇ
ಮಿಕ್ಕ ಡಿಂಬಕೆ ಮದುವೆಯುಂಟೇ ಮನವ ಬೇರಿರಿಸಿ
ಮಕ್ಕಳಾಟಿಕೆಯಾದಡಾಗಲಿ
ತಕ್ಕರಲ್ಲೆಂದೆನಲಿ ಸಲಹುವ
ಡಕ್ಕ ಸೈರಂಧ್ರಿಯನು ಸೇರಿಸಬೇಕು ತನಗೆಂದ ೪೬

ಸೊಗಸದಿತರರ ಮಾತು ಕಣ್ಣುಗ
ಳೊಗಡಿಸವು ಮಿಕ್ಕವರ ರೂಹನು
ಹಗೆಗಳಾಗಿಹವುಳಿದವರ ನಾಮಗಳು ನಾಲಿಗೆಗೆ
ಸೆಗಳಿಕೆಯ ಸಸಿಯಾದೆನೆನ್ನಯ
ಬಗೆಯ ಸಲಿಸೌ ಹರಿದ ಕರುಳಿನ
ಮೃಗದ ಮರಿಯನು ಸಲಹಬೇಕೆಂದೆರಗಿದನು ಪದಕೆ ೪೭

ಆಲಿ ನೀರೇರಿದವು ತಮ್ಮನ
ಮೇಲೆ ತಳಿತುದು ಮೋಹ ಕಾಲನ
ಪಾಳಯಕೆ ಕೈಗೊಟ್ಟಳಂಗನೆ ನೆಗಹಿದಳು ಖಳನ
ಏಳು ಭವನಕೆ ಹೋಗು ತರುಣಿಯ
ನಾಳೆ ನಾ ಕಳುಹುವೆನು ಪರಸತಿ
ಮೇಳ ಲೇಸಲ್ಲೆನುತ ಬೀಳ್ಕೊಟ್ಟಳು ನಿಜಾನುಜನ ೪೮

ಮನದೊಳಗೆ ಗುಡಿಗಟ್ಟಿದನು ಮಾ
ನಿನಿಯ ಕರುಣಾಪಾಂಗ ರಸಭಾ
ಜನವು ಪುಣ್ಯವಲಾಯೆನುತ ಬೀಳ್ಕೊಂಡನಗ್ರಜೆಯ
ಮನದೊಳೊದವಿದ ಮರುಳುತನದು
ಬ್ಬಿನಲಿ ಹೊಕ್ಕನು ಮನೆಯನಿತ್ತಲು
ದಿನಕರಂಗಾಯಿತ್ತು ಬೀಡಸ್ತಾಚಲಾದ್ರಿಯಲಿ ೪೯

ವರ ದಿಗಂಗನೆಯಿಟ್ಟ ಚಂದನ
ತಿಲಕವೋ ಮನುಮಥನ ರಾಣಿಯ
ಕರದಿಲಿಹ ಕನ್ನಡಿಯೊ ಮದನನ ಬಿರುದಿನೊಡ್ಡಣವೊ
ಸುರತ ವಿರಹಿಯ ಸುಡುವ ಕೆಂಡದ
ಹೊರಳಿಯೋ ಹೇಳೆನಲು ಮಿಗೆ ಹಿಮ
ಕರನು ಜನಿಸಿದ ರಜನಿ ಮಧ್ಯದಳವನಿ ತಳತಳಿಸೆ ೫೦

ಬೆಚ್ಚಿದವು ಚಕ್ರಾಂಕಯುಗ ತಾವ್
ಕಚ್ಚಿದವು ಮರಿದುಂಬಿ ಕುಮುದವ
ಮುಚ್ಚಿದವು ಮುಸುಡುಗಳನಂಬುಜರಾಜಿ ತವತವಗೆ
ಹೆಚ್ಚಿದವು ಸಾಗರದ ತೆರೆಗಳು
ಬೆಚ್ಚಿದರು ಜಾರೆಯರು ಚಂದ್ರಮ
ಕಿಚ್ಚನಿಕ್ಕಿದನಕಟ ಸಕಲ ವಿಯೋಗಜನ ಮನಕೆ ೫೧

ಖಳನ ವಿರಹದ ತಾಪದುರಿ ವೆ
ಗ್ಗಳಿಸೆ ತನ್ನರಮನೆಗೆ ಬಂದನು
ಕಳವಳಿಗ ಹಾಯೆನುತ ಕೆಡೆದನು ತಳಿರ ಹಾಸಿನಲಿ
ನಳಿನವೈರಿಯ ಸುಳಿವು ತನ್ನಯ
ಕೊಲೆಗೆ ಬಂದುದು ಪಾಪಿ ಕಮಲಜ
ಚಲಿತಲೋಚನೆಗೇಕೆ ಮಾಡಿದನಿನಿತು ಚೆಲುವಿಕೆಯ ೫೨

ಹಾಸಿದೆಳೆದಳಿರೊಣಗಿದವು ಹೊಗೆ
ಸೂಸಿದಾ ಸುಯಿಲಿನಲಿ ಮೆಲ್ಲನೆ
ಬೀಸುತಿಹ ಸುಳಿವಾಳೆಯೆಲೆ ಬಾಡಿದವು ಝಳ ಹೊಯ್ದು
ಆ ಸಸಿಯ ಕೋಗಿಲೆಯ ತುಂಬಿಯ
ನಾ ಸರೋಜವ ಮಲ್ಲಿಗೆಯ ಕೈ
ವೀಸಿದನು ಕುಸುಮಾಸ್ತ್ರನೀ ಕೀಚಕನ ಕಗ್ಗೊಲೆಗೆ ೫೩

ಉರಿದುದೊಡಲೊಳು ವೀಳೆಯದ ಕ
ರ್ಪುರದ ಹಳಕುಗಳಮಳ ಗಂಧದ
ಸರಸ ಕರ್ದಮ ಕರಿಕುವರಿದುದು ಪೂಸಿದಂಗದಲಿ
ಹೊರಳೆ ನೀರಿನ ಪೊಟ್ಟಣವು ದ
ಳ್ಳುರಿಯಲಾದುದು ಬಲಿದ ಚಂದ್ರಿಕೆ
ಕರಗಿ ಕಡುಗಿದ ತವರವಾದುದು ಕೀಚಕನ ದೆಸೆಗೆ ೫೪

ಪರಿಮಳದಿ ಸುಳಿವಾಲವಟ್ಟದೊ
ಳಿರದೆ ಪೂಸಿದ ಗಂಧ ಕರ್ಪುರ
ವರರೆ ಸೀದವು ಕೀಚಕನ ಕಾಮಾಗ್ನಿ ತಾಪದಲಿ
ಪರಮ ಪಾತಿವ್ರತೆಗಳುಪಿ ತಾನ್
ಹರಣದಾಸೆಯ ಮರೆದು ಪಾತಕ
ಹೊರಳುತಿರ್ದನು ಚಂದ್ರಕಾಂತದ ಮೇಲು ಮಚ್ಚಿನಲಿ ೫೫

ಅರೆಗಳಿಗೆ ಯುಗವಾಗಿ ನೂಕಿದ
ನಿರುಳನುದಯಾಚಲದ ಶಿರದಲಿ
ತರಣಿ ತಲೆದೋರಿದನು ತೊಡೆದನು ಭುವನದಂಧತೆಯ
ಪರಿಮಳದ ಪಾವುದದಿನಳಿಗಳ
ಕರೆಸಿದವು ತಾವರೆಗಳೆನೆ ಕಾ
ತರ ಲತಾಂಗಿಯ ಸುಯ್ಲು ತಾಗಿತು ಕುಮುದಿನೀಪತಿಗೆ ೫೬





ಕೃಪೆ :  http://gaduginabharata.blogspot.in/
Contributors

ವಿರಾಟಪರ್ವ: ೦೩. ಮೂರನೆಯ ಸಂಧಿ

ಸೂ: ರಾಯ ಕುರುಬಲ ವಿಲಯ ಹರನಬು
ಜಾಯತಾಕ್ಷಿಯ ಸಲಹಿ ಕೀಚಕ
ರಾಯ ವಂಶಾರಣ್ಯವನು ಸವರಿದನು ಕಲಿಭೀಮ

ಬಯಸಿದಳು ಮೃತ್ಯುವನು ಕಡು ಪಾ
ಪಿಯ ಮನೋಧರ್ಮವನು ಜನಮೇ
ಜಯ ಮಹೀಪತಿ ಕೇಳು ಪಾಂಚಾಲಿಯನು ಕರೆಸಿದಳು
ನಯವಿಹೀನೆ ಸುದೇಷ್ಣೆ ಬಂದಾ
ಕೆಯನು ಬೆಸಸಿದಳೆಲೆಗೆ ಅನುಜಾ
ಲಯದಲುತ್ತಮ ಮಧುವ ನೀ ಝಡಿತೆಯಲಿ ತಹುದೆಂದು ೧

ಅಮ್ಮೆನಲ್ಲಿಗೆ ದೇವಿ ನಿಮ್ಮಯ
ತಮ್ಮ ದುರುಳನು ಲೇಸು ಹೊಲ್ಲೆಹ
ವೆಮ್ಮ ತಾಗುವದಾತನಳಿದರೆ ಬಳಿಕ ಹಳಿವೆಮಗೆ
ನಿಮ್ಮ ನಾವೋಲೈಸಿ ನಿಮಗೆ ವಿ
ಕರ್ಮವನು ಮಾಡುವದು ನಮಗದು
ಧರ್ಮವಲ್ಲುಳಿದವರ ಕಳುಹುವದೆಂದಳಿಂದುಮುಖಿ ೨

ಎನಗೆ ಭುಗಿಲೆಂದಳು ಸುಡೇತಕೆ
ಮನದ ಗರ್ವವ ನುಡಿವೆ ನಿನ್ನಿಂ
ದೆನಗೆ ಮೇಣೆನ್ನವರಿಗುಂಟೇ ಹಾನಿ ಹರಿಬಗಳು
ಅನುಜನಾರೆಂದರಿಯೆ ಸಾಕಾ
ತನ ಸಮೀಪಕೆ ಹೋಗಿ ಬಾ ನಡೆ
ಯೆನಲು ಕೈಕೊಂಡಬಲೆ ಹೊರವಂಟಳು ನಿಜಾಲಯವ ೩

ದೇವಿ ನೇಮಿಸಲರಿಯೆನೆಂದೊಡಿ
ದಾವ ಧರ್ಮವು ಶಿವ ಶಿವೀ ಹದ
ನಾವನವರಿಗೆ ತಹುದು ಬದ್ಧವಿಘಾತಿಯಿದು ಬಲುಹು
ಸೇವಿಸುವದೇ ಕಷ್ಟವೆಂಬುದು
ಕೋವಿದರ ಮತ ಶಿವ ಶಿವಾ ರಾ
ಜೀವಲೋಚನ ಕೃಷ್ಣ ಬಲ್ಲನೆನುತ್ತ ಗಮಿಸಿದಳು ೪

ಹರಿ ಹರಿ ಶ್ರೀಕಾಂತ ದಾನವ
ಹರ ಮುರಾರಿ ಮುಕುಂದ ಗತಿಶೂ
ನ್ಯರಿಗೆ ನೀನೇ ಗತಿಯೆಲೈ ಗರುವಾಯಿಗೆಟ್ಟೆನಲೈ
ಕುರುಕುಲಾಗ್ರಣಿ ಸೆಳೆದ ವಸ್ತ್ರಾ
ಕರುಷಣದ ಭಯ ಮತ್ತೆ ಬಂದಿದೆ
ಕರುಣಿ ನೀನೇ ಬಲ್ಲೆಯೆನುತಡಿಯಿಟ್ಟಳಬುಜಾಕ್ಷಿ ೫

ಸುರಪ ಶಿಖಿ ಯಮ ನಿರುತಿ ವರುಣಾ
ದ್ಯರಿಗೆ ವಂದಿಸಿ ಕಣ್ಣೆವೆಯ ಬಿಗಿ
ದರೆಗಳಿಗೆ ನಿಂದಬುಜಮಿತ್ರನ ಭಜಿಸಿ ಕಂದೆರೆಯೆ
ಮುರಿವ ದೈತ್ಯನ ಕಾಹ ಕೊಟ್ಟನು
ತರಣಿ ತರುಣಿಗೆ ಮಂದ ಮಂದೋ
ತ್ತರದ ಗಮನದಲಬಲೆ ಬಂದಳು ಕೀಚಕನ ಮನೆಗೆ ೬

ಚಾರು ನೂಪುರ ಝಣಝಣದ ಝೇಂ
ಕಾರ ರವದುಬ್ಬಿನಲಿ ಭವನ ಮ
ಯೂರ ಕುಣಿದವು ವರಕಟಾಕ್ಷದ ಮಿಂಚು ಥಳಥಳಿಸೆ
ಆರು ಹೊಗಳುವರಂಗವಟ್ಟದ
ಸೌರಭದ ಭಾರಣೆಗೆ ತುಂಬಿಯ
ಸಾರ ಕಟ್ಟಿತು ಬಂದಳಂಗನೆ ಕೀಚಕಾಲಯಕೆ ೭

ಮನುಮಥನ ಮದದಾನೆ ಕಂದ
ರ್ಪನ ಮಹಾಮಂತ್ರಾಧಿದೇವತೆ
ಜನವು ಮರುಳಹ ಮದ್ದು ಸಂಸೃತಿಸುಖದ ಸಾಕಾರೆ
ಮನಸಿಜನ ಮಸೆದಲಗು ಮುನಿ ಮೋ
ಹನತಿಲಕ ಲಾವಣ್ಯಸಾಗರ
ಜನಿತ ಲಕ್ಷ್ಮಿ ಲತಾಂಗಿ ಬಂದಳು ಕೀಚಕನ ಮನೆಗೆ ೮

ಕುಡಿತೆಗಂಗಳ ಚಪಲೆಯುಂಗುರ
ವಿಡಿಯ ನಡುವಿನ ನೀರೆ ಹಂಸೆಯ
ನಡೆಯ ಗಮನದ ಮೌಳಿಕಾತಿ ಪಯೋಜ ಪರಿಮಳದ
ಕಡುಚೆಲುವೆ ಬರಲವನ ತನು ನಡ
ನಡುಗಿ ನಿಂದುದದಾವ ಹೆಂಗಸು
ಪಡೆದಳೀ ಚೆಲುವಿಕೆಯನೆನುತೀಕ್ಷಿಸಿದನಂಗನೆಯ ೯

ಅರಿದು ನೆತ್ತರುಗಾಣದಲಗಿದು
ನೆರೆ ಬಿಗಿಯೆ ಮೈ ಬಾಸುಳೇಳದ
ಹುರಿ ಬಲಿದ ನೇಣ್ಸೋಂಕಿದೊಡೆ ಹೊಗೆ ಮಸಗದೆದೆಗಿಚ್ಚು
ಅರರೆ ಕಂಗಳ ಧಾರೆ ಯಾವನ
ಕೊರಳ ಕೊಯ್ಯದದಾವನರಿಕೆಯ
ಹುರುಳುಗೆಡಿಸದಿದಾವ ನಿಲುವನು ಶಿವ ಶಿವಾಯೆಂದ ೧೦

ಆವ ಜನ್ಮದ ಸುಕೃತ ಫಲ ನೆರೆ
ದೀ ವಧುವ ಸೇರಿದರೊ ಧನ್ಯರು
ತಾವಲಾ ಬಳಿಕೇನು ಪೂರ್ವದ ಸುಖದ ಸರ್ವಸ್ವ
ಭಾವಿಸಲು ಸುಕೃತಾವಳಿಗಳಿಂ
ದೀ ವನಿತೆಯಲ್ಲಿಂದ ಮೇಣಿ
ನ್ನಾವುದತಿಶಯವುಂಟೆನುತ ಖಳರಾಯನಿದಿರೆದ್ದ ೧೧

ತರುಣಿ ಬಾ ಕುಳ್ಳಿರು ಮದಂತಃ
ಕರಣದೆಡರಡಗಿತ್ತು ಕಾಮನ
ದುರುಳತನಕಿನ್ನಂಜುವೆನೆ ನೀನೆನಗೆ ಬಲವಾಗೆ
ಬಿರುದ ಕಟ್ಟುವೆನಿಂದುವಿಗೆ ಮಧು
ಕರಗೆ ಕೋಗಿಲೆಗೆಂದು ಖಳನ
ಬ್ಬರಿಸಿ ನುಡಿಯಲು ಖಾತಿಗೊಂಡಿಂತೆಂದಳಿಂದುಮುಖಿ ೧೨

ಬಾಯಿ ಹುಳುವುದು ಬಯಲ ನುಡಿದೊಡೆ
ನಾಯಿತನ ಬೇಡೆಲವೊ ಕೆಡದಿರು
ರಾಯರಂಗನೆ ಕಳುಹೆ ಬಂದೆನು ಮಧುವ ತರಲೆಂದು
ಸಾಯಬೇಕೇ ಹಸಿದ ಶೂಲವ
ಹಾಯಿ ಹೋಗೆನೆ ನಿನ್ನ ಬೈಗಳು
ನೋಯಿಸುವವೇ ತನ್ನನೆನುತವೆ ತುಡುಕಿದನು ಸತಿಯ ೧೩

ಕರವನೊಡೆಮುರುಚಿದಳು ಬಟ್ಟಲ
ಧರೆಯೊಳೀಡಾಡಿದಳು ಸತಿ ಮೊಗ
ದಿರುಹಿ ಬಾಗಿಲ ದಾಂಟಿ ಭಯದಲಿ ನಡುಗಿ ಡೆಂಡಣಿಸಿ
ತರಳೆ ಹಾಯ್ದಳು ಮೊಲೆಯ ಜಘನದ
ಭರದಿ ಬಡನಡು ಮುರಿಯದಿಹುದೇ
ವರ ಸಭಾಗ್ಯತೆಗೆನಲು ರಭಸದೊಳೋಡಿದಳು ಸಭೆಗೆ ೧೪

ಒಡನೆ ಬೆಂಬತ್ತಿದನು ತುರುಬನು
ಹಿಡಿದು ತೊತ್ತಿನ ಮಗಳೆ ಹಾಯ್ದರೆ
ಬಿಡುವೆನೇ ಫಡಯೆನುತ ಹೊಯ್ದನು ಕಾಲಲೊಡೆಮೆಟ್ಟಿ
ಕೆಡೆದು ರಕುತವ ಕಾರಿ ಹುಡಿಯಲಿ
ಮುಡಿ ಹೊರಳಿ ಬಿರುಗಾಳಿಯಲಿ ಸೈ
ಗೆಡೆದ ಕದಳಿಯ ಕಂಬದಂತಿರೆ ಕಾಂತೆ ಹೊರಳಿದಳು ೧೫

ಕರುಳ ತೆಗೆ ತಿನ್ನಡಗನೆನುತ
ಬ್ಬರಿಸಿ ಸೂರ್ಯನು ಕೊಟ್ಟ ದಾನವ
ನುರವಣಿಸಿ ಕೀಚಕನ ಹೊಯ್ದನು ಹಿಡಿದು ಕುಸುಬಿದನು
ದುರುಳನಡೆಗೆಡೆದೆದ್ದು ನಿಮಿಷದೊ
ಳೊರಲುತೋಡಿದನಾಲಯಕೆ ಬಳಿ
ಕರಸ ಮೊದಲಾಖಿಳಜನ ನಡುಗಿತ್ತು ಭಯ ಹೊಯ್ದು ೧೬

ಹೊಡೆ ಮರಳಿ ಮುರಿದೆದ್ದು ತುರುಬಿನ
ಹುಡಿಯ ಕೊಡಹುತ ಮೊಲೆಗೆ ಮೇಲುದು
ತೊಡಿಸಿ ಗಲ್ಲದ ರಕುತವನು ಬೆರಲಿಂದ ಮಿಡಿ ಮಿಡಿದು
ನುಡಿಯಲಾಗದೆ ಖಳನು ಹೆಂಗುಸ
ಬಡಿಯೆ ನೋಡುತ್ತಿಹರೆ ಹಿರಿಯರು
ಹಿಡಿದ ಮೌನವ ಹೊತ್ತು ಲೇಸೆಂದಬಲೆ ಹಲುಬಿದಳು ೧೭

ಶಿವ ಶಿವಾ ಪಾಪಿಗಳು ಪತಿಯಾ
ದವರ ತಾಗಲಿ ಸುಯ್ಲಕಟ ನಾ
ಲುವರ ನಡುವಣ ಹಾವು ಸಾಯದು ನಿರಪರಾಧಿಯನು
ಅವಗಡಿಸಿದನು ಖಳನು ಧರ್ಮದ
ವಿವರ ಸುದ್ದಿಯನಾಡದೀ ಜನ
ನಿವಹ ಘೋರಾರಣ್ಯವಾಯ್ತೆಂದೊರಲಿದಳು ತರಳೆ ೧೮

ಎಲವೊ ದೇಶಿಗ ಕಂಕ ಭಟ್ಟನೆ
ಹಲವು ಧರ್ಮವ ಬಲ್ಲೆ ಗಡ ನೃಪ
ತಿಲಕಗರುಹುವದೇನು ಸನ್ಯಾಸಿಗಳಿಗುಚಿತವಿದು
ತಿಳಿಯೆ ದೇಶಿಗರಿಂಗೆ ದೇಶಿಗ
ರೊಲವು ಸಮನಿಸಬೇಕು ಸಭೆಯಲಿ
ಬಲವಿಹೀನರಿಗಾಪ್ತರಿಲ್ಲಂದೆಬಲೆಯೊರಲಿದಳು ೧೯

ಧೈರ್ಯವನು ನೆರೆ ಬಲಿದು ಮೇಲಣ
ಕಾರ್ಯಭಾಗವನರಿದು ನೃಪಜನ
ವರ್ಯ ನೋಡದೆ ನುಡಿಸದಿದ್ದನು ಧರ್ಮನಂದನನು
ಶೌರ್ಯಕವಸರವಲ್ಲ ನಮಗೀ
ಯಾರ್ಯನಾಜ್ಞೆಯೆನುತ್ತ ಬಳಿಕಾ
ತುರ್ಯರಿದ್ದರು ಪಾರ್ಥ ಯಮಳರು ಬಲಿದ ದುಗುಡದಲಿ ೨೦

ನೊಂದಳಕಟಾ ಸತಿಯೆನುತ ಮನ
ನೊಂದು ಸೈವೆರಗಾಗಿ ಖತಿಯಲಿ
ಕಂದಿ ನಸು ಮೈಬಾಗಿ ರೋಷದೊಳೌಡನೊಡೆಯವುಚಿ
ಮಂದಿಯರಿಯದವೊಲು ಕುಚೇಷ್ಟೆಯೊ
ಳೊಂದಿ ಮೆಲ್ಲನೆ ಬಾಗಿ ನೋಡಿದ
ನಂದು ರಾಜಾಲಯದ ಮುಂದಣ ಮರನನಾ ಭೀಮ ೨೧

ಒಳಗೆ ನಿಶ್ಚೈಸಿದನು ಮೊದಲಲಿ
ಹಿಳಿದು ಹಿಂಡುವೆನಿವಳ ಬಡಿದೀ
ಖಳನನಿವನೊಡಹುಟ್ಟಿದರನಿವನಖಿಳ ಬಾಂಧವರ
ಬಳಿಕ ವಿಗಡ ವಿರಾಟ ರಾಯನ
ಕೊಲುವೆನರಿಯದ ಮುನ್ನ ಕೌರವ
ಕುಲವ ಸವರುವೆನೆಂದು ಕಿಡಿಕಿಡಿಯೋದನಾ ಭೀಮ ೨೨

ಆತನಿಂಗಿತದನುವನರಿತು ಮ
ಹೀತಳಾಧಿಪ ಧರ್ಮಸುತನತಿ
ಕಾತರಿಸದಿರು ವಲಲ ಸೈರಿಸು ಸೈರಿಸಕಟೆನುತ
ಈ ತರುವ ಮುರಿಯದಿರು ಸುಜನ
ವ್ರಾತಕಾಶ್ರಯವೂರ ಹೊರಗೆ ಮ
ಹಾತಿಶಯ ತರುವುಂಟು ನಿನ್ನಯ ಬಾಣಸಿನ ಮನೆಗೆ ೨೩

ಧರ್ಮಮಯ ತರುವಿದನು ಮುರಿಯದಿ
ರೆಮ್ಮ ಮಾತನು ಕೇಳೆನಲು ಮಿಗೆ
ಸುಮ್ಮನೋಲಗದಿಂದ ಸರಿದನು ಭೀಮ ದುಗುಡದಲಿ
ಕರ್ಮಫಲವಿದು ನಿನಗೆ ಮಾನಿನಿ
ನಿಮ್ಮ ಭವನಕೆ ಹೋಗು ಶಿಕ್ಷಿಸ
ಲಮ್ಮದೀ ಸಭೆ ಬಗೆಯನಾತನು ಮತ್ಸ್ಯಭೂಪತಿಯ ೨೪

ಕೋಪಕವಸರವಲ್ಲ ಪತಿಗಳು
ಕಾಪುರುಷರೇ ನಿನ್ನವರು ಪರಿ
ತಾಪವನು ಬೀಳ್ಕೊಡು ಪತಿವ್ರತೆ ಪುಣ್ಯವಧು ನೀನು
ದೀಪವಲ್ಲಾ ಕ್ಷಮೆಯಖಿಳ ದೋ
ಷಾಪಹಾರವು ಶೌರ್ಯ ಧರ್ಮದ
ರೂಪು ನೆಲೆಯಾ ಕ್ಷಮೆಯೆನಲು ಬಳಿಕೆಂದುಳಿಂದುಮುಖಿ ೨೫

ನೀರು ಹೊರಗಿಕ್ಕುವದು ಮೂರೇ
ಬಾರಿ ಬಳಿಕದು ಪಾಪಿ ಜಾಡಿಸೆ
ಸೈರಿಸದು ಅನ್ಯಾಯ ಬಹುಳತೆಗೇನ ಮಾಡುವೆನು
ಸೈರಣೆಗೆ ತಾನವಧಿಯಿಲ್ಲಾ
ಪೌರುಷವು ಕಡು ಬಂಜೆಯಾಯಿತು
ಆರಯಿಕೆಯಲಿ ಜುಣುಗಿ ಜಾರುವಿರೆಂದಳಿಂದುಮುಖಿ ೨೬

ಅರರೆ ಹೆಂಗಸು ದಿಟ್ಟೆ ಮೋನದೊ
ಳಿರಲಿದಾವಂತರವು ರಾಯನ
ಹೊರೆಯಲೀ ಬಾಯ್ಬಡಿಕತನ ಗರುವಾಯಿಯೇನೆನಲು
ಕೆರಳಿದಳು ಲಲಿತಾಂಗಿಯಿಲ್ಲಿಯ
ಹಿರಿಯರಲಿ ಹುರುಳಿಲ್ಲ ಮಾರುತಿ
ಗರುಹುವೆನು ಬಳಿಕಾದುದಾಗಲಿಯೆನುತ ತಿರುಗಿದಳು ೨೭

ಆ ಸುದೇಷ್ಣೆಯ ಮನೆಗೆ ಬರಲವ
ಳೀ ಸತಿಯ ನುಡಿಸಿದಳು ತಂಗಿ ವಿ
ಳಾಸವಳಿದಿದೆ ಮುಖದ ದುಗುಡವಿದೇನು ಹದನೆನಲು
ಈಸು ಮರವೆಯಿದರಸುತನದ ಮ
ಹಾ ಸಗಾಢಿಕೆಯೆಮ್ಮ ನೀವಪ
ಹಾಸ ಮಾಡುವಿರೆನುತ ದುರುಪದಿ ನುಡಿದಳೊಡತಿಯನು ೨೮

ದುರುಳ ನಿಮ್ಮೊಡಹುಟ್ಟಿದನು ನೀ
ವರಸುಗಳು ತಿರುಕುಳಿಗಳಾವಿ
ನ್ನಿರಲು ಬಾರದು ನೃಪತಿ ತಪ್ಪಿದೊಡಾರು ಕಾವವರು
ಕರೆಸಿ ಬುದ್ಧಿಯ ಹೇಳಿ ಎನ್ನನು
ಹೊರೆಯಲಾಪರೆ ಹೊರೆಯಿರಲ್ಲದ
ಡರಸಿ ಕಳಹುವದೆನ್ನನೆನಲಿಂತೆಂದಳಾ ರಾಣಿ ೨೯

ಲಲನೆ ಕೇಳನ್ಯಾಯದವರನು
ಕೊಲಿಸುವೆನು ಭಯ ಬೇಡ ಪರ ಸತಿ
ಗಳುಪಿದವನೊಡಹುಟ್ಟಿದನೆ ಕಡುಪಾಪಿ ಹಗೆಯೆನಲು
ಕೊಲಿಸುವಡೆ ನೀವೇಕೆ ತಪ್ಪಿನ
ಬಳಿಯಲೆನ್ನಾತಗಳು ಕೀಚಕ
ಕುಲವ ಸವರುವರೆನಗೆ ಕಾರಣವಿಲ್ಲ ಸಾರಿದೆನು ೩೦

ಎಂದು ಬೀಳ್ಕೊಂಡಬಲೆ ತನ್ನಯ
ಮಂದಿರಕೆ ಬಂದೊಳಗೊಳಗೆ ಮನ
ನೊಂದು ಸೈವೆರಗಾಗಿ ಚಿಂತಿಸಿ ನೂಕಿದಳು ಹಗಲ
ಕೊಂದುಕೊಂಬೆನೆ ಆತ್ಮಘಾತಕ
ಹಿಂದೆ ಹತ್ತದೆ ಮಾಣದೇಗುವೆ
ನೆಂದು ದ್ರೌಪದಿ ತನ್ನ ಮನದಲಿ ಹಿರಿದು ಮರುಗಿದಳು ೩೧

ಆರಿಗುಸುರುವೆನಾರ ಸಾರುವೆ
ನಾರಿಗೊರಲುವೆನಾರಿಗರುಹುವೆ
ನಾರ ಬೇಡುವೆನಕಟ ಹೆಂಗಸು ಜನ್ಮವನು ಸುಡಲಿ
ಘೋರ ಪಾತಕಿಯೆನ್ನವೊಲು ಮು
ನ್ನಾರು ನವೆದವರುಂಟು ಮರಣವು
ಬಾರದೆಂದೊರಲಿದಳು ಬಸುರನು ಹೊಯ್ದು ಶಶಿವದನೆ ೩೨

ಯಮಸುತಂಗರಹುವೆನೆ ಧರ್ಮ
ಕ್ಷಮೆಯ ಗರ ಹೊಡೆದಿಹುದು ಪಾರ್ಥನು
ಮಮತೆಯುಳ್ಳವನೆಂಬೆನೇ ತಮ್ಮಣ್ಣನಾಜ್ಞೆಯಲಿ
ಭ್ರಮಿತನಾಗಿಹನುಳಿದರಿಬ್ಬರು
ರಮಣರಿವರೀ ನಾಯ ಕೊಲಲ
ಕ್ಷಮರು ನಿಸ್ಸಂದೇಹವೆಂದಳು ತನ್ನ ಮನದೊಳಗೆ ೩೩

ಎಲ್ಲರೊಳು ಕಲಿಭೀಮನೇ ಮಿಡು
ಕುಳ್ಳ ಗಂಡನು ಹಾನಿ ಹರಿಬಕೆ
ನಿಲ್ಲದಂಗೈಸುವನು ಕಡು ಹೀಹಾಳಿಯುಳ್ಳವನು
ಖುಲ್ಲನಿವನುಪಟಳವನಾತಂ
ಗೆಲ್ಲವನು ಹೇಳುವೆನು ಬಳಿಕವ
ನಲ್ಲಿ ಹುರುಳಿಲ್ಲದೊಡೆ ಕುಡಿವೆನು ಘೋರತರ ವಿಷವ ೩೪

ನಿಳಯವನು ಹೊರವಂಟು ಕಂಗಳ
ಬೆಳಗು ತಿಮಿರವ ಕೆಡಿಸೆ ಕಂಕಣ
ಲಲಿತ ಝೇಂಕೃತಿಯಿಂದ ತೂಗುವ ವಾಮಭುಜಲತೆಯ
ಒಲಿದು ಮೇಲುದು ನೂಕಿ ನಡುಗುವ
ಮೊಲೆಯ ಭರದಲಿಯಡಿಯಿಡುತ ಕಳ
ವಳದ ಕರಣದ ಮುಗುದೆ ಬಂದಳು ಬಾಣಸಿನ ಮನೆಗೆ ೩೫

ಕೆಲದಲೊಟ್ಟಿದ ಪತ್ರ ಶಾಕಾ
ವಳಿಯ ಫಲರಾಸಿಗಳ ಕಳವೆಯ
ಹೊಳೆವುತಿಹ ರಾಜಾನ್ನದಕ್ಕಿಯ ಸಾಲ ಹರಿಯಣದ
ಕೆಲಬಲದ ಸಂಭಾರ ಚೂರ್ಣದ
ಲಲಿತ ಬೋನದ ವಿವಿಧ ಭಕ್ಷ್ಯಾ
ವಳಿಯ ಬಾಣಸದೊಳಗೆ ಬಂದಳು ಮತ್ತಗಜಗಮನೆ ೩೬

ತರಿದ ಕುರಿಗಳ ಹಂದಿಯಡಗಿನ
ಜುರಿತ ರಕುತದ ಮೊಲನ ಖಂಡದ
ತಿರಿದ ಗುಬ್ಬಿಯ ಕೀಸಿ ಸೀಳಿದ ನವಿಲ ಲಾವುಗೆಯ
ತುರುಗಿದೆಲುವಿನ ಸಾಲ ಸುಂಟಿಗೆ
ಮೆರೆವ ಮಾಂಸದ ರಾಸಿಗಳ ಹರ
ದೆರಕೆಗಳ ಕಂಡಬಲೆ ಹೊಗಳಿದಳಡಬಳದ ಮನೆಯ ೩೭

ಆರಲರಿದನೊ ಭೀಮನೀ ಸೂ
ವಾರ ವಿದ್ಯೆಯ ಭಾಪು ವಿಧಿ ಮುನಿ
ದಾರನಾವಂಗದಲಿ ಬರಿಸದು ಶಿವಶಿವಾಯೆನುತ
ನಾರಿ ನಸುನಗುತೊಳಗೆ ಹೊಕ್ಕು ಬ
ಕಾರಿ ಮಂಚದೊಳಿರಲು ನಿದ್ರಾ
ಭಾರ ವಿಹ್ವಲಕರಣನನು ಹೊದ್ದಿದಳು ಲಲಿತಾಂಗಿ ೩೮

ಎಬ್ಬಿಸಲು ಭುಗಿಲೆಂಬನೋ ಮೇ
ಣೊಬ್ಬಳೇತಕೆ ಬಂದೆ ಮೋರೆಯ
ಮಬ್ಬಿದೇಕೆಂದೆನ್ನ ಸಂತೈಸುವನೊ ಸಾಮದಲಿ
ತುಬ್ಬುವದೊ ತಾ ಬಂದ ಬರವಿದು
ನಿಬ್ಬರವಲಾ ಜನದ ಮನಕಿ
ನ್ನೆಬ್ಬಿಸಿಯೆ ನೋಡುವೆನೆನುತ ಸಾರಿದಳು ವಲ್ಲಭನ ೩೯

ಮೆಲ್ಲ ಮೆಲ್ಲನೆ ಮುಸುಕ ಸಡಿಲಿಸಿ
ಗಲ್ಲವನು ಹಿಡಿದಲುಗಲಪ್ರತಿ
ಮಲ್ಲನೆದ್ದನು ನೋಡಿದನು ಪಾಂಚಾಲನಂದನೆಯ
ವಲ್ಲಭೆಯೆ ಬರವೇನು ಮುಖದಲಿ
ತಲ್ಲಣವೆ ತಲೆದೋರುತಿದೆ ತಳು
ವಿಲ್ಲದುಸುರಿರುಳೇಕೆ ಬಂದೆ ಲತಾಂಗಿ ಹೇಳೆಂದ ೪೦

ಸೈರಿಸರು ಬಾಣಸದ ಭವನದ
ನಾರಿಯರು ದುರ್ಜನರು ಖುಲ್ಲ ಕು
ಠಾರರಿವರರಮನೆಯ ನಾಯ್ಗಳು ನಾವು ದೇಶಿಗರು
ಭಾರವಿದು ಕೆಲರರಿಯದಂತಿರೆ
ನಾರಿ ನೀ ಹೇಳೆನುತ ದುಗುಡವಿ
ದಾರ ದೆಸೆಯಿಂದಾಯಿತೆನಲಿಂತೆಂದಳಿಂದುಮುಖಿ ೪೧

ನಿನ್ನೆ ಹಗಲರೆಯಟ್ಟಿ ಕೀಚಕ
ಕುನ್ನಿಯೊದೆದನು ರಾಜಸಭೆಯಲಿ
ನಿನ್ನ ವಂದಿಗರಿರಲು ಪರಿಭವವುಚಿತವೇ ತನಗೆ
ಎನ್ನನವ ಬೆಂಬಳಿಯ ಬಿಡ ನಾ
ನಿನ್ನು ಬದುಕುವಳಲ್ಲ ಪಾತಕ
ನಿನ್ನ ತಾಗದೆ ಮಾಣದೆನಲಾ ಭೀಮ ಖತಿಗೊಂಡ ೪೨

ಉಸುರಲಾಗದು ನಿನ್ನ ಹರಿಬಕೆ
ಮಿಸುಕುವವರಾವಲ್ಲ ಹೆಂಡಿರ
ಗಸಣಿಗೊಂಬವರಲ್ಲ ಹುದುವಿನ ಗಂಡತನವಿದನು
ಶಶಿವದನೆ ಸುಡು ಕಷ್ಟವೀಯಪ
ದೆಸೆಯವರು ನಾವಲ್ಲ ನಿನ್ನವ
ರಸಮ ಸಾಹಸರುಳಿದ ನಾಲ್ವರಿಗರಹು ಹೋಗೆಂದ ೪೩

ರಮಣ ಕೇಳುಳಿದವರು ತನ್ನನು
ರಮಿಸುವರು ಮಾನಾರ್ಥವೆನೆ ನಿ
ರ್ಗಮಿಸುವರು ನೀನಲ್ಲದುಳಿದವರುಚಿತಬಾಹಿರರು
ಮಮತೆಯಲಿ ನೀ ನೋಡು ಚಿತ್ತದ
ಸಮತೆಯನು ಬೀಳ್ಕೊಡು ಕುಠಾರನ
ಯಮನ ಕಾಣಿಸಿ ಕರುಣಿಸೆಂದಳು ಕಾಂತೆ ಕೈಮುಗಿದು ೪೪

ಕಲಹಕಾದೊಡೆ ನಾವು ರಮಿಸುವ
ರುಳಿದವರು ಬಳಿಕೇನು ಗಾದೆಯ
ಬಳಕೆ ಕೆಲಬರು ಗಳಿಸಿದೊಡೆ ಕೆಲರುಂಡು ಜಾರುವರು
ಅಳುಕಿ ನಡೆವವರಲ್ಲ ನಿನ್ನಯ
ಹಳಿವು ಹರಿಬವ ಹೇಳಿ ಚಿತ್ತವ
ತಿಳುಹಿಕೊಂಬದು ನಾವು ಭೀತರು ಧರ್ಮಜನ ಹೊರೆಗೆ ೪೫

ಹೆಂಡತಿಯ ಹರಿಬದಲಿಯೊಬ್ಬನೆ
ಗಂಡುಗೂಸೆ ವೈರಿಯನು ಕಡಿ
ಖಂಡವನು ಮಾಡುವನು ಮೇಣ್ ತನ್ನೊಡಲನಿಕ್ಕುವನು
ಗಂಡರೈವರು ಮೂರು ಲೋಕದ
ಗಂಡರೊಬ್ಬಳನಾಳಲಾರಿರಿ
ಗಂಡರೋ ನೀವ್ ಭಂಡರೋ ಹೇಳೆಂದಳಿಂದುಮುಖಿ ೪೬

ಅಂದು ಕೌರವ ನಾಯಿ ಸಭೆಯಲಿ
ತಂದು ತೋರಿದನುನ್ನತಿಯ ಬಳಿ
ಕಿಂದು ಕೀಚಕ ಕುನ್ನಿಯೊದೆದನು ರಾಜಸಭೆಯೊಳಗೆ
ಅಂದು ಮೇಣಿಂದಾದ ಭಂಗಕೆ
ಕುಂದದಾವುದು ನೀವು ಬಲ್ಲಿದ
ರೆಂದು ಹೊಕ್ಕರೆ ಹೆಣ್ಣ ಕೊಂದಿರಿಯೆಂದಳಿಂದುಮುಖಿ ೪೭

ದಾನವರು ಮಾನವರೊಳೆನ್ನಭಿ
ಮಾನವನು ಕೊಂಬವನ ಹೆಸರನ
ದೇನನೆಂಬೆನು ನೊಂದು ನುಡಿದೊಡೆ ಖಾತಿಯಿಲ್ಲೆಮಗೆ
ಈ ನಪುಂಸಕರೊಡನೆ ಹುಟ್ಟಿದ
ನಾನು ಮೂಗುಳ್ಳವನೆ ಮಾನಿನಿ
ನೀನು ತೋರಿದ ಪರಿಯಲೆಂಬುದು ಭೀತಿ ಬೇಡೆಂದ ೪೮

ಅಂದು ದುಶ್ಶಾಸನನ ಕರುಳನು
ತಿಂದಡಲ್ಲದೆ ತಣಿವು ದೊರಕೊಳ
ದೆಂದು ಹಾಯ್ದೊಡೆ ಹಲುಗಿರಿದು ಮಾಣಿಸಿದನಾ ವ್ಯಥೆಯ
ಇಂದು ಕೀಚಕ ನಾಯನೆರಗುವೆ
ನೆಂದು ಮರನನು ನೋಡಿದರೆ ಬೇ
ಡೆಂದ ಹದನನು ಕಂಡೆ ನೀನೆನಗುಂಟೆಯಪರಾಧ ೪೯

ಹೆಣ್ಣ ಹರಿಬಕ್ಕೋಸುಗವೆ ತ
ಮ್ಮಣ್ಣನಾಜ್ಞೆಯ ಮೀರಿ ಕುಂತಿಯ
ಚಿಣ್ಣ ಬದುಕಿನೆಂದು ನುಡಿವರು ಕುಜನರಾದವರು
ಅಣ್ಣನವರಿಗೆ ದೂರುವುದು ನಾ
ವುಣ್ಣದುರಿಯಿವು ರಾಯನಾಜ್ಞೆಯ
ಕಣ್ಣಿನಲಿ ಬಿಗಿವಡೆದು ಕೆಡೆದೆವು ಕಾಂತೆ ಕೇಳೆಂದ ೫೦

ಹೊದ್ದುವುದು ಫಲುಗುಣನ ಪಾದಕೆ
ಬಿದ್ದು ಯಮನಂದನನ ಮನವನು
ತಿದ್ದುವದು ಸಹದೇವ ನಕುಲರ ಕೈಯಲೆನಿಸುವದು
ಗೆದ್ದು ಕೊಡುವರು ನಿನ್ನ ಪಾಲಿಸ
ದಿದ್ದರಾದೊಡೆ ದೋಷವವರನು
ಹೊದ್ದುವುದು ನೀನೆನ್ನ ಬರಿದೇ ಕಾಡಬೇಡೆಂದ ೫೧

ಗಂಡ ಗರ್ವವ ನುಡಿಯೆವೆಮ್ಮಯ
ದಂಡಿ ತಾನದು ಬೇರೆ ನಾವೀ
ಭಂಡತನದಲಿ ಬದುಕಲರಿಯೆವು ಧರ್ಮಗಿರ್ಮವನು
ಕೊಂಡು ಕೊನರುವರಲ್ಲ ರಾಯನ
ನಂಡಲೆದು ಕೀಚಕನ ತಲೆಯನು
ಚೆಂಡನಾಡಿಸು ರಮಣಿ ಮೇಣರ್ಜುನಗೆ ಹೇಳೆಂದ ೫೨

ತರುಣಿ ದಿಟ ಕೇಳಿಂದು ಮೊದಲಾ
ಗರಸಿ ನೀ ನಾಲ್ವರಿಗೆ ನಾವೆಡೆ
ಮುರಿದವರು ಬಿಟ್ಟವರು ನಿನ್ನಯ ಸೂಳು ಪಾಳೆಯವ
ಅರಸನನು ಪ್ರಾರ್ಥಿಸುವುದರ್ಜುನ
ವರ ನಕುಲ ಸಹದೇವರಿಗೆ ವಿ
ಸ್ತರಿಸಿ ಹೇಳ್ವುದು ನಮ್ಮೊಡನೆ ಫಲಸಿದ್ಧಿಯಿಲ್ಲೆಂದ ೫೩

ಕೇಳುತಿದ್ದಳು ಕೊರಳ ಸೆರೆ ಗೋ
ನಾಳಿಗೌಕಿತು ಬಿಕ್ಕಿ ಬಿಕ್ಕಿ ವಿ
ಲೋಲಲೋಚನೆಯಕಟ ನೆನೆದಳು ಬಾಷ್ಪವಾರಿಯಲಿ
ಶೂಲ ಮರುಮೊನೆಗೊಂಡವೊಲು ಸುಳಿ
ವಾಳೆ ಝಳ ತಾಗಿದವೊಲುದರ
ಜ್ವಾಲೆ ನೆತ್ತಿಗೆ ನಿಲುಕೆ ಹಲುಬಿದಳಬಲೆ ಬಿಸುಸುಯ್ದು ೫೪

ಕೆಂದಳದ ಸೆಕೆಯಲಿ ಕಪೋಲವು
ಕಂದಿ ಕಸರಿಕೆಯಾಯ್ತು ನಿಡುಸುಯಿ
ಲಿಂದ ಸೀಕರಿಯೋದವೇಕಾವಳಿಯ ಮುತ್ತುಗಳು
ಸಂದಣಿಸಿದೆವೆಗಳಲಿ ಬಾಷ್ಪದ
ಬಿಂದು ತಳಿತುದು ನಟ್ಟ ದೃಷ್ಟಿಯೊ
ಳಿಂದುಮುಖಿ ಸೈಗರೆದು ತೂಗಿದಳಡಿಗಡಿಗೆ ಶಿರವ ೫೫

ಆವ ಹೆಂಗುಸನಳಲಿಸಿದೆನಿ
ನ್ನಾವ ಧರ್ಮವನಳಿದೆನೊ ತಾ
ನಾವ ಪಾಪದ ಫಲಕೆ ಪಿಡಿದೆನೊ ಸಂಚಕಾರವನು
ಆವ ಹೆಂಗಸು ನವೆದಳೆನ್ನವೊ
ಲಾವಳಳಲಿದು ಮರುಗಿದಳು ಮ
ತ್ತಾವಳೆನ್ನಂದದಲಿ ಪಡೆದವಳುಂಟೆ ಲೋಕದಲಿ ೫೬

ಇನ್ನು ಹುಟ್ಟದೆಯಿರಲಿ ನಾರಿಯ
ರೆನ್ನವೊಲು ಭಂಗಿತರು ಭುವನದೊ
ಳಿನ್ನು ಜನಿಸಲು ಬೇಡ ಗಂಡರು ಭೀಮಸನ್ನಿಭರು
ಎನ್ನವೊಲು ಪಾಂಡವರವೊಲು ಸಂ
ಪನ್ನ ದುಃಖಿಗಳಾರು ನವೆದರು
ಮುನ್ನಿನವರೊಳಗೆಂದು ದ್ರೌಪದಿ ಹಿರಿದು ಹಲುಬಿದಳು ೫೭

ಆವ ಗರಳವ ಕುಡಿವೆನೋ ಮೇ
ಣಾವ ಬೆಟ್ಟವನಡರಿ ಬೀಳ್ವೆನೊ
ಯಾವ ಮಡುವನು ಹೊಗುವೆನೋ ಹಾಸರೆಯ ಗುಂಪಿನಲಿ
ಆವ ಕುಂತವ ಹಾಯ್ವೆನೋ ಮೇ
ಣಾವ ಪಾವಕನೊಳಗೆ ಹೊಗುವೆನೊ
ಸಾವು ಸಮನಿಸದೆನಗೆನುತ ಮರುಗಿದಳು ನಳಿನಾಕ್ಷಿ ೫೮

ಮಂದೆಗೆಳಸಿದ ಪಾಪಿ ಕೌರವ
ನಂದು ಮುಂದಲೆವಿಡಿದು ಸೈಂಧವ
ಬಂದು ಬಳಿಕಾರಣ್ಯವಾಸದೊಳೆನ್ನನೆಳದೊಯ್ದ
ಇಂದು ಕೀಚಕ ನಾಯ ಕಾಲಲಿ
ನೊಂದೆ ನಾನೀ ಮೂರು ಬಾರಿಯೆ
ಬಂದ ಭಂಗವೆ ಸಾಕೆನುತ ಬಸವಳಿದಳಿಂದುಮುಖಿ ೫೯

ಜನನವೇ ಪಾಂಚಾಲರಾಯನ
ಮನೆ ಮನೋವಲ್ಲಭರದಾರೆನೆ
ಮನುಜಗಿನುಜರು ಗಣ್ಯವೇ ಗೀರ್ವಾಣರಿಂ ಮಿಗಿಲು
ಎನಗೆ ಬಂದೆಡರೀ ವಿರಾಟನ
ವನಿತೆಯರುಗಳ ಮುಡಿಯ ಕಟ್ಟುವ
ತನುವ ತಿಗುರುವ ಕಾಲನೊತ್ತುವ ಕೆಲಸದುತ್ಸಾಹ ೬೦

ಹಗೆಗಳಿಗೆ ತಂಪಾಗಿ ಬದುಕುವ
ಮುಗುದರಿನ್ನಾರುಂಟು ಭಂಗಕೆ
ಹೆಗಲ ಕೊಟ್ಟಾನುವ ವಿರೋಧಿಗಳುಂಟೆ ಲೋಕದಲಿ
ವಿಗಡ ಬಿರುದನು ಬಿಸುಟು ಬಡಿಹೋ
ರಿಗಳು ಪಾಂಡವರಂತೆ ಮೂಗು
ರ್ಚಿಗಳದಿನ್ನಾರುಂಟೆನುತ ಮರುಗಿದಳು ನಳಿನಾಕ್ಷಿ ೬೧

ಕಾಲನನು ಕೆರಳಿದೊಡೆ ಮುರಿವೆ
ಚ್ಚಾಳುತನದವರೆನ್ನನೊಬ್ಬಳ
ನಾಳಲಾರಿರಿ ಪಾಪಿಗಳಿರಪಕೀರ್ತಿಗಳುಕಿರಲ
ತೋಳ ಹೊರೆ ನಿಮಗೇಕೆ ಭೂಮೀ
ಪಾಲ ವಂಶದೊಳುದಿಸಲೇತಕೆ
ಕೂಳುಗೇಡಿಂಗೊಡಲ ಹೊರುವಿರಿಯೆಂದಳಿಂದುಮುಖಿ ೬೨

ಧರೆಯ ಭಂಡಾರವನು ಪುರವನು
ಕರಿತುರಗ ರಥ ಪಾಯದಳವನು
ಕುರುಕುಲಾಗ್ರಣಿ ಸೆಳೆದುಕೊಂಡನು ನಿಮ್ಮ ಹೊರವಡಿಸಿ
ದುರುಳ ಕೀಚಕಗೆನ್ನ ಕೊಟ್ಟಿರಿ
ಪರಿಮಿತದಲಿರವಾಯ್ತು ನಿಮ್ಮೈ
ವರಿಗೆ ಲೇಸಾಯ್ತಕಟಯೆಂದಬುಜಾಕ್ಷಿ ಹಲುಬಿದಳು ೬೩

ಭಾವ ಭಾಗ್ಯಾಧಿಕನು ಕೌರವ
ದೇವನರಸುಗಳೊಡೆಯತನವನು
ನೀವು ಕೃಷ್ಣನ ಕೂರ್ಮೆ ಧರ್ಮದಿ ಪಾಲಿಸಿದಿರೀಗ
ನೀವು ತಟತಟವಾಗಿ ಲೋಗರ
ಸೇವೆಯಲಿ ಬೆಂದೊಡಲ ಹೊರುವಿರಿ
ಸಾವವಳು ನಿಮಗಂಜಲೇಕೆಂದಬಲೆಯೊರಲಿದಳು ೬೪

ಭೀಮ ಕೊಟ್ಟೈ ತನಗೆ ಸಾವಿನ
ನೇಮವನು ನಿಮ್ಮಣ್ಣನಾಜ್ಞೆ ವಿ
ರಾಮವಾಗದೆ ಬದುಕಿ ಧರ್ಮದ ಮೈಸಿರಿಯನರಿದು
ಕಾಮಿನಿಯ ಕೇಳಿಯಲಿ ನೆನೆವುದು
ತಾಮಸದಿ ತಾ ಮೀರಿ ನುಡಿದು
ದ್ದಾಮತೆಯ ಸೈರಿಸುವದೆಂದೆರಗಿದಳು ಚರಣದಲಿ ೬೫

ಎನಲು ಕಂಬನಿದುಂಬಿದನು ಕಡು
ನೆನೆದುದಂತಃಕರಣ ರೋಷದ
ಘನತೆ ಹೆಚ್ಚಿತು ಹಗೆಗಳನು ಹಿಂಡಿದನು ಮನದೊಳಗೆ
ತನುಪುಳಕವುಬ್ಬರಿಸಿ ಮೆಲ್ಲನೆ
ವನಿತೆಯನು ತೆಗೆದಪ್ಪಿದನು ಕಂ
ಬನಿಯದೊಡೆದನು ಸೆರಗಿನಲಿ ಕಲಿಭೀಮ ಮಾನಿನಿಯ ೬೬

ಕುರುಳ ನೇವರಿಸಿದನು ಗಲ್ಲವ
ನೊರಸಿ ಮುಂಡಾಡಿದನು ಮಂಚದ
ಹೊರೆಯ ಗಿಂಡಿಯ ನೀರಿನಲಿ ತೊಳೆದನು ಮುಖಾಂಬುಜವ
ಅರಸಿ ಬಿಡು ಬಿಡು ಖಾತಿಯನು ವಿ
ಸ್ತರಿಸಲೇಕೆಮ್ಮಣ್ಣನಾಜ್ಞೆಯ
ಗೆರೆಯ ದಾಂಟಿದೆ ದಾಂಟಿದೆನು ಹೋಗೆಂದನಾ ಭೀಮ ೬೭

ಬಸುರ ಬಗಿವೆನು ಕೀಚಕನ ನಸು
ಮಿಸುಕಿದೊಡೆ ವೈರಾಟ ವಂಶದ
ಹೆಸರ ತೊಡೆವೆನು ನಮ್ಮನರಿದೊಡೆ ಕೌರವವ್ರಜವ
ಕುಸುರಿದರಿವೆನು ಭೀಮ ಕಷ್ಟವ
ನೆಸಗಿದನು ಹಾಯೆಂದರಾದೊಡೆ
ಮುಸುಡನಮರಾದ್ರಿಯಲಿ ತೇವೆನು ದೇವಸಂತತಿಯ ೬೮

ಮುನಿದನಾದೊಡೆಯಣ್ಣ ತನವಿಂ
ದಿನಲಿ ಹರಿಯಲಿ ಪಾರ್ಥ ನಕುಲರು
ಕನಲಿದೊಡೆ ಕೈದೋರುವೆನು ಸಹದೇವನಿವರುಗಳ
ಅನುಜನೆಂಬೆನೆ ಕೃಷ್ಣ ಹಾಯ್ದೆರೆ
ಘನಮುರಾರಿಯ ಮೀರುವೆನು ಬಳಿ
ಕೆನಗೆ ಸಮಬಲರಾರು ತರಿವೆನು ಕೀಚಕಾನ್ವಯವ ೬೯

ಈಸು ದಿನವೆಮ್ಮಣ್ಣನಾಜ್ಞೆಯ
ಪಾಶದಲಿ ಸಿಕ್ಕಿರ್ದೆ ಸಿಂಹದ
ಕೂಸ ನರಿ ಕೆಣುಕುವವೊಲೀ ಕುರು ಕೀಚಕಾದಿಗಳು
ಗಾಸಿಯಾದರು ಕೆಣಕಿ ನಾಯ್ಗಳ
ವೀಸ ಬಡ್ಡಿಯಲಸುವ ಕೊಂಬೆನು
ವಾಸಿ ಧರ್ಮದ ಮೇರೆದಪ್ಪಿತು ಕಾಂತೆ ಕೇಳೆಂದ ೭೦

ತರುಣಿ ಕೀಚಕ ಕೌರವೇಂದ್ರರ
ಹರಣಕಿದ ಕೋ ಸಂಚಕಾರವ
ಕೆರಳಿದೊಡೆಯೀ ಭೀಮ ಬಗೆವನೆ ನೀತಿಗೀತಿಗಳ
ಕೆರಳಿಚಿದೆಯಿನ್ನೇನು ನಿನ್ನಯ
ಹರಿಬವೆನ್ನದು ನಾಯಿ ಜಾರನ
ಕರೆದು ಸಂಕೇತದಲಿ ಸೂಚಿಸು ನಾಟ್ಯಮಂದಿರವ ೭೧

ಅಲ್ಲಿಗಿರುಳೈತಂದು ಮರೆಯಲಿ
ಖುಲ್ಲನುದರವ ಬಗಿದು ರಕುತವ
ಚೆಲ್ಲುವೆನು ಶಾಕಿನಿಯರಿಗೆ ಸಂದೇಹ ಬೇಡಿದಕೆ
ಅಲ್ಲಿ ಕೆಲಬಲನರಿದುದಾದೊಡೆ
ಬಲ್ಲೆನದಕೌಷಧಿಯ ಕರೆ ಮರೆ
ಯಿಲ್ಲ ಮಾನಿನಿ ಹೋಗೆನುತ ಬೀಳ್ಕೊಟ್ಟನಂಗನೆಯ ೭೨

ಹರುಷದಲಿ ಹೆಚ್ಚಿದಳು ಪುರುಷರ
ಪುರುಷನಲ್ಲಾ ಭೀಮ ತನ್ನಯ
ಪರಮ ಸುಕೃತೋದಯವಲಾ ನೀನೊಬ್ಬನೆಂದೆನುತ
ಅರಸಿ ಕಾಂತನ ಬೀಳುಕೊಂಡಳು
ತಿರುಗಿದಳು ನಿಜಭವನಕಿತ್ತಲು
ತರಣಿ ತೆಗೆದನು ತಾವರೆಯ ಬಾಗಿಲಿನ ಬೀಯಗವ ೭೩

ಆ ದಿವಸವರಮನೆಗೆ ಬರುತ ವೃ
ಕೋದರನ ವಲ್ಲಭೆಯ ಕಂಡನು
ಕೈದುಡುಕಲಂಜಿದನು ಮಾತಾಡಿಸಿದನಂಗನೆಯ
ಹೋದಿರುಳು ಯುಗವಾಗಿ ಸವೆದುದು
ನೀ ದಯಾಂಬುಧಿ ಕುಸುಮಶರ ಯಮ
ನಾದನದ ನೀ ಬಲ್ಲೆಯೆಂದನು ಕೀಚಕನು ನಗುತ ೭೪

ಕುಸುಮಶರ ಯಮನಹನು ಅಮೃತವು
ವಿಷವಹುದು ಬಳಿಕಾಲಿಕಲುಗಳು
ಬಿಸಿಯಹವು ಬಾಂಧವರು ವೈರಿಗಳಹರು ನಿಮಿಷದಲಿ
ಒಸೆದರೊಲ್ಲದರಹರು ಲೋಗರ
ಶಶಿವದನೆಗಳುಪಿದ ದುರಾತ್ಮನ
ವಸುಧೆ ಹೊರದೆಲೆ ಪಾಪಿ ಕೀಚಕಯೆಂದಳಿಂದುಮುಖಿ ೭೫

ಬಳಿಕ ನಿನ್ನ ಪುರಾಣ ಧರ್ಮವ
ತಿಳಿದುಕೊಂಬೆನಿದೊಮ್ಮೆ ನಿನ್ನಯ
ಲಲಿತ ಕರುಣ ಕಟಾಕ್ಷಕವಚವ ತೊಡಿಸಿ ತನ್ನೊಡಲ
ಅಳುಕದೆಸುವ ಮನೋಜನಂಬಿನ
ಹುಳುಕ ಮುರಿ ಡಿಂಗರಿಗನಹೆನೆಂ
ದಳಿಮನದಲಾ ಖೂಳನಬುಜಾನನೆಗೆ ಕೈಮುಗಿದ ೭೬

ಅರಿದರಾದೊಡೆ ನಿನ್ನ ವಂಶವ
ತರಿವರೆನ್ನವರೆಲವೊ ಕೆಲಬಲ
ನರಿಯದಂದದಿ ಬಂದು ನಾಟ್ಯದ ಗರುಡಿಯೊಳಗಿಹುದು
ನೆರೆದುದಾಯುಷ ನಿನಗೆ ಕತ್ತಲೆ
ಮನೆಯೊಳಾನೈತಹೆನುಯೆನ್ನನು
ಮರೆದು ನೀ ಬಿಡೆಯಾದುದಾಗಲಿಯೆಂದಳಿಂದುಮುಖಿ ೭೭

ಖಳ ಹಸಾದವ ಹಾಯ್ಕಿ ತನ್ನಯ
ನಿಳಯಕೈದಿದನಬುಜ ಬಾಂಧವ
ನಿಳಿದನಸ್ತಾಚಲದ ತಪ್ಪಲ ತಾವರೆಯ ಬನಕೆ
ನಳಿನಮುಖಿ ನಲವೇರಿ ಕಗ್ಗ
ತ್ತಲೆಯ ಹಬ್ಬುಗೆಯೊಳಗೆ ಕಂಗಳ
ಬೆಳಗು ಬಟ್ಟೆಯ ತೋರೆ ಬಂದಳು ಬಾಣಸಿನ ಮನೆಗೆ ೭೮

ಭೀಮ ನಿಂದಿರು ನಾಟ್ಯನಿಲಯವ
ನಾ ಮದಾಂಧಗೆ ನುಡಿದು ಬಂದೆನು
ತಾಮಸವ ಮಾಡದಿರು ಹೂಡದಿರಲ್ಪಬುದ್ಧಿಗಳ
ಕಾಮುಕನನಡೆಗೆಡಹಿ ನಿಜ ಸು
ಪ್ರೇಮವನು ತೋರೆನಲು ನಗುತು
ದ್ದಾಮನೆದ್ದನು ಘಳಿಯನುಟ್ಟನು ಮಲ್ಲಗಂಟಿನಲಿ ೭೯

ಖಳನ ಮುರಿಯೆಂದಬಲೆ ನೊಸಲಲಿ
ತಿಲಕವನು ರಚಿಸಿದಳು ಸೇಸೆಯ
ತಳಿದಳೇರಿಸಿ ತಿಗುರ ಗೆಲಿದಳು ಹಿಣಿಲ ಹೊಸ ಪರಿಯ
ಬಲುಭುಜನ ಹರಸಿದಳು ಕಗ್ಗ
ತ್ತಲೆಯ ಹಬ್ಬುಗೆಯೊಳಗೆ ನಾಟ್ಯದ
ನಿಳಯ ಮಧ್ಯದ ಮಣಿಯ ಮಂಚದ ಮೇಲೆ ಪವಡಿಸಿದ ೮೦

ಉರಿವ ಮಾರಿಯ ಬೇಟದಾತನು
ತುರುಗಿದನು ಮಲ್ಲಿಗೆಯ ಮೊಗ್ಗೆಯ
ನಿರಿಕಿ ತಾ ಪೂಸಿದನು ಸಾದು ಜವಾಜಿ ಕತ್ತುರಿಯ
ಮೆರೆವ ಗಂಡುಡಿಗೆಯನು ರಚಿಸಿದ
ಸೆರಗಿನೊಯ್ಯಾರದಲಿ ಸುರಗಿಯ
ತಿರುಹಿತಿರುಳೊಬ್ಬನೆ ನಿಜಾಲಯದಿಂದ ಹೊರವಂಟ ೮೧

ಕಾಲಪಾಶದಲೆಳಸಿಕೊಂಬ ಕ
ರಾಳಮತಿ ಸುಡುಗಾಡಲೈತಂ
ದಾಲಯವ ಹೊಕ್ಕನು ಕೃತಾಂತನ ಬಾಯ ಹೊಗುವಂತೆ
ಮೇಲೆ ಮೇಲವಶಕುನ ಶತಕವ
ನಾಲಿಸದೆ ಸುಮ್ಮಾನದಲಿ ಕೇ
ಡಾಳಿ ಬಂದನು ಮಂಚವಿದ್ದೆಡೆಗಾಗಿ ತಡವರಿಸಿ ೮೨

ವನಜಮುಖಿ ವೀಳೆಯವನನುಲೇ
ಪನವ ಮಲ್ಲಿಗೆಯರಳ ತೊಡಿಗೆಯ
ನನುಪಮಾಂಬರವಿದೆ ಮನೋಹರವಹರೆ ಚಿತ್ತೈಸು
ನಿನಗೆ ಪಾಸಟಿಯಾನುಯೆನ್ನವೊ
ಲನಿಮಿಷರೊಳರಾರುಂಟು ಚೆಲುವರು
ಮನುಜರೆನ್ನನು ಹೋಲುವರೆ ಸೈರಂಧ್ರಿ ಕೇಳೆಂದ ೮೩

ಎನ್ನವೋಲ್ ಪುರುಷರಲಿ ಚೆಲುವರ
ಮುನ್ನ ನೀ ಕಂಡರಿದೆಯಾದೊಡೆ
ಯೆನ್ನ ಮೇಲಾಣೆಲೆಗೆ ಹುಸಿಯದೆ ಹೇಳು ಹೇಳೆಂದು
ಮುನ್ನ ನಿನ್ನಂತಪ್ಪ ಸತಿಯರು
ಎನ್ನನೇ ಬಯಸುವರು ನಾರಿಯ
ರೆನ್ನ ಕಂಡರೆ ಸೋಲದವರಿಲ್ಲೆಲೆಗೆ ನಿನ್ನಾಣೆ ೮೪

ಎಲವೊ ಕೀಚಕ ನಿನ್ನ ಹೋಲುವ
ಚೆಲುವರಿಲ್ಲಂತಿರಲಿ ಲೋಕದ
ಲಲನೆಯರ ಪರಿಯಲ್ಲ ತನ್ನಯ ರೂಪು ಬೇರೊಂದು
ಇಳೆಯೊಳೆನಗೆಣೆಯಿಲ್ಲ ನಿನಗಾ
ನೊಲಿದು ಬಂದೆನು ತನ್ನ ಪರಿಯನು
ಬಳಿಕ ನೋಡಾ ಬೇಗ ತೋರುವೆನೆಂದನಾ ಭೀಮ ೮೫

ಎನಗೆ ಪುರುಷರು ಸೋಲದವರಿ
ಲ್ಲೆನಗೆ ಪಾಸಟಿ ನೀನು ನಿನಗಾ
ಮನವೊಲಿದೆ ನೀ ನೋಡು ತನ್ನಯ ಹೆಣ್ಣುತನದನುವ
ಎನಲು ಹರುಷದಲುಬ್ಬಿ ಕೀಚಕ
ನನಿಲಜನ ಮೈದಡವಿ ವೃತ್ತ
ಸ್ತನವ ಕಾಣದೆ ಹೆದರಿ ಬಳಿಕಿಂತೆಂದನವ ನಗುತ ೮೬

ಎಲೆಗೆ ಕಲುಮೈಯಾದೆ ಕಡುಗೋ
ಮಲತೆಯೆತ್ತಲು ಕರ್ಕಶಾಂಗದ
ಬಲುಹಿದೆತ್ತಲು ಮಾಯ ವೇಷವ ಧರಿಸಿದೆಯೊ ಮೇಣು
ತಿಳುಹೆನಲು ಕೇಳೆಲವೊ ಪರ ಸತಿ
ಗಳುಪಿದಾತಂಗಮೃತ ವಿಷ ಕೋ
ಮಲತೆ ಕರ್ಕಶವಹುದೆನುತ ತುಡುಕಿದನು ಮುಂದಲೆಯ ೮೭

ಚಪಳೆ ಫಡ ಹೋಗೆನುತ ಹಾಯ್ದನು
ಕೃಪಣಮತಿ ಮುಂಗೈಯಲನಿಲಜ
ನಪರ ಭಾಗಕೆ ಹಾಯ್ದು ಹಿಡಿದನು ಕೀಚಕನ ತುರುಬ
ವಿಪುಳಬಲ ಕಳವಳಿಸಿದನು ಕಡು
ಕುಪಿತನಾದನು ಹೆಂಗುಸಲ್ಲಿವ
ನಪಸದನು ತೆಗೆ ಕರುಳನೆನುತೊಳಹೊಕ್ಕು ಹೆಣಗಿದನು ೮೮

ತಿವಿದನವನುರವಣಿಸಿ ಮಾರುತಿ
ಕವಿದು ಹೆಣಗಿದನಡಸಿ ಹೊಯ್ದೊಡೆ
ಬವರಿಯಲಿ ಟೊಣದೌಕಿದೊಡೆ ಮಡ ಮುರಿಯದೊಳಹೊಕ್ಕು
ಸವಡಿ ಮಂದರದಂತೆ ಕೀಚಕ
ಪವನಸುತರೊಪ್ಪಿದರು ಭೀಮನ
ಯುವತಿ ನಗುತಾಲಿಸುತಲಿದ್ದಳು ಹೊಯ್ಲ ಹೋರಟೆಯ ೮೯

ಎರಗಿದೊಡೆ ಕೀಚಕನ ಗಾಯಕೆ
ತರವರಿಸಿ ಕಲಿಭೀಮ ಮಂಡಿಸಿ
ಮರೆವಡೆದು ಮುರಿದೆದ್ದು ರೋಷದಲೌಡನೊಡೆಯಗಿದು
ಬರಸಿಡಿಲು ಪರ್ವತದ ಶಿಖರವ
ನೆರಗುವಂತಿರೆ ಖಳನ ನೆತ್ತಿಯ
ನೆರಗಿದನು ರಣಧೀರನುನ್ನತ ಬಾಹುಸತ್ವದಲಿ ೯೦

ಅರಿಯ ಮುಷ್ಟಿಯ ಗಾಯದಲಿ ತಲೆ
ಬಿರಿಯೆ ತನು ಡೆಂಡಣಿಸಿ ಕಂಗಳು
ತಿರುಗಿ ಜೋಲಿದು ಮೆಲ್ಲ ಮೆಲ್ಲನೆಯಸುವ ಪಸರಿಸುತ
ಕೆರಳಿ ಕರಿ ಕೇಸರಿಯ ಹೊಯ್ದುರೆ
ತಿರುಗುವಂತಿರೆ ಭೀಮಸೇನನ
ಬರಿಯ ತಿವಿದನು ಬೀಳೆನುತ ಖಳುರಾಯ ಹಲು ಮೊರೆದ ೯೧

ತಿರುಗಿ ಪೈಸರವೋಗಿ ಪವನಜ
ಮರಳಿ ತಿವಿದನು ಕೀಚಕನ ಪೇ
ರುರವನೆದೆ ಜರ್ಝರಿತವಾಗಲು ಕಾರಿದನು ಕರುಳ
ಬಿರಿದವಾಲಿಗಳೊಲೆದೊಲೆದು ಕ
ಣ್ಣುರುಗಿ ಧೊಪ್ಪನೆ ಕೆಡೆದು ನಿಮಿಷಕೆ
ಹೊರಳಿ ಹರಣವ ಕಳುಹಿ ಕಳೆದುದು ಕಾಯ ಕೀಚಕನ ೯೨

ತಲೆಯನೆದೆಯೊಳಗಿಕ್ಕಿ ಕೈ ಕಾ
ಲ್ಗಳನು ಬಸುರೊಳು ಸಿಕ್ಕಿ ದೂರಕೆ
ತೊಲಗಿದನು ತೋರಿದನು ರಮಣಿಗೆ ಕೀಚಕನ ಹದನ
ಖಳನ ಕಾಲನ ಕೋಣ ತುಳಿದಂ
ತಿಳೆಯೊಳೊರಗಿರೆ ಕಂಡು ಕಾಮಿನಿ
ಕಳಕಳಿಸಿದಳು ಭೀಮಸೇನನಪ್ಪಿ ಮುಂಡಾಡಿ ೯೩

ತರುಣಿ ಬಿಡು ಸಾರೆನುತ ಪವನಜ
ಸರಿದನತ್ತಲು ದ್ರುಪದನಂದನೆ
ಕರೆದು ನುಡಿದಳು ಕಾಹಿನವರಿಗೆ ಕೀಚಕನ ಹದನ
ದುರುಳ ಬಲುಹಿಂದೆನ್ನನೆಳೆದೊಡೆ
ಕೆರಳಿದರು ಗಂಧರ್ವರೀತಗೆ
ಹರುವ ಕಂಡರು ನೋಡಿಯೆನೆ ಹರಿತಂದರವಳೊಡನೆ ೯೪

ಅರಸಿ ಕೈದೀವಿಗೆಯಲವನಿಹ
ಪರಿಯ ಕಂಡರು ಕಾಹಿನವದಿರು
ಹರಿದು ಹೇಳಿದರಾತನನುಜಾತರಿಗೆ ಬೇಗದಲಿ
ಕರದಿ ಬಾಯ್ಗಳ ಹೊಯ್ದು ಹೃದಯದೊ
ಳುರಿ ಚಡಾಳಿಸೆ ಬಿಟ್ಟ ಮಂಡೆಯೊ
ಳಿರದೆ ಬಂದರು ಕೀಚಕನ ಸೋದರರು ಬಾಯ್ವಿಡುತ ೯೫

ಆರು ಗತಿಯೆಮಗಕಟ ಕೀಚಕ
ವೀರ ದೇಶಿಗರಾದೆವಾವಿ
ನ್ನಾರ ಸೇರುವೆವೆನುತ ಹಲುಬಿದರವನ ತಕ್ಕೈಸಿ
ಕ್ರೂರಕರ್ಮರು ನಿನ್ನ ಕೊಂದವ
ರಾರು ಹಾ ಹಾಯೆನುತ ಹಲುಬಲು
ವಾರಿಜಾನನೆ ಮುಗುಳುನಗೆಯಲಿ ನೋಡಿದಳು ಖಳರ ೯೬

ಇವಳಿಗೋಸುಗವಳಿದನೇ ಸಹ
ಭವನು ತಪ್ಪೇನೆನುತ ನಡುವಿರು
ಳವದಿರೈತಂದರುಹಿದರು ವೈರಾಟ ರಾಯಂಗೆ
ಅವಳನಾತನ ಕೂಡೆ ಕಳಹುವೊ
ಡೆವಗೆ ನೇಮವೆಯೆಂದು ಬೀಳ್ಕೊಂ
ಡವರು ಮರಳಿದು ಬಂದು ಹಿಡಿದರು ಕಮಲಲೋಚನೆಯ ೯೭

ತೆಗೆದು ಮಂಚದಲವನ ಹೆಣನನು
ಬಿಗಿದರವಳನು ಕಾಲ ದೆಸೆಯಲಿ
ನಗುವುದಿನ್ನೊಮ್ಮೆನುತ ಕಟ್ಟಿದರವರು ಕಾಮಿನಿಯ
ಬೆಗಡುಗೊಂಡಂಭೋಜಮುಖಿಯು
ಬ್ಬೆಗದೊಳೊದರಿದಳಕಟಕಟ ಪಾ
ಪಿಗಳಿರಾ ಗಂಧರ್ವರಿರ ಹಾಯೆನುತ ಹಲುಬಿದಳು ೯೮

ಕೇಳಕಟ ಜಯನೇ ಜಯಂತನೆ
ಕೇಳು ವಿಜಯ ಜಯೋದ್ಭವನೆ ನೀ
ಕೇಳು ಜಯಸೇನನೆ ದುರಾತ್ಮಕರೆನ್ನನೆಳೆದೊಯ್ದು
ಬೀಳಿಸುವರಗ್ನಿಯಲಿ ನೀವಕ
ಟೇಳಿ ತಡವೇಕೆನುತ ಮೊರೆಯಿಡೆ
ಕೇಳಿದನು ಕಲಿಭೀಮ ಸತಿಯಾಕ್ರಂದನ ಧ್ವನಿಯ ೯೯

ಈ ದುರಾತ್ಮರಿಗಗ್ರಜನ ಸಾ
ವೈದದೇ ತಮ್ಮಣ್ಣನಲ್ಲಿಗೆ
ಹೊಯ್ದು ಕಳುಹಲುಬೇಕಲಾ ಕುನ್ನಿಗಳನೀ ಕ್ಷಣಕೆ
ಬೈಯ್ದು ಫಲವೇನೆಂದು ಮಾರುತಿ
ಹಾಯ್ದು ಝಂಕಿಸಿ ರುದ್ರಭೂಮಿಯ
ನೆಯ್ದಿದನು ಫಡಯೆನುತ ಕೊಂಡನು ಮುರಿದು ಹೆಮ್ಮರನ ೧೦೦

ಎಲೆಲೆ ಗಂಧರ್ವಕನ ಹೆಂಗುಸ
ಕಳಚಿ ಬಿಡಿರೊ ಪಾಪಿ ಹೋಗಲಿ
ಕೊಲೆಗಡಿಗನಿವನೆನುತ ಹೆಣನನು ಬಿಸುಟು ದೆಸೆದೆಸೆಗೆ
ತಲೆಗೆದರಿ ತೆಗೆದೋಡೆ ನಕ್ಕನು
ಕಳಕಳಸಿ ಕಲಿಭೀಮನೆಲೆ ನಾ
ಯ್ಗಳಿರ ಹೋದೊಡೆ ಬಿಡುವೆನೇ ಹಾಯೆನುತ ಕೈಕೊಂಡ ೧೦೧

ತಿರುಹಿದನು ಹೆಮ್ಮರನನವದಿರ
ನರೆದು ನಿಟ್ಟೊರೆಸಿದನು ದೆಸೆ ದೆಸೆ
ಗೊರಲಿ ಚಿಮ್ಮುವ ಚಪಲರನು ಬೆಂಬತ್ತಿ ಬರಿಕೈದು
ಕುರಿದರಿದು ಮಾಡಿದನು ನೂರೈ
ವರನು ಕೊಂದನು ಮರನ ಹಾಯಿಕಿ
ಮರಳಿ ಮಿಣ್ಣನೆ ಬಂದು ಹೊಕ್ಕನು ಬಾಣಸದ ಮನೆಯ ೧೦೨

ಸುಳಿಯಲಮ್ಮದು ಪೌರಜನವಿವ
ರಳಿವ ವಚನಿಸಲಮ್ಮದೀಕೆಯ
ನಲುಕಲಮ್ಮದು ನೋಡಲಮ್ಮದು ಮಂದಿ ಗುಜುಗುಜಿಸಿ
ನಳಿನಮುಖಿ ನಸುನಗುತ ತಿಳಿಗೊಳ
ದೊಳಗೆ ಹೊಕ್ಕಳು ಮಿಂದು ಬೀದಿಗ
ಳೊಳಗೆ ಬರುತಿರೆ ಕಂಡು ಕೈಗಳ ಮುಗಿದುದಖಿಳ ಜನ ೧೦೩

ಈಕೆಗೋಸುಗವಳಿದನಕಟವಿ
ವೇಕಿ ಕೀಚಕನೆಂದು ಕೆಲಬರಿ
ದೇಕೆ ನಮಗೀ ಚಿಂತೆ ಶಿವ ಶಿವಯೆಂದು ಕೆಲಕೆಲರು
ನೂಕಿ ಕವಿದುದು ಮಂದಿ ಮಧ್ಯದೊ
ಳೀಕೆ ಮೆಲ್ಲನೆ ಬರುತಲಾ ಲೋ
ಕೈಕ ವೀರನ ಕಂಡಳಾ ಬಾಣಸಿನ ಬಾಗಿಲಲಿ ೧೦೪

ಮುಗುಳು ನಗೆಯಲಿ ಕಣ್ಣ ಕಡೆಯಲಿ
ವಿಗಡ ಭೀಮನ ನೋಡಿ ಕೈಗಳ
ಮುಗಿದೆವಾವ್ ಗಂಧರ್ವಪತಿಗೆ ನಮೋ ನಮೋಯೆನುತ
ಹೊಗರಿಡುವ ಹರುಷದಲಿ ರೋಮಾ
ಳಿಗಳ ಗುಡಿಯಲಿ ತನ್ನ ನಿಳಯಕೆ
ಮುಗುದೆ ಬಂದಳು ಸೂರ್ಯನಡರಿದನುದಯ ಪರ್ವತವ ೧೦೫

ಊರೊಳಗೆ ಗುಜುಗುಜಿಸಿ ವಾರ್ತಾ
ಭಾರ ಮಸಗಿತು ನೆರೆದ ನೆರವಿಯೊ
ಳಾರ ಬಾಯ್ಗಳೊಳಾದೊಡೆಯು ಜಪವಾಯ್ತು ಜನಜನಿತ
ಭೂರಿ ಚಿಂತಾತುರ ವಿರಾಟನು
ಮಾರಿಯೋ ಸೈರಂಧ್ರಿಯೋ ಈ
ನಾರಿಯಿರಬೇಡೆಂದು ತನ್ನಯ ಸತಿಗೆ ನೇಮಿಸಿದ ೧೦೬

ಅಳಲು ಕೈಮಿಗಲಾ ವಿರಾಟನ
ಲಲನೆ ಸೈರಂಧ್ರಿಯನು ಕರೆಸಿದ
ಳೆಲೆ ಮಹಾತುಮೆ ತಾಯೆ ನಿಮಗಂಜುವೆವು ಶರಣೆನುತ
ಹೊಳಲೊಳಿದ್ದರೆ ಭೀತಿ ಘನ ನೀ
ವೊಲಿದ ಠಾವಿಗೆ ಬಿಜಯ ಮಾಡುವು
ದುಳುಹ ಬೇಹುದು ತಮ್ಮನೆನಲಿಂತೆಂದಳಿಂದುಮುಖಿ ೧೦೭

ಎಮ್ಮದೇನಪರಾಧ ದೇವಿಯೆ
ನಿಮ್ಮ ತಮ್ಮನು ತಪ್ಪಿ ನಡೆದೊಡೆ
ಯೆಮ್ಮ ರಮಣರು ಸೈರಿಸದೆ ಸೀಳಿದರು ದುರ್ಜನರ
ನಿಮ್ಮ ನಾವೋಲೈಸಿ ಮರಳಿದು
ನಿಮ್ಮ ಕೆಡಿಸುವರಲ್ಲ ಧೂರ್ತರು
ತಮ್ಮ ಮತದಲಿ ತಾವೆ ಕೆಟ್ಟರು ನೀತಿ ಬಾಹಿರರು ೧೦೮

ತಾವು ತಮ್ಮಿಂದಳಿದರದು ಸಾ
ಕಾವು ನಿಮಗಂಜುವೆವು ನಿಮ್ಮಲಿ
ಯಾವುದೂ ತಪ್ಪಿಲ್ಲ ನೀವಿಲ್ಲಿರಲು ಬೇಡೆನಲು
ನಾವು ಮುನ್ನಿಹರಲ್ಲ ನಿಮ್ಮಯ
ಸೇವೆಯಲಿ ಹದಿಮೂರು ದಿವಸವು
ನೀವು ನೂಕಿದೊಡಿರದೆ ಮಾಣೆವು ದೇವಿ ಚಿತ್ತೈಸು ೧೦೯

ಅಳುಕದಿರಿ ಹದಿಮೂರು ದಿವಸವ
ಕಳೆದ ಬಳಿಕೆಮಗೆಲ್ಲ ಲೇಸಹು
ದಳಿದು ಹೋದರು ದುಷ್ಟರಾದವರಿನ್ನು ಭಯ ಬೇಡ
ಕಲಹದವರಾವಲ್ಲೆನುತ ನಿಜ
ನಿಳಯವನು ಸಾರಿದಳು ದುರುಪದಿ
ಗಳಿಗೆ ಗಳಿಗೆಗೆ ಕೀಚಕನ ವೃತ್ತಾಂತ ಪಸರಿಸಿತು ೧೧೦






ಕೃಪೆ :  http://gaduginabharata.blogspot.in/
Contributors

ಆದಿಪರ್ವ: ೦೩. ಮೂರನೆಯ ಸಂಧಿ

ಸೂ: ಚಂಡಮುನಿ ಮಂತ್ರಾಹ್ವಯದಿ ಬರೆ
ಚಂಡಕರ ತತ್ತೇಜನಾಹವ
ಚಂಡ ವಿಕ್ರಮನವನಿಯಲಿ ಜನಿಸಿದನು ಕಲಿಕರ್ಣ

ಅರಸ ಕೇಳೈ ಕೆಲವು ಕಾಲಾಂ
ತರಕೆ ನಿಮ್ಮ ವಿಚಿತ್ರವೀರ್ಯನು
ನೆರೆದನಮರಸ್ತ್ರೀಯರಲಿ ಬಳಿಕೀ ನದೀಸುತನ
ಕರೆದು ನುಡಿದಳು ಮಗನೆ ರಾಜ್ಯವ
ಧರಿಸು ನೀನಿನ್ನುತ್ತರದ ಹಿಮ
ಕರಕುಲವ ಬೆಳಗೆಂದು ಯೋಜನಗಂಧಿ ಬೆಸಸಿದಳು ೧

ತಾಯೆ ನಿಮ್ಮೋಪಾದಿ ರಾಜ್ಯ
ಸ್ತ್ರೀಯಳೆಂದಾ ನುಡಿಯೊಳಗೆ ಗಾಂ
ಗೇಯ ಮುಳುಗನು ಭೀಷ್ಮವಚನಕೆ ಬೇರೆ ಮೊಳೆಯುಂಟೆ
ಕಾಯಕಲ್ಪ ಸುಖಕ್ಕೆ ಘನ ನಿ
ಶ್ರೇಯಸವ ಕೆಡಿಸುವೆನೆ ಯೆಲವದ
ಕಾಯಿಗೋಸುಗ ಕಲ್ಪವೃಕ್ಷವ ಕಡಿವನಲ್ಲೆಂದ ೨

ಮರುಗಿ ಯೋಜನಗಂಧಿ ಚಿಂತೆಯ
ಸೆರೆಗೆ ಸಿಲುಕಿದಳೊಂದು ರಾತ್ರಿಯೊ
ಳರಿದು ನೆನೆದಳು ಪೂರ್ವಸೂಚಿತ ಪುತ್ರಭಾಷಿತವ
ಮುರಿದ ಭರತಾನ್ವಯದ ಬೆಸುಗೆಯ
ತೆರನು ತೋರಿತೆ ಪುಣ್ಯವೆನುತೆ
ಚ್ಚರಿತು ನುಡಿದಳು ಮಗನೆ ವೇದವ್ಯಾಸ ಬಹುದೆಂದು ೩

ಕೆಂಜೆಡೆಯ ಕೃಷ್ಣಾಜಿನದ ಮೊನೆ
ಮುಂಜೆರಗಿನುಡಿಗೆಯ ಬಲಾಹಕ
ಪುಂಜಕಾಂತಿಯ ಪಿಂಗತರಮುಖ ಕೇಶದುನ್ನತಿಯ
ಕಂಜನಾಭನ ಮೂರ್ತಿ ಶೋಭಾ
ರಂಜಿತನು ಜನದುರಿತ ದಶಮದ
ಭಂಜಕನು ತಾಯ್ಗೆರಗಿ ನುಡಿದನು ವ್ಯಾಸಮುನಿರಾಯ ೪

ನೆನೆದಿರೇನೌತಾಯೆ ಕೃತ್ಯವ
ನೆನಗೆ ಬೆಸಸೆನೆ ಮಗನೆ ಭಾರತ
ವಿನುತಕುಲ ಜಲರಾಶಿಯೆಡೆವರಿತುದು ವಿಚಿತ್ರನಲಿ
ತನುಜ ನೀನೆ ಬಲ್ಲೆಯೆನೆ ಕೇಳ್
ಜನನೀ ನಿಮ್ಮಡಿಯಾಜ್ಞೆಯಲಿ ಸಂ
ಜನಿಪುವೆನು ವೈಚಿತ್ರವೀರ್ಯ ಕ್ಷೇತ್ರದಲಿ ಸುತರ ೫

ಎಂದು ಬಳಿಕೇಕಾಂತ ಭವನದೊ
ಳಂದು ಮುನಿಯಿರಲಂಬಿಕೆಯನರ
ವಿಂದಮುಖಿಯಟ್ಟಿದಳು ಸೊಸೆಯನು ಮುನಿಯ ಪೂರೆಗಾಗಿ
ಬಂದು ಮುನಿಪನ ದಿವ್ಯರೂಪವ
ನಿಂದುಮುಖಿ ಕಂಡಕ್ಷಿಗಳ ಭಯ
ದಿಂದ ಮುಚ್ಚಿದಳಾಕೆ ತಿರುಗಿದಳರಸ ಕೇಳೆಂದ ೬

ಬಳಿಕಲಂಬಾಲಿಕೆಯನಲ್ಲಿಗೆ
ಕಳುಹಲಾಕೆಗೆ ಭಯದಿ ಮುಖದಲಿ
ಬಿಳುಪು ಮಸಗಿತು ಮುನಿಯ ರೌದ್ರಾಕಾರದರ್ಶನದಿ
ಲಲನೆ ಮರಳಿದಳೊಬ್ಬ ಸತಿಯನು
ಕಳುಹಲಾ ವಧು ಚಪಲದೃಷ್ಟಿಯೊ
ಳಳುಕದೀಕ್ಷಿಸಲಾಯ್ತು ಗರ್ಭಾದಾನವನಿಬರಿಗೆ ೭

ಬಂದು ಮುನಿಪತಿ ತಾಯ್ಗೆ ಕೈಮುಗಿ
ದೆಂದನಂಬಿಕೆಯಲ್ಲಿ ಜನಿಸುವ
ನಂದನನು ಜಾತ್ಯಂಧನಂಬಾಲಿಕೆಗೆ ಪಾಂಡುಮಯ
ಬಂದ ಬಳಿಕಿನ ಚಪಲೆಗತಿಬಲ
ನೆಂದು ಹೇಳಿದು ತನಗೆ ನೇಮವೆ
ಯೆಂದು ತನ್ನಾಶ್ರಮಕೆ ಸರಿದನು ಬಾದರಾಯಣನು ೮

ತುಂಬಿದುದು ನವಮಾಸ ಜನಿಸಿದ
ನಂಬಿಕೆಯ ಬಸುರಿನಲಿ ಸೂನು ಗ
ತಾಂಬಕನು ಮಗನಾದನಂಬಾಲಿಕೆಕೆಗೆ ಪಾಂಡುಮಯ
ಚುಂಬಿಸಿತು ಪರಿತೋಷ ನವ ಪುಳ
ಕಾಂಬುಗಳು ಜನಜನಿತವದನೇ
ನೆಂಬೆನುತ್ಸವವನು ಕುಮಾರೋದ್ಭವದ ವಿಭವದಲಿ ೯

ಜಾತಕರ್ಮಾದಿಯನು ಪಾರ್ಥಿವ
ಜಾತಿ ವಿಧಿವಿಹಿತದಲಿ ಗಂಗಾ
ಜಾತ ಮಾಡಿಸಿ ತುಷ್ಟಿಪಡಿಸಿದ ನಿಖಿಳ ಯಾಚಕರ
ಈತನೇ ಧೃತರಾಷ್ಟ್ರನೆರಡನೆ
ಯಾತ ಪಾಂಡು ವಿಲಾಸಿನೀ ಸಂ
ಭೂತನೀತನು ವಿದುರನೆಂದಾಯ್ತುವರಿಗಭಿಧಾನ ೧೦

ಬೆಳೆವುತಿರ್ದರು ಹರಿಣಪಕ್ಷದ
ನಳಿನರಿಪುವಿನವೊಲ್ ಕುಮಾರರು
ಕುಲವಿಹಿತ ಚೌಲೋಪನಯನವನಿಬ್ಬರಿಗೆ ರಚಿಸಿ
ಕಲಿತ ವಿದ್ಯರ ಮಾಡಿ ತಾಯು
ಮ್ಮಳಿಸದಂತಿರೆ ಸೋಮವಂಶದ
ಬೆಳವಿಗೆಯನೇ ಮಾಡಿಕೊಂಡಾಡಿದನು ಕಲಿಭೀಷ್ಮ ೧೧

ಧಾರುಣೀಪತಿ ಚಿತ್ತವಿಸು ಗಾಂ
ಧಾರದೇಶದ ಸುಬಲರಾಜ ಕು
ಮಾರಿ ಕುಲವಧುವಾದಳಾ ಧೃತರಾಷ್ಟ್ರ ಭೂಪತಿಗೆ
ನಾರಿಯರೊಳುತ್ತಮೆಯಲಾ ಗಾಂ
ಧಾರಿಯೆನಿಸಿ ಪತಿವ್ರತಾ ವಿ
ಸ್ತಾರಗುಣದಲಿ ಮೆರೆದಳಬಲೆ ಸಮಸ್ತಜನ ಹೊಗಳೆ ೧೨

ಇತ್ತ ಕುಂತೀಭೋಜನನೆಂಬ ನೃ
ಪೋತ್ತಮನ ಭವನದಲಿ ಮುರಹರ
ನತ್ತೆ ಬೆಳೆವುತ್ತಿರ್ದಳಾ ವಸುದೇವನೃಪನನುಜೆ
ಹೆತ್ತವರಿಗೋಲೈಸುವರಿಗೆ ಮ
ಹೋತ್ತಮರಿಗುಳಿದಖಿಳ ಲೋಕದ
ಚಿತ್ತಕಹುದೆನೆ ನಡೆವ ಗುಣದಲಿ ಮೆರೆದಳಾ ಕುಂತಿ ೧೩

ಒಂದು ದಿನ ದೂರ್ವಾಸಮುನಿ ನೃಪ
ಮಂದಿರಕೆ ಬರಲಾ ಮಹೀಪತಿ
ಬಂದ ಬರವಿನಲವರ ಮರೆದನು ರಾಜಕಾರ್ಯದಲಿ
ಇಂದು ಕುಂತೀಭೋಜನೊಡೆತನ
ಬೆಂದುಹೋಗಲಿಯೆಂಬ ಶಾಪವ
ನಿಂದುಮುಖಿ ನಿಲಿಸಿದಳು ಹೊರಳಿದಳವರ ಚರಣದಲಿ ೧೪

ತರುಣಿಯೊಡಗೊಂಡೊಯ್ದು ಕನ್ಯಾ
ಪರಮ ಭವನಲಾ ಮುನಿಯನುಪ
ಚರಿಸಿದಳು ವಿವಿಧಾನ್ನ ಪಾನ ರಸಾಯನಂಗಳಲಿ
ಹರ ಮಹಾದೇವೀ ಮಗುವಿನಾ
ದರಣೆಗೀ ವಿನಯೋಪಚಾರಕೆ
ಹಿರಿದು ಮೆಚ್ಚಿದೆನೆಂದು ತಲೆದೂಗಿದನು ದೂರ್ವಾಸ ೧೫

ಮಗಳೆ (ಪಾ: ಮಗಳೇ) ಬಾ ಕೊಳ್ ಐದು ಮಂತ್ರಾ
ಳಿಗುಳನಿವು ಸಿದ್ದಪ್ರಯೋಗವು
ಸೊಗಸು ದಿವಿಜರೊಳಾರ ಮೇಲುಂಟವರ ನೆನೆ ಸಾಕು
ಮಗನು ಜನಿಸುವನೆಂದು ಮುನಿ ಕುಂ
ತಿಗೆ ರಹಸ್ಯದೊಳರುಹಿ ಮುನಿ ಮೌ
ಳಿಗಳ ಮಣಿ ಪರಿತೋಷದಲಿ ಸರಿದನು ನಿಜಾಶ್ರಮಕೆ ೧೬

ಮಗುವುತನದಲಿ ಬೊಂಬೆಯಾಟಕೆ
ಮಗುವನೇ ತಹೆನೆಂದು ಬಂದಳು
ಗಗನನದಿಯಲಿ ಮಿಂದಳುಟ್ಟಳು ಲೋಹಿತಾಂಬರವ
ವಿಗಡಮುನಿಪನ ಮಂತ್ರವನು ನಾ
ಲಗೆಗೆ ತಂದಳು ರಾಗರಸದಲಿ
ಗಗನಮಣಿಯನು ನೋಡಿ ಕಣ್ಮುಚ್ಚಿದಳು ಯೋಗದಲಿ ೧೭

ಅರಸ ಕೇಳ್ ಮುನಿಯಿತ್ತ ಮಂತ್ರಾ
ಕ್ಷರದ ಕರಹಕೆ ತಳುವಿದರೆ ದಿನ
ಕರನ ತೇಜವ ಕೊಂಬನೇ ದೂರ್ವಾಸ ವಿಗಡನಲ
ಧರೆಗೆ ಬಂದನು ಸೂರ್ಯನಾತನ
ಕಿರಣ ಲಹರಿಯ ಹೊಯ್ಲಿನಲಿ ಸರ
ಸಿರುಹಮುಖಿ ಬೆಚ್ಚಿದಳು ಬಿಜಯಂಗೈಯಿ ನೀವೆನುತ ೧೮

ಎನ್ನಬಾರದಲೇ ಋಷಿಪ್ರತಿ
ಪನ್ನ ಮಂತ್ರವಮೋಘವದರಿಂ
ದೆನ್ನ ತೂಕದ ಮಗನಹನು ನೀನಂಜಬೇಡೆನುತ
ಕನ್ನಿಕೆಯ ಮುಟ್ಟಿದನು ಮುನ್ನಿನ
ಕನ್ನೆತನ ಕೆಡದಿರಲಿಯೆನುತವೆ
ತನ್ನ ರಥವಿದ್ದೆಡೆಗೆ ರವಿ ತಿರುಗಿದನು ವಹಿಲದಲಿ ೧೯

ಅರಸ ಕೇಳ್ ಆಶ್ಚರ್ಯವನು ತಾ
ವರೆಯ ಮಿತ್ರನ ಕರಗಿ ಕರುವಿನೊ
ಳೆರೆದರೆಂದೆನೆ ಥಳಥಳಿಸಿ ತೊಳಗುವ ತನುಚ್ಛವಿಯ
ಕುರುಳುದಲೆ ನಿಟ್ಟೆಸಳುಗಂಗಳ
ಚರಣ ಕರಪಲ್ಲವದ ಕೆಂಪಿನ
ವರಕುಮಾರನ ಕಂಡು ಬೆರಗಿನೊಳಿರ್ದಳಾ ಕುಂತಿ ೨೦

ಅಳುವ ಶಿಶುವನು ತೆಗೆದು ತೆಕ್ಕೆಯ
ಪುಳಕ ಜಲದಲಿ ನಾದಿ ಹರುಷದ
ಬಳಿಯ ಲಜ್ಜೆಯ ಭಯದ ಹೋರಟೆಗಳುಕಿ ಹಳುವಾಗಿ
ಕುಲದ ಸಿರಿ ತಪ್ಪುವುದಲಾ ಸಾ
ಕಿಳುಹ ಬೇಕೆಂದೆನುತ ಗಂಗಾ
ಜಲದೊಳಗೆ ಹಾಯ್ಕಿದಳು ಜನದಪವಾದ ಭೀತಿಯಲಿ ೨೧

ತಾಯೆ ಬಲ್ಲಂದದಲಿ ಕಂದನ
ಕಾಯಿ ಮೇಣ್ ಕೊಲ್ಲೆನುತ ಕಮಲ ದ
ಳಾಯತಾಕ್ಷಿ ಕುಮಾರಕನ ಹಾಯ್ಕಿದಳು ಮಡುವಿನಲಿ
ರಾಯ ಕೇಳೈ ಸಕಲ ಲೋಕದ
ತಾಯಲಾ ಜಾಹ್ನವಿ ತರಂಗದಿ
ನೋಯಲೀಯದೆ ಮುಳುಗಲೀಯದೆ ಚಾಚಿದಳು ತಡಿಗೆ ೨೨

ಕೆದರಿ ಕಾಲಲಿ ಮಳಲ ರಾಶಿಯ
ನೊದೆದು ಕೈಗಳ ಕೊಡಹಿ ಭೋಯೆಂ
ದೊದೆದುತಿರ್ದನು ಶಿಶುಗಳರಸನು ರವಿನೀಕ್ಷಿಸುತ
ಇದನು ಕಂಡನು ಸೂತನೊಬ್ಬನು
ಮುದದ ಮದದಲಿ ತನ್ನ ಮರೆದು
ಬ್ಬಿದನಿದೆತ್ತಣ ನಿಧಿಯೊ ಶಿವಶಿವಯೆಂದು ನಡೆತಂದ ೨೩

ತರಣಿಬಿಂಬದ ಮರಿಯೊ ಕೌಸ್ತುಭ
ವರಮಣಿಯ ಖಂಡದ ಕಣಿಯೊ ಮ
ರ್ತ್ಯರಿಗೆ ಮಗನಿವನಲ್ಲ ಮಾಯಾ ಬಾಲಕನೊ ಮೇಣು
ಇರಿಸಿ ಹೋದವಳಾವಳೋ ಶಿಶು
ವರನ ತಾಯ್ ನಿರ್ಮೋಹೆಯೈ ಹರ
ಹರ ಮಹಾದೇವನುತ ತೆಗೆದಪ್ಪಿದನು ಬಾಲಕನ ೨೪

ತೃಣವಲಾ ತ್ರೈಲೋಕ್ಯ ರಾಜ್ಯವ
ಗಣಿಸುವೆನೆ ತಾನಿನ್ನು ತನ್ನಲಿ
ಋಣವಿಶೇಷವಿದೇನೊ (ಪಾ: ಋಣವಿಶೇಷವಿದೇನೋ) ಮೇಣ್ ಈ ಬಾಲಕಂಗೆನುತ
ಕ್ಷಣದೊಳೊದಗುವ ಬಾಷ್ಪ ಲುಳಿತೇ
ಕ್ಷಣನು ಬಂದನು ಮನೆಗೆ ಪರುಷದ
ಕಣಿಯ ತಂದೆನು ರಮಣಿ ಕೊಳ್ಳೆಂದಿತ್ತನರ್ಭಕನ ೨೫

ಆದರಿಸಿದನು ರಾಧೆಯಲಿ ಮಗ
ನಾದನೆಂದುತ್ಸವವ ಮಾಡಿ ಮ
ಹೀ ದಿವಿಜರನು ದಾನ ಮಾನಂಗಳಲಿ ಸತ್ಕರಿಸಿ
ಆ ದಿನಂ ಮೊದಲಾಗಿ ಉಧ್ಬವ
ವಾದುದವನೈಶ್ವರ್ಯ ಉನ್ನತ
ವಾದನಾ ರವಿನಂದನನು ರಾಧೇಯ ನಾಮದಲಿ ೨೬

ಹೊಳೆ ಹೊಳೆದು ಹೊಡೆಮರಳಿ ನಡು ಹೊ
ಸ್ತಿಲಲಿ ಮಂಡಿಸಿ ಬೀದಿ ಬೀದಿಗ
ಳೊಳಗೆ ಸುಳಿವರ ಸನ್ನೆಯಲಿ ಕರೆಕರೆದು ನಸುನಗುತ
ಲಲಿತರತ್ನದ ಬಾಲದೊಡಿಗೆಯ
ಕಳಚಿ ಹಾಯ್ಕುವ ಹೆಸರು ಜಗದಲಿ
ಬೆಳೆವುತಿರ್ದುದು ಹಬ್ಬಿದುದು ಜನಜನದ ಕರ್ಣದಲಿ ೨೭

ಅರಸ ಕೇಳೈ ಕರ್ಣ ಪಾರಂ
ಪರೆಯೊಳೀತನ ಹೆಸರು ಜಗದಲಿ
ಹರಿದುದಲ್ಲಿಂ ಬಳಿಕಲೀತನ ನಾಮಕರಣದಲಿ
ಸುರನರೋರಗ ನಿಕರವೇ ವಿ
ಸ್ತರಿಸಿದುದು ಕರ್ಣಾಭಿಧಾನವ
ಗುರುಪರಾಕ್ರಮಿ ಬೆಳೆವುತಿರ್ದನು ಸೂತಭವನದಲಿ ೨೮






ಕೃಪೆ :  http://gaduginabharata.blogspot.in/
Contributors

ವಿರಾಟಪರ್ವ: ೦೪. ನಾಲ್ಕನೆಯ ಸಂಧಿ

ಸೂ: ವಿಗ್ರಹಕೆ ಸಮತಳಿಸಿ ಕುರುಕುಲ
ದಗ್ರಣಿಯ ಮುಂಕೊಂಡು ದಕ್ಷಿಣ
ಗೋಗ್ರಹಣದಲಿ ಭೀಮ ಹಿಡಿದನು ಕಲಿ ಸುಶರ್ಮಕನ

ಕೇಳು ಜನಮೇಜಯ ಧರಿತ್ರೀ
ಪಾಲ ಕೌರವ ದೂತರವನಿಯ
ಮೇಲೆ ತೊಳಲುತಲರಸಿ ಕಾಣದೆ ಪಾಂಡುನಂದನರ
ಹೋಲುವಿಕೆಯಿಂಬಿಡಿಯಲಾರದೆ
ಕಾಲ ಸವೆಯಲು ನಾಲ್ಕು ದಿಕ್ಕಿನ
ಮೂಲೆಯವರೈತಂದು ಬಿನ್ನವಿಸಿದರು ಕುರುಪತಿಗೆ ೧

ವಿತಳದೊಳು ಹೊಕ್ಕಿರಲಿಯಮರಾ
ವತಿಯೊಳಗೆ ಮೇಣಿರಲಿ ನಮ್ಮೀ
ಕ್ಷಿತಿಯೊಳಗೆ ಸುಳುಹಿಲ್ಲ ನೃಪ ಕುಂತೀಕುಮಾರಕರ
ಮತಿಯ ಹಬ್ಬುಗೆಯಿಂದ ನಾನಾ
ಗತಿಯೊಳಗೆ ಹೊಕ್ಕರಸಿದೆವು ಕುರು
ಪತಿಯೆ ಕೇಳ್ ನಿರ್ನಾಮರಾದರು ನಿನ್ನ ವೈರಿಗಳು ೨

ಎನಲು ನಸುನಗುತರಸ ಮನದಲಿ
ತನಗೆ ಹಗೆಯಿಲ್ಲೆಂದು ದೂತರ
ಮನವೊಲಿದು ಮನ್ನಿಸಿದ ನಾಲುಕು ಕಡೆಯ ವಾರ್ತೆಗಳ
ತನತನಗೆ ಮಂತ್ರಿಗಳು ಬೆಸಗೊಳ
ಲನಿತು ದೂತರೊಳಬ್ಬ ಕೀಚಕ
ಹನನವನು ವಿಸ್ತರಿಸಿದನು ಕುರುರಾಯನಿದಿರಿನಲಿ ೩

ಒಂದು ವಾರ್ತೆಯಲಾ ತ್ರಿಗರ್ತಾ
ನಂದಕರವಿದು ಜೀಯ ಕೀಚಕ
ವೃಂದವನು ಗಂಧರ್ವರಿರುಳೈತಂದು ಖಾತಿಯಲಿ
ಕೊಂದು ಹೋದರು ರಾವಣನ ವಿಧಿ
ಯಿಂದು ಕೀಚಕಗಾಯಿತೆನೆ ಕೇ
ಳ್ದೊಂದು ನಿಮಿಷ ಮಹೀಶ ಮೋನವ ಹಿಡಿದು ಬೆರಗಾದ ೪

ಹೇಳು ಹೇಳಿನ್ನೊಮ್ಮೆ ಮತ್ಸ್ಯನ
ತೋಳು ಮುರಿದುದೆ ಸುಭಟರೊಳು ಕ
ಟ್ಟಾಳು ಕೀಚಕ ಮಡಿದನೇ ಗಂಧರ್ವರಿರಿದವರೇ
ಮೇಲಣವರಿಗೆ ಮರ್ತ್ಯರಿಗೆ ಕೈ
ಕಾಲು ಮೆಟ್ಟಿನ ತೋಟಿಯೇತಕೆ
ಹೋಲದೋ ಹುಸಿ ಹೋಗೆನುತ ಮುಖದಿರುಹಿದನು ಭೂಪ ೫

ಅಹುದು ಜೀಯವಧರಿಸು ದಿವಿಜರ
ಮಹಿಳೆಯೋಲೈಸಿದಳು ಮತ್ಸ್ಯನ
ಮಹಿಳೆಯನು ಬಳಿಕಾಕೆಯೋಲಗದಲ್ಲಿ ಸತಿಯಿರಲು
ಕುಹಕಿ ಕಂಡಳುಪಿದರೆ ನಾಟ್ಯದ
ಗೃಹವ ಸೂಚನೆಗೊಟ್ಟು ನಿಮಿಷಕೆ
ರಹವ ಮಾಡಿದರವರು ಸವರಿದರಖಿಳ ಕೀಚಕರ ೬

ಅವನಿಪತಿ ಮೂಗಿನಲಿ ಕರ ಪ
ಲ್ಲವವನಿಟ್ಟನು ತಲೆಯ ತೂಗಿದ
ನವಳು ದುರುಪದಿ ಖಳರ ಕೊಂದವ ಭೀಮ ಗಂಧರ್ವ
ದಿವಿಜ ಸತಿಯೆತ್ತಲು ವಿರಾಟನ
ಭವನದೋಲಗವೆತ್ತಲದು ಪಾಂ
ಡವರ ಕೃತ್ರಿಮ ತಂತ್ರ ಮರೆಯಿರಿಗಾರರವರೆಂದ ೭

ಪರಿಮಳವ ಕದ್ದೋಡವನಿಲನ
ಹರಿವ ಹೆಜ್ಜೆಯ ಹತ್ತುವರೆ ಮಧು
ಕರನೆ ಬಲ್ಲುದು ಜೀಯ ಬಲ್ಲಿರಿ ನಿಮ್ಮವರ ಪರಿಯ
ಹರದ ಮಾತಿನ ಹದನು ಬಳಿಕಾ
ಚರರಿಗಿದು ಗೋಚರಿಸುವುದೆಯೆಂ
ದರಸನನು ಕೊಂಡಾಡಿದರು ಮಂತ್ರಿಗಳು ತವತವಗೆ ೮

ಪ್ರೌಢಿಯಲ್ಲಿದು ಕೇಳಿ ಬಲ್ಲೆವು
ರೂಢಿಯಲಿ ಸಮಬಲರು ಭೀಮ ಸ
ಗಾಢದಲಿ ಬಲಭದ್ರ ಕೀಚಕ ಶಲ್ಯರೆಂಬುವರು
ಗೂಢರನು ಗರುವಾಯಿಗೆಡಿಸಿಯೆ
ಗಾಢಿಕೆಯ ನೆರೆ ಮೆರೆಯಬೇಕೆನೆ
ರೂಢಿ ಸಮತಳಿಸಿತ್ತು ಸೇನೆಯ ನೆರಹಬೇಕೆಂದ ೯

ಕರೆಸಿದನು ಗಾಂಗೇಯ ಗರುಡಿಯ
ಗುರುವನಶ್ವತ್ಥಾಮ ಸಂಜಯ
ವರ ಕೃಪಾಚಾರಿಯನ ಸೈಂಧವ ಸೂರ್ಯನಂದನನ
ಬರಿಸಿದನು ತೆಂಕಣದ ದಿಗುತಟ
ದರಸುಗಳ ದೆಸೆಯಿಂದ ಬೇಹಿನ
ಚರರು ಬಂದರು ಕೇಳಿರೈ ಹೊಸ ವಾರ್ತೆಯನುಯೆಂದ ೧೦

ಭೀಮ ಕೀಚಕ ಶಲ್ಯನೀ ಬಲ
ರಾಮನೆಂಬೀ ನಾಲುವರು ಸಂ
ಗ್ರಾಮದೊಳು ಸರಿ ಖಚರರೆಂಬುದು ಬಯಲಿನಪವಾದ
ಭೀಮನಾಗಲು ಬೇಕು ಕೀಚಕ
ಕಾಮುಕನ ದುರುಪದಿಗೆ ಅಳುಪಿದ
ತಾಮಸನ ಹಿಡಿದೊರೆಸಿದವನೆಂದನು ಸುಯೋಧನನು ೧೧

ಮಾತು ಹೋಲುವೆಯಹುದು ನುಡಿದುದು
ನೀತಿ ಧರ್ಮಜನಿದ್ದ ದೇಶ
ವ್ರಾತದೊಳು ಬರನಿಲ್ಲ ಸವೆಯವು ಬೆಳೆದ ಬೆಳಸುಗಳು
ಬೀತ ಬನವಲ್ಲಿಲ್ಲ ಹುಸಿ ಕೊಲೆ
ಪಾತಕಾದಿಗಳಿಲ್ಲ ಸೊಂಪಿನ
ನೂತನದ ಸಿರಿಯೆಂದು ನುಡಿದನು ರಾಯ ಗಾಂಗೇಯ ೧೨

ಎಲ್ಲಿ ಲಕ್ಷ್ಮಿಯ ಬೀಡು ಧರಣಿಯೊ
ಳೆಲ್ಲಿ ಸೊಂಪಿನ ನಾಡು ನಗರದೊ
ಳೆಲ್ಲಿ ವಿಭವದ ಕಡಲು ಶೈತ್ಯದ ಸಾರ ಸೌರಂಭ
ಎಲ್ಲಿ ನೆಲೆಸಿಹುದಲ್ಲಿ ಪಾಂಡವ
ರಿಲ್ಲದಿರರಿನ್ನವರ ನೆಲೆಗಾ
ಬಲ್ಲಿ ಸಂಶಯವಿಲ್ಲವೆಂದನು ಭೀಷ್ಮ ನಸುನಗುತ ೧೩

ಅತ್ತ ಹಿಮಗಿರಿ ಮೇಲೆ ಭಾವಿಸ
ಲಿತ್ತ ಮೂರು ಸಮುದ್ರ ಗಡಿಯಿಂ
ದಿತ್ತ ನಾನಾ ದೇಶವೆಂಬಿವು ಬರದ ಬೇಗೆಯಲಿ
ಹೊತ್ತಿ ಹೊಗೆದವು ಮಧ್ಯ ದೇಶದ
ಲುತ್ತಮದ ಸಿರಿ ಫಲದ ಬೆಳಸುಗ
ಳೊತ್ತೆಯಿದು ಪಾಂಡವರ ಚಾವಡಿಯೆಂದನಾ ದ್ರೋಣ ೧೪

ಅವಧಿ ತುಂಬದ ಮುನ್ನಲೀ ಪಾಂ
ಡವರ ಕಾಣಿಸಿಕೊಂಬ ಮತ್ತಂ
ತವರು ಸತ್ಯಕೆ ನಡೆಯಬೇಹುದು ಮುನ್ನಿನಂದದಲಿ
ಅವರ ನೆಲೆಗಾಣಿಸುವ ಮಂತ್ರದ
ಹವಣನರುಪುವೆನೆಂದು ರವಿಸುತ
ನವನಿಪಗೆ ನಸುನಗುತ ನುಡಿದನು ರಾಜಕಾರಿಯವ ೧೫

ರಾಜಮಂದಿರದೊಳಗೆ ನೀತಿಗ
ಳೋಜೆಯಿಲ್ಲದ ಸಚಿವರಿಂ ನಿ
ರ್ವ್ಯಾಜದಲಿ ಕೇಡಹುದು ತಪ್ಪದು ಲೋಕವಾರ್ತೆಯಿದು
ಗಾಜು ಕೇವಣಿಸಿದರೆ ರಜತದ
ರಾಜಭೂಷಣವಹುದೆ ಕರ್ಣನ
ಬೀಜಮಂತ್ರಗಳಿಂದ ಕೇಡಹುದೆಂದನಾ ಭೀಷ್ಮ ೧೬

ಅವರು ಸತ್ಯಕೆ ನಡೆವರಲ್ಲದೆ
ಬವರಕಂಜುವರಲ್ಲ ಪಾಂಡವ
ರವಧಿ ಬೀಳ್ಕೊಳಬಂದುದೈ ನೀ ಸಮಯದೊಳು ಕರೆಸಿ
ಅವರ ಧರಣಿಯನವರಿಗಿತ್ತರೆ
ನಿವಗನಿಷ್ಟತೆಯಿಲ್ಲ ಕೇಳೆಲೆ
ಅವನಿಪತಿಯೆಂದೆನುತ ನುಡಿದನು ಮತ್ತೆ ಗಾಂಗೇಯ ೧೭

ನನ್ನಿ ನಿಮ್ಮಯ ನುಡಿಯ ಕೈಕೊಂ
ಡೆನ್ನ ಭೂಮಿಯನೀಯೆನಯ್ಯನ
ಬನ್ನಣೆಯ ಮಾತಿನ್ನು ಕೊಳ್ಳದು ಸಾಕು ಸಂಧಿಯನು
ಮನ್ನಿಸುತ ಮರುಳಾದೆನೀ ನಿ
ಷ್ಪನ್ನತೆಯ ಬೀಳ್ಕೊಂಡ ಪಾಂಡವ
ಗುನ್ನಿಗಳ ಗರುವಾಯ ಮಾಡುವಿರೆಂದು ಖಳ ನುಡಿದ ೧೮

ಅರಿ ವಿರಾಟನ ಪುರಕೆ ಹಾಯಿದು
ತುರು ಸೆರೆಯ ತೆಗೆಸುವೆವು ಪಾಂಡವ
ರಿರಲು ಧರ್ಮದ ಮೇರೆ ಮರ್ಯಾದೆಗಳ ಬಲ್ಲವರು
ಅರವರಿಸದಂಗೈಸುವರು ನಾ
ವರಿದು ಕೊಂಬೆವು ಬಳಿಕ ವನದಲಿ
ವರುಷ ಹದಿಮೂರಕ್ಕೆ ಕೊಡುವೆವು ಮತ್ತೆ ವೀಳೆಯವ ೧೯

ಒಳ್ಳಿತಿದು ನಿರ್ದೋಷ ನಿರ್ಣಯ
ವೆಲ್ಲರಭಿಮತವಹುದು ರಿಪುಗಳ
ಖುಲ್ಲವಿದ್ಯವನರಿವುಪಾಯಕೆ ಬೇರೆ ಠಾವಿಲ್ಲ
ಅಲ್ಲಿ ಪಾಂಡವರಿಹರು ಸಂಶಯ
ವಿಲ್ಲ ದೇಶದ ಸೊಂಪು ಸಿರಿ ಮ
ತ್ತೆಲ್ಲಿಯೂ ಹಿರಿದಿಲ್ಲ ನಿಶ್ಚಯವೆಂದನಾ ಕರ್ಣ ೨೦

ಗುರುವಿನಭಿಮತವಹಡೆ ಕೃಪ ಮೊಗ
ದಿರುಹದಿದ್ದೊಡೆ ಭೀಷ್ಮ ಮನದಲಿ
ಮುರಿಯದಿರ್ದೊಡೆ ಗುರುಕುಮಾರನ ಮತಕೆ ಸೇರುವೊಡೆ
ವರ ಶಕುನಿಯಹುದೆಂದೊಡಾ ಸೋ
ದರರು ತಪ್ಪಲ್ಲೆಂದರಾದೊಡೆ
ಅರಸ ನೆಗಳ್ದುದೆ ಮಂತ್ರವೆಂದು ಸುಶರ್ಮ ಹೊಗಳಿದನು ೨೧

ಮತವಹುದು ತಪ್ಪಲ್ಲ ಪಾಂಡವ
ಗತಿಯನರಿವೊಡೆ ಮಾರ್ಗವಿದು ಸ
ಮ್ಮತವು ನಿರ್ಮಳ ನೀತಿಕಾರರ ಮನಕೆ ಮತವಹುದು
ಅತಿ ಗಳಿತವಾಯ್ತವಧಿ ದಿವಸ
ಸ್ಥಿತಿಯೊಳೈದಾರಾಗೆ ಬಳಿಕೀ
ಕ್ಷಿತಿಗೆ ಪಾಂಡವರುತ್ತರಾಯಿಗಳೆಂದನಾ ಭೀಷ್ಮ ೨೨

ಪರಿಗಣಿಸಿ ನೋಡಿದೊಡೆ ಮಾಡಿದ
ವರುಷ ತತಿಯೊಳು ಹೆಚ್ಚು ಕುಂದುಂ
ಟುರವಣಿಸಿ ಮಾಡುವುದು ನೆಗಳಿದ ರಾಜಕಾರಿಯವ
ಅರಿಯಲೇ ಬೇಕಾವ ಪರಿಯಿಂ
ದರಿದೆವಾದೊಡೆಯುತ್ತರೋತ್ತರ
ಧರಣಿ ಕುರುಪತಿಗೆಂದರಾ ದ್ರೋಣಾದಿ ನಾಯಕರು ೨೩

ಬೀಡು ನಡೆಯಲಿ ಮುಂದೆ ಮತ್ಸ್ಯನ
ನಾಡಿನೊಳು ಕಟಕಾಳಿ ದೂತರು
ಕೂಡೆ ಸಾರಲಿ ಕರೆಯಲಕ್ಷೋಹಿಣಿಯ ನಾಯಕರ
ಜೋಡಿಸಲಿ ಗುಡಿ ದಡ್ಡಿ ಚಂಪೆಯ
ಗೂಡಿ ಕೊಟ್ಟಿಗೆ ಬಂಡಿ ನಡೆಯಲಿ
ನಾಡ ಬಿಟ್ಟಿಗಳೆಂದು ಕೌರವರಾಯ ನೇಮಿಸಿದ ೨೪

ಹರಿದುದೋಲಗ ಮರುದಿವಸ ಗುಡಿ
ಹೊರಗೆ ಹೊಯ್ದವು ಸನ್ಮುಹೂರ್ತದೊ
ಳರಸ ಹೊರವಂಟನು ಸುಶರ್ಮಾದಿಗಳ ಗಡಣದಲಿ
ಸುರನದೀಸುತ ಕರ್ಣ ಕೃಪ ಗುರು
ಗುರುಸುತಾದಿ ಮಹಾಪ್ರಧಾನರು
ಕರಿತುರಗ ರಥಪತ್ತಿಯಲಿ ಹೊರವೊಂಟರೊಗ್ಗಿನಲಿ ೨೫

ಮೋಹರವ ಮೇಳೈಸಿದನು ನಿ
ರ್ವಾಹವನು ನಿಶ್ಚೈಸಿದನು ಮ
ತ್ತೂಹೆಕಾರರ ಮನವ ಸೋದಿಸಿಕೊಂಡು ತುರುಗೊಂಬ
ಸಾಹಸರನಟ್ಟಿದನು ವೈರಿಗ
ಳಾಹವಕೆ ನೆಲನಗಲದಲಿ ಬಲ
ಮೋಹಿಸಿತು ನೆರಸಿದನು ಬಹಳಾಕ್ಷೋಹಿಣೀ ಬಲವ ೨೬

ಕರಿಗಳಿಗೆ ಗುಳ ಬೀಸಿದವು ವರ
ತುರಗ ಹಲ್ಲಣಿಸಿದವು ತೇಜಿಯ
ತರಿಸಿ ರಥದಲಿ ಹೂಡಿ ಕೈದುವ ಸೆಳೆದು ಕಾಲಾಳು
ಅರಸನಿದಿರಲಿ ಮೋಹಿದುದು ಸೀ
ಗುರಿಯ ಸಬಳದ ಸಾಲಿನೊಳಗಂ
ಬರನ ಮುಸುಕಿತು ಧರಣಿ ತಗ್ಗಿತು ನೆರೆದುದಾ ಸೇನೆ ೨೭

ಆರತಿಗಳೆತ್ತಿದವು ತಳಿದು
ಪ್ಪಾರತಿಯ ಸೂಸಿದರು ಘನ ರಥ
ದೋರಣದ ಮಧ್ಯದಲಿ ಕೌರವರಾಯ ಕುಳ್ಳಿರಲು
ಸಾರಿದರು ಭಟ್ಟರು ಮಹಾ ನಾ
ಗಾರಿಗಳು ಬಿರುದಾವಳಿಯ ಕೈ
ವಾರಿಸುವ ಜಯರವದೊಡನೆ ನಿಸ್ಸಾಳ ಸೂಳೈಸೆ ೨೮

ಹೊಗೆದುದಂಬರವವನಿ ನಡುಗಿತು
ಗಗನಮಣಿ ಪರಿವೇಷದಲಿ ತಾ
ರೆಗಳು ಹೊಳೆದವು ಸುರಿದವರುಣಾಂಬುಗಳ ಧಾರೆಗಳು
ದಿಗುವಳಯದಲಿ ಧೂಮಕೇತುಗ
ಳೊಗೆದುವೆನಲುತ್ಪಾತ ಕೋಟಿಯ
ಬಗೆಯದವನಿಪ ಪುರವ ಹೊರವಂಟನು ಸಗಾಢದಲಿ ೨೯

ಪಳಹರದ ಪಲ್ಲವದ ಪಸರದ
ಪಳಿಯ ಪಟ್ಟಿಯ ತೋಮರದ ಹೊಳೆ
ಹೊಳೆವ ಚಮರದ ಸೀಗುರಿಯ ಡೊಂಕಣಿಯ ತಿಂಥಿಣಿಯ
ಬಿಳುಗೊಡೆಯ ಝಲ್ಲರಿಯ ಜೋಡಿಗ
ಳೊಳಗೆ ಗಗನವು ತೀವಿತೆನೆ ಹೆ
ಕ್ಕಳಸಿ ನಡೆದುದು ಸೇನೆ ಪಯಣದ ಮೇಲೆ ಪಯಣದಲಿ ೩೦

ರಾಯದಳ ನಡೆಗೊಂಡುದೊಗ್ಗಿನ
ನಾಯಕರು ಮನ್ನೆಯರು ರಾಜ ಪ
ಸಾಯಿತರು ಸಂವರಣೆ ಸೌರಂಭದಲಿ ಸಂದಣಿಸೆ
ತಾಯಿಮಳಲುಬ್ಬಳಿಸೆ ಜಲನಿಧಿ
ಬಾಯಬಿಡೆ ಗರ್ಜಿಸುವ ನಿಸ್ಸಾ
ಳಾಯತದ ಸೂಳೊದಗೆ ಪಯಣದ ಮೇಲೆ ಪಯಣದಲಿ ೩೧

ಸೆಳೆವ ಸಿಂಧದ ಕವಿವ ಹೀಲಿಯ
ವಳಯ ತೋಮರ ಚಮರ ಡೊಂಕಣಿ
ಗಳ ವಿಡಾಯಿಯಲಮಮ ಕೆತ್ತುದು ಗಗನವಳ್ಳರಿಯೆ
ಸುಳಿಯಲನಿಲಂಗಿಲ್ಲ ಪಥ ಕೈ
ಹೊಳಕಬಾರದು ರವಿಗೆ ನೆಲನೀ
ದಳವನಾನುವಡರಿದೆನಲು ಜೋಡಿಸಿತು ಕುರುಸೇನೆ ೩೨

ಪೊಡವಿ ಜಡಿದುದು ಫಣಿಯ ಹೆಡೆಗಳು
ಮಡಿದವಾಶಾ ದಂತಿಗಳು ತಲೆ
ಗೊಡಹಿದವು ಬಲದೊಳಗೆ ಮೊಳಗುವ ಲಗ್ಗೆವರೆಗಳಲಿ
ಕಡಲು ಮೊಗೆದದು ರತುನವನು ನೆಲ
ನೊಡೆಯಲಗ್ಗದ ಸೇನೆ ವಹಿಲದಿ
ನಡೆದು ಬರಲಾ ಧೂಳಿ ಮುಸುಕಿತು ರವಿಯ ಮಂಡಲವ ೩೩

ಪ್ರಳಯಪಟು ಜಲರಾಶಿ ಜರಿದುದೊ
ತಳಿತ ಸಂದಣಿಗಿಲ್ಲ ಕಡೆಯೀ
ದಳಕೆ ಮಾರ್ಮಲೆತಾರು ನಿಲುವವರಿಂದ್ರ ಯಮರೊಳಗೆ
ಹುಲು ನೃಪರಿಗೀಯೊಡ್ಡು ಗಡ ಈ
ಬಲುಹು ಹೊದರಿನ ಹೊರಳಿಯೀ ಕಳ
ಕಳಿಕೆಯೇಕೆನೆ ನೂಕಿದುದು ಕುರುಸೇನೆ ದಟ್ಟೈಸಿ ೩೪

ಎರಡು ಮೋಹರವಾಗಿ ತೆಂಕಲು
ಹರಿದು ತುರುಗಳ ತಡೆಯಿ ನಾವು
ತ್ತರದಲಾನುವೆವೆನುತ ನೃಪತಿ ತ್ರಿಗರ್ತನನು ಕಳುಹಿ
ಹುರಿಯೊಡೆದು ಹದಿನಾರು ಸಾವಿರ
ವರ ಮಹಾರಥರೊಗ್ಗಿನಲಿ ದು
ರ್ಧರ ಸುಶರ್ಮನು ದಾಳಿಯಿಟ್ಟನು ತೆಂಕ ದೆಸೆಗಾಗಿ ೩೫

ಅಸಿತ ಪಕ್ಷಾಷ್ಟಮಿಯ ದಿನ ಸಂ
ಧಿಸಿದರಾಳೆದ್ದುದು ವಿರಾಟನ
ಪಶು ಸಮೂಹವ ಮುತ್ತಿದರು ಗೋಪಾಲಕರ ಕೆಡಹಿ
ಹೊಸ ಮುಖಕೆ ಸೀವರಿಸಿದವು ದೆಸೆ
ದೆಸೆಗೆ ಹಿಂಡುಗಳೊಡೆದು ಹಾಯ್ದವು
ಮಸಗಿತಂಬಾ ರವದ ಕಳವಳವಾಯ್ತು ನಿಮಿಷದಲಿ ೩೬

ಆಳು ಸುತ್ತಲು ಕಟ್ಟಿ ತುರುಗಳ
ಕೋಳ ಹಿಡಿದರು ಬೊಬ್ಬಿರಿದು ಗೋ
ಪಾಲರಾಂತರೆ ಕಾದಿದರು ಕಡಿಖಂಡಮಯವಾಗೆ
ಮೇಲೆ ಮೇಲೈತಪ್ಪ ಹೆಬ್ಬಲ
ದಾಳು ಕುದುರೆಯ ಕಂಡು ನೂಕದು
ಕಾಳಗವು ತಮಗೆನುತ ತಿರುಗಿತು ಗೋವರುಳಿದವರು ೩೭

ಮಿಸುಪ ಕಂಬಳಿ ಕೊಂಬು ಕಲ್ಲಿಯ
ಬಿಸುಟು ಗಾಯದಿ ಗೋವಳರು ಹೊ
ತ್ತಸುವ ಕೊರಳಲಿ ಹಿಡಿದು ನಾಲಗೆಯೊಣಗಿ ಢಗೆ ಹೊಯ್ದು
ವಿಷಮ ರಣಭೀತಿಯಲಿ ಕಂದಿದ
ಮುಸುಡ ತೊದಲಿನ ನುಡಿಯ ಮರಣದ
ದೆಸೆಯ ಕೈಸನ್ನೆಗಳ ಕಾತರರೈದಿದರು ಪುರವ ೩೮

ಬಸಿವ ನೆತ್ತರ ಗೋವರರಸಂ
ಗುಸುರಲಾರದೆ ಧೊಪ್ಪನಡೆಗೆಡೆ
ದಸುವ ಕಳೆದರು ಕೆಲರು ಕೆಲಬರು ತಮ್ಮ ಸಂತೈಸಿ
ಅಸಮ ಬಲವದು ಜೀಯ ಗೋವರ
ಕುಸುರಿದರಿದರುವತ್ತು ಸಾವಿರ
ಪಶುಸಮೂಹವ ಹಿಡಿದರೆಂದರು ಮತ್ಸ್ಯಭೂಪತಿಗೆ ೩೯

ಕೇಳಿ ಬಿಸುಸುಯ್ದನು ವಿರಾಟ ನೃ
ಪಾಲನಿಂದಿನಲಳಿದನೇ ಕ
ಟ್ಟಾಳು ಕೀಚಕನೆನುತ ನೋಡಿದನಂದು ಕೆಲಬಲನ
ಆಳು ಗಜಬಜಿಸಿತ್ತು ಹಾಯಿಕು
ವೀಳೆಯವನಿಂದೆನಗೆ ತನಗೆಂ
ದೋಲಗದೊಳಬ್ಬರಣೆ ಮಸಗಿತು ಕದಡಿತಾಸ್ಥಾನ ೪೦

ಕೇಳಿ ಸಿಡಿಲೇಳಿಗೆಯಲೆದ್ದು ನೃ
ಪಾಲಕರು ಗಜಬಜಿಸಿ ರಭಸದೊ
ಳೋಲಗವ ಹೊರವಂಟು ನಡೆದರು ಭಾಷೆಗಳ ಕೊಡುತ
ಆಳು ಕೈದುವ ಕೊಂಡು ಕರಿಘಟೆ
ಮೇಳವಿಸಿ ಹಲ್ಲಣಿಸಿ ತೇಜಿಗ
ಳೋಲಿಯಲಿ ರಥ ಹೂಡಿ ಕವಿದುದು ಮತ್ಸ್ಯ ಪರಿವಾರ ೪೧

ಇವರು ತಮ್ಮೊಳಗೆಂದರದು ನ
ಮ್ಮವರ ಬಲ ತುರುಗೊಂಡವರು ಕೌ
ರವರು ನಮ್ಮ ಪರೀಕ್ಷೆಗೋಸುಗ ಬಂದ ಹದನಹುದು
ಅವಧಿ ತೀರದ ಮುನ್ನ ಕಾಣಿಸಿ
ನಮಗೆ ಬಳಿಕಾರಣ್ಯವಾಸವ
ನಿವರು ಕರುಣಿಸ ಬಂದರೆಂದನು ಧರ್ಮನಂದನನು ೪೨

ಅವಧಿ ತೀರಲಿ ಮೇಣು ಮಾಣಲಿ
ಎನಗೆ ತುರು ಹುಯ್ಯಲನು ಕೇಳಿದು
ಕಿವಿಯಲುದಕವ ಕೊಂಡಡಾ ಪಾತಕವನೆಣಿಸುವೊಡೆ
ಎವಗೆ ನೂಕದು ಸಾಕದಂತಿರ
ಲವರ ಬೆಂಬಳಿವಿಡಿದು ವರ ಗೋ
ನಿವಹವನು ಮರಳಿಚುವೆನೆಂದನು ಧರ್ಮನಂದನನು ೪೩

ಎಂದು ತಮ್ಮಂದಿರು ಸಹಿತ ಯಮ
ನಂದನನು ಕಲಹಾವಲೋಕಾ
ನಂದ ಪರಿಕರಲುಳಿತ ಕೋಮಲಕಾಯನನುವಾಗಿ
ಬಂದು ಮತ್ಸ್ಯನ ನೇಮದಲಿ ನಡೆ
ತಂದು ರಥವೇರಿದನು ಪಾರ್ಥನ
ಹಿಂದಕಿರಿಸಿ ವಿರಾಟನೊಡನವನೀಶ ಹೊರವಂಟ ೪೪

ವರ ವಿರಾಟ ಸಹೋದರರು ಸಾ
ವಿರದ ಸಂಖ್ಯೆಯ ರಾಜಪುತ್ರರು
ಕೊರಳ ಪದಕವ ಕಾಲ ತೊಡರಿನ ಮಣಿಯ ಮೌಳಿಗಳ
ಪರಿಮಳದ ಕತ್ತುರಿಯ ತಿಲಕದ
ಹೊರೆದ ಗಂಧದ ತೋರ ಮುಡುಹಿನ
ಕರದ ಖಂಡೆಯರದಟರೈದಿದರಾನೆ ಕುದುರೆಯಲಿ ೪೫

ತೂಳುವರೆಗಳ ಲಗ್ಗೆಯಲಿ ಕೆಂ
ಧೂಳು ಮಸಗಿ ವಿರಾಟ ಭೂಪತಿ
ಯಾಳು ಕವಿತರೆ ಕಂಡು ಸೈರಿಸಿ ತುರುವ ಹಿಂದಿಕ್ಕಿ
ಕಾಳಗವ ಕೊಟ್ಟರು ಛಡಾಳಿಸಿ
ಸೂಳವಿಸಿ ನಿಸ್ಸಾಳ ದಿಕ್ಕಿನ
ಮೂಲೆ ಬಿರಿಯೆ ವಿರಾಟಬಲ ಹಳಚಿದದು ಪರಬಲವ ೪೬

ಫಡ ವಿರಾಟನ ಚುಕ್ಕಿಗಳಿರವ
ಗಡಿಸದಿರಿ ಸಾಯದಿರಿ ಬಿರುದರ
ಹೆಡತಲೆಯ ಹಾವಾದ ಕೀಚಕನಳಿದನಿನ್ನೇನು
ಮಿಡುಕಿ ಕಟಕವ ಹೊಕ್ಕು ನರಿ ಹಲು
ಬಿಡುವವೊಲು ವೈರಾಟ ಕೆಟ್ಟನು
ಕಡೆಗೆನುತ ಕೈವೊಯ್ದು ನಕ್ಕದು ಕೂಡೆ ಕುರುಸೇನೆ ೪೭

ಕುದುರೆ ಹೊಕ್ಕವು ದಂತಿ ಘಟೆ ತೂ
ಳಿದವು ರಥವಾಜಿಗಳು ಸೇನೆಯ
ಹೊದರ ಹೊಯ್ದವು ಕೂಡೆ ಕಾಲಾಳಿರಿದು ಕಾದಿದರು
ಕದಡಿತಾ ದಳ ಮೈಯೊಳೊಕ್ಕವು
ಬಿದಿರಿದೆಲುಗಳು ಮುರಿದು ನೆತ್ತಿಯ
ಮಿದುಳು ಸುರಿದುದು ನೆತ್ತರುಬ್ಬರಿಸಿದುದು ನೆರೆ ಮಸಗಿ ೪೮

ದಿಂಡುಗೆಡೆದವು ದಂತಿಘಟೆ ಶತ
ಖಂಡವಾದವು ತುರಗದಳ ಮುಂ
ಕೊಂಡಿರಿದು ಕಾಲಾಳು ಕೆಡೆದವು ತಾರುಥಟ್ಟಿನಲಿ
ತುಂಡಿಸಿತು ರಥವಾಜಿ ಮಿದುಳಿನ
ಜೊಂಡಿನಲಿ ರಣಭೂಮಿ ರಕುತದ
ಗುಂಡಿಗೆಗಳೊಗ್ಗಾಯ್ತು ಶಾಕಿನಿ ಡಾಕಿನೀ ಜನಕೆ ೪೯

ಚೂಳಿಕೆಯ ಬಲ ಮುರಿದು ದೊರೆಗಳ
ಮೇಲೆ ಬಿದ್ದುದು ಬವರ ಬಳಿಕೆ
ಚ್ಚಾಳುತನದಲಿ ಹೊಕ್ಕು ದುವ್ವಾಳಿಸುವ ನಿಜರಥದ
ಮೇಲು ದಳ ಕವಿದುದು ಮಹಾರಥ
ರೇಳು ಸಾವಿರ ಮತ್ಸ್ಯಭೂಪನ
ಕಾಳಗಕೆ ತೆಗೆದರು ತ್ರಿಗರ್ತರ ಸೇನೆ ಮುರಿವಡೆದು ೫೦

ಬಲ ಮುರಿದು ಬರುತಿರಲು ಖಾತಿಯ
ತಳೆದು ವೀರ ಸುಶರ್ಮನಂಬಿನ
ಮಳೆಯ ಕರೆವುತ ರಿಪು ವಿರಾಟನ ರಥವ ತುರುಬಿದನು
ಎಲವೊ ಫಡ ಫಡ ಮತ್ಸ್ಯ ಹುಲುಮಂ
ಡಳಿಕ ನಿನಗೇಕಾಳುತನವೆಂ
ದುಲಿದು ಕೈಕೊಂಡೆಚ್ಚು ಕಾದಿದನಾ ವಿರಾಟನಲಿ ೫೧

ಸರಳು ತೀರಲು ಕಿತ್ತು ಸುರಗಿಯ
ತಿರುಹಿ ಹೊಯ್ದಾಡಿದರು ಮುರಿದೊಡೆ
ಪರಿಘದಲಿ ಕಾದಿದರು ಹೊಕ್ಕರು ಹಲಗೆ ಖಡ್ಗದಲಿ
ಬೆರಸಿ ತಿವಿದಾಡಿದರು ಮತ್ಸ್ಯನ
ಭರವ ಹೊಗಳುತ ಕಲಿ ಸುಶರ್ಮಕ
ನುರವಣಿಸಿದನು ಗಾಯವಡೆದು ವಿರಾಟನನು ಹಿಡಿದ ೫೨

ಸಿಕ್ಕಿದನು ದೊರೆಯೊಪ್ಪುಗೊಟ್ಟರು
ಚುಕ್ಕಿಗಳು ಕೀಚಕನ ನೆಳಲಿರೆ
ಸಿಕ್ಕಲೀಸುವನೇ ವಿರಾಟನೆನುತ್ತ ಬಲ ಬೆದರೆ
ಉಕ್ಕಿದಾತನ ಹೆಗಲು ಬೇವುದು
ಮಕ್ಕಳಾಟಿಕೆಯಾಯ್ತು ತಾ ಕೈ
ಯಿಕ್ಕಲೇಕೆಂದೊದರಿದರು ಮತ್ಸ್ಯನ ಸಹೋದರರು ೫೩

ಬಲವನಾಯಕವಾಯ್ತು ಮತ್ಸ್ಯನ
ಕುಲಕೆ ಬಂದುದು ಕೇಡು ಸುಮ್ಮನೆ
ನಿಲುವದನುಚಿತ ಭೀಮ ಬಿಡಿಸು ವಿರಾಟ ಭೂಪತಿಯ
ಗೆಲವು ಪರಬಲಕಾಯಿತೆನೆ ರಿಪು
ಕುಲ ದವಾನಳನಣ್ಣನಾಜ್ಞೆಯ
ತಲೆಯೊಳಾಂತನು ಮುಂದಣಾಲದ ಮರನ ನೋಡಿದನು ೫೪

ಹೆಮ್ಮರವನಿದ ಕಿತ್ತು ವೈರಿ ಸು
ಶರ್ಮಕನನೊರೆಸುವೆನು ಬವರದೊ
ಳೊಮ್ಮೆಯರಿ ಮೋಹರವನರೆವನು ಜೀಯ ಚಿತ್ತೈಸು
ತಮ್ಮ ಸೈರಿಸು ಮರನ ಮುರಿಯದಿ
ರೆಮ್ಮ ಮಾತನು ಕೇಳು ಹೊಲ್ಲೆಹ
ವೆಮ್ಮ ತಾಗದೆ ಮಾಣದೆಂದನು ಧರ್ಮನಂದನನು ೫೫

ಮರನ ಮುರಿದೊಡೆ ನಮ್ಮನರಿವನು
ಕುರುಕುಲಾಗ್ರಣಿಯೀಯಮಾನುಷ
ಪರಮ ಸಾಹಸ ಭೀಮಸೇನಂಗಲ್ಲದಿಲ್ಲೆಂದು
ಅರಿಕೆಯಹುದೆನೆ ಭೀಮನೆಂದನು
ಕುರುಕುಲಾಗ್ರಣಿ ಸಹಿತಿದೆಲ್ಲವ
ನೊರೆಸಿ ಕಳೆದೊಡೆ ಬಳಿಕ ನಮಗಾರುಂಟು ಮುನಿವವರು ೫೬

ಉಗ್ರ ಕರ್ಮವ ನೆನೆಯಬೇಡ
ವ್ಯಗ್ರದಲಿ ಸಾಧಿಸಿದೆವವಧಿ ಸ
ಮಗ್ರವನು ಸಾಕಿನ್ನು ಬಿಡಿಸು ವಿರಾಟ ಭೂಪತಿಯ
ವಿಗ್ರಹವ ಜಯಿಸೆನಲು ಕುರುಕುಲ
ದಗ್ರಿಯನು ಬೀಳ್ಕೊಂಡು ವಿಲಯ ಮ
ಹೋಗ್ರ ಸನ್ನಿಭನರೆದನಿಭ ಹಯ ರಥ ಪದಾತಿಗಳ ೫೭

ಸರಳ ಸಾರದಲೆಂಟು ಸಾವಿರ
ತುರಗವನು ಸೀಳಿದನು ಕೊಂದನು
ಕರಿಘಟೆಯನೈನೂರ ಮುರಿದನು ತೇರು ಸಾವಿರವ
ಅರಿ ಪದಾತಿಯನೊಂದು ಲಕ್ಕವ
ನೊರೆಸಿದನು ಬೆಂಬತ್ತಿ ಬಿಡು ಬಿಡು
ದೊರೆ ವಿರಾಟನನೆನುತ ಹಿಡಿದನು ಕಲಿ ಸುಶರ್ಮಕನ ೫೮

ವಲಲ ಮೆಚ್ಚಿದೆನೈ ಮಹಾ ದೇ
ವಲಘು ಸಾಹಸಿ ತನ್ನ ಬಿಡಿಸಿದೆ
ಸಿಲುಕಿದನು ಹಗೆಯೆನುತ ಬೋಳೈಸಿದ ವಿರಾಟ ನೃಪ
ಬಳಿಕ ಯಮನಂದನನು ಬಿಡಿಸಿದ
ಕಲಿ ಸುಶರ್ಮನನಿರುಳಗಾಳಗ
ದೊಳಗೆ ತುರು ಮರಳಿದವು ಗೆಲಿದರು ಪಾಂಡು ನಂದನರು ೫೯

ನೀವೆಯರಸುಗಳಿನ್ನು ನಿಮ್ಮಯ
ಸೇವೆಯಲಿ ತಾನಿಹೆನು ನಾಲ್ವರಿ
ದಾವ ದೇಶದ ವೀರರೋ ಕಂಕಾದಿ ಭಟರೆನುತ
ಆ ವಿರಾಟನು ನುಡಿಯೆ ಸನ್ಮಾ
ನಾವಲಂಬಕೆ ತುಷ್ಟನಾದೆನು
ಭಾವಿಪೊಡೆ ಧರೆ ನಮ್ಮದೆಂದನು ಧರ್ಮನಂದನನು ೬೦

ಮಾನಭಂಗದ ಮೇಲೆ ಕೌರವ
ಸೇನೆ ಸರಿಯೆ ಸುಶರ್ಮ ಕಡು ದು
ಮ್ಮಾನದಿಂದಲೆ ಮುಸುಕಿನಲಿ ತಿರುಗಿದನು ಪಾಳಯಕೆ
ಭಾನು ಭುವನದ ಜನದ ನಿದ್ರಾ
ಮೌನ ಮುದ್ರೆಯನೊಡೆದನುತ್ತರ
ಧೇನು ವಿಗ್ರಹಣವನು ಮಾಡಿದನಂದು ಕುರುರಾಯ ೬೧




ಕೃಪೆ :  http://gaduginabharata.blogspot.in/
Contributors

ವಿರಾಟಪರ್ವ: ೧೦. ಹತ್ತನೆಯ ಸಂಧಿ

ಸೂ.ರಾಯ ಪಾಂಡವ ಜೀವ ಭಕ್ತನಿ
ಕಾಯ ಲಂಪಟನಮಲ ಯಾದವ
ರಾಯ ಬಿಜಯಂಗೈದನಭಿಮನ್ಯುವಿನ ಪರಿಣಯಕೆ

ಕೇಳು ಜನಮೇಜಯ ಧರಿತ್ರೀ
ಪಾಲ ಚರಿತಜ್ಞಾತವಾಸವ
ಬೀಳುಕೊಟ್ಟರು ಬಹಳ ಹರುಷದಲಿರುಳ ನೂಕಿದರು
ಮೇಲಣವರಭ್ಯುದಯವನು ಕೈ
ಮೇಳವಿಸಿ ಕೊಡುವಂತೆ ಮೂಡಣ
ಶೈಲ ಮುಖದಲಿ ಕೆಂಪು ಸುಳಿದುದು ಭಾನುಮಂಡಲದ ೦೧

ಏಳು ಕುದುರೆಯ ಖುರಪುಟದ ಕೆಂ
ದೂಳಿಯೋ ಕುಂತೀ ಕುಮಾರಕ
ರೇಳಿಗೆಯ ತನಿರಾಗರಸವುಬ್ಬರಿಸಿ ಪಸರಿಸಿತೊ
ಹೇಳಲೇನು ಮಹೇಂದ್ರ ವರ ದಿ
ಗ್ಬಾಲಕಿಯ ಬೈತಲೆಯ ಕುಂಕುಮ
ಜಾಲವೋ ಹೇಳೆನಲು ದಿನಪನ ಚೂಣಿ ರಂಜಿಸಿತು ೦೨

ಸರಸಿಜದ ಪರಿಮಳಕೆ ತುಂಬಿಯ
ಬರವ ಕೊಟ್ಟನು ಚಂದ್ರಕಾಂತಕೆ
ಬೆರಗನಿತ್ತನು ಜಕ್ಕವಕ್ಕಿಯ ಸೆರೆಯ ಬಿಡಿಸಿದನು
ಕೆರಳಿ ನೈದಿಲ ಸಿರಿಯ ಸೂರೆಯ
ತರಿಸಿದನು ರಿಪುರಾಯ ರಾಜ್ಯವ
ನೊರಸಿದನು ರವಿ ಮೂಡಣಾದ್ರಿಯೊಳಿತ್ತನೋಲಗವ ೦೩

ಹರ ಹರ (ಹರಿ ಹರಿ?) ಶ್ರೀಕಾಂತನೆನುತೈ
ವರು ಕುಮಾರಕರುಪ್ಪವಡಿಸಿದ
ರರಿ ವಿದಾರರು ಮಾಡಿದರು ಮಾಂಗಲ್ಯ ಮಜ್ಜನವ
ವರ ವಿಭೂಷಣ ಗಂಧ ಮಾಲ್ಯಾಂ
ಬರದಿ ಪರಿವೃತರಾದರವನೀ
ಸುರರಿಗಿತ್ತರು ಧೇನು ಮಣಿ ಕನಕಾದಿ ವಸ್ತುಗಳ ೦೪

ತಮದ ಗಂಟಲನೊಡೆದ ಹರುಷ
ದ್ಯುಮಣಿ ಮಂಡಲದಂತೆ ಜೀವ
ಭ್ರಮೆಯ ಕವಚವ ಕಳೆದು ಹೊಳೆ ಹೊಳೆವಾತ್ಮನಂದದಲಿ
ವಿಮಲ ಬಹಳ ಕ್ಷತ್ರ ರಶ್ಮಿಗ
ಳಮರಿ ದೆಸೆಗಳ ಬೆಳಗೆ ರಾಜೋ
ತ್ತಮ ಯುಧಿಷ್ಠಿರ ದೇವನೆಸೆದನು ರಾಜ ತೇಜದಲಿ ೦೫

ಪರಮ ಸತ್ಯವ್ರತ ಮಹಾಕ್ರತು
ವರದಲವಭೃತ ಮಜ್ಜನವ ವಿ
ಸ್ತರಿಸಿ ಭೀಮಾದಿಗಳು ಸಹಿತ ವಿರಾಟನರಮನೆಗೆ
ಅರಸ ಬಂದನು ಮಣಿಖಚಿತ ಕೇ
ಸರಿಯ ಪೀಠವನಡರಿದನು ನಿಜ
ಚರಣ ಸೇವೆಯಲೆಸೆದರೊಡ ಹುಟ್ಟಿದರು ಪರುಟವಿಸಿ ೦೬

ಅವನಿಪನ ಸಿಂಹಾಸನವನೇ
ರುವ ಸಗರ್ವಿತರಾರು ನೋಡಿದ
ಡೆವೆಗಳುರಿವುದು ಹಾಯೆನುತ ಕಂಚುಕಿಗಳೈತಂದು
ಇವರನೀಕ್ಷಿಸಿ ಕ್ಷಾತ್ರ ತೇಜವ
ನವಗಡಿಸಲಂಜಿದರು ಹರಿ ತಂ
ದವದಿರೆಬ್ಬಿಸಿ ಬಿನ್ನವಿಸಿದರು ಮತ್ಸ್ಯಭೂಪತಿಗೆ ೦೭

ಜೀಯ ಸಿಂಹಾಸನಕೆ ದಿವಿಜರ
ರಾಯನೋ ಶಂಕರನೊ ಮೇಣ್ ನಾ
ರಾಯಣನೊ ನರರಲ್ಲ ದೇವರು ಬಂದು ನೋಡುವುದು
ಕಾಯಲಸದಳವೆಮಗೆನಲು ನಿ
ರ್ದಾಯದಲಿ ನೆಲೆಗೊಂಡ ನಿರ್ಜರ
ರಾಯನಾರೆಂದೆನುತಲಾಗ ವಿರಾಟ ಚಿಂತಿಸಿದ ೦೮

ಕರೆಸಿಕೊಂಡು ಪುರೋಹಿತನನು
ತ್ತರನನಖಿಳ ಮಹಾಪ್ರಧಾನರ
ನರಮನೆಯ ಹೊರವಂಟು ವೋಲಗಶಾಲೆಗೈತರುತ
ಕರಗಿ ಸೂಸಿದ ಚಂದ್ರ ಬಿಂಬದ
ಕಿರಣ ಲಹರಿಗಳೆನಲು ವಿವಿಧಾ
ಭರಣ ಮುಕ್ತಾ ಪ್ರಭೆಯ ಕಂಡನು ನೃಪತಿ ದೂರದಲಿ ೦೯

ಹರನ ನಾಲಕು ಮುಖದ ಮಧ್ಯ
ಸ್ಫುರಿತದೀಶಾನನದೊಲಿರೆ ಸೋ
ದರ ಚತುಷ್ಟಯ ಮಧ್ಯದಲಿ ಕಂಡನು ಯುಧಿಷ್ಠಿರನ
ಅರಸಿಯನು ವಾಮದಲಿ ವಿವಿಧಾ
ಭರಣ ಮಣಿ ರಶ್ಮಿಗಳ ಹೊದರಿನ
ಹೊರಳಿಯಲಿ ಕಣ್ಣಾಲಿ ಕೋರೈಸಿದವು ನಿಮಿಷದಲಿ ೧೦

ಮೇಳವೇ ಫಡ ಮನದ ಮತ್ಸರ
ಕಾಲಿಡಲು ತೆರಹಿಲ್ಲ ಮನುಜರ
ಹೋಲುವೆಯ ನಾಟಕದ ನಿರ್ಜರ ಮಂಡಲೇಶ್ವರರು
ಆಲಿಗಳು ಮೇಲಿಕ್ಕಲಮ್ಮವು
ಶೂಲಪಾಣಿಯ ಪರಮ ತೇಜದ
ಚೂಳಿಯೋ ಶಿವ ಶಿವ ಎನ್ನುತ್ತ ವಿರಾಟ ಬೆರಗಾದ ೧೧

ವಲಲ ಕಂಕ ಬೃಹನ್ನಳೆಯ ಮೈ
ಸುಳಿವ ಹೋಲುವರೆಂದು ಕೆಲಬರು
ಕೆಲರಿದೆತ್ತಣ ನರರು ತೆಗೆ ಸುರಲೋಕ ಪಾಲಕರು
ತಿಳಿಯಲರಿದೆಮಗೆಂದು ಕೆಲಬರು
ತಳವೆಳಗುಗೊಳುತಿರಲು ಮಂದಿಯ
ಕೆಲಕೆ ನೂಕಿಯೆ ತಂದೆಗುತ್ತರ ನಗುತ ಕೈಮುಗಿದ ೧೨

ತಾತ ಬಿನ್ನಹ ನಿನ್ನೆ ವೈರಿ
ವ್ರಾತವನು ಗೆಲಿದಾತನೀ ತೋ
ರ್ಪಾತನೀತನ ಮುಂದೆ ಮೆರೆವವ ಕೀಚಕಾಂತಕನು
ಈತ ನಕುಲನು ವಾಮದಲಿ ನಿಂ
ದಾತ ಸಹದೇವಾಂಕನನಿಬರಿ
ಗೀತ ಹಿರಿಯನು ಧರ್ಮನಂದನನೆಂದು ತೋರಿಸಿದ ೧೩

ರಮಣಿಯೈವರಿಗೀಕೆ ಕೆಲದಲಿ
ಕಮಲಮುಖಿಯನು ನೋಡು ತಾವಿವ
ರಮಳ ಗುಣ ಗಂಭೀರ ರಾಯರು ಪಾಂಡು ನಂದನರು
ನಮಗೆ ಭಾರಿಯ ಭಾಗ್ಯಲಕ್ಷ್ಮಿಯ
ಮಮತೆಯಾಯ್ತಿನ್ನೇನು ನೃಪಪದ
ಕಮಲದಲಿ ಬೀಳುವೆವು ನಡೆ ನಡೆ ಧನ್ಯರಹೆವೆಂದ ೧೪

ಈತನೇ ಧರ್ಮಜನು ದಿಟ ತಾ
ನೀತನೇ ಪವನಜನು ನಿಶ್ಚಯ
ವೀತನೇ ಫಲುಗುಣನು ಮಾದ್ರೀತನುಜರೇ ಇವರು
ಈ ತಳೋದರಿ ದ್ರುಪದ ಸುತೆಯೇ
ಕೌತುಕವಲೇ ಭುವನಜನ ವಿ
ಖ್ಯಾತರೆಲ್ಲಿಂದೆಲ್ಲಿ ಮೂಡಿದರೆನುತ ಬೆರಗಾದ ೧೫

ವರುಷವೊಂದಜ್ಞಾತ ವಾಸವ
ನಿರದೆ ನೂಕಿದರಿಲ್ಲಿ ಬಳಕೆಯ
ಹೊರೆಯ ಹೆಸರವು ಬೇರೆ ನಡವಳಿಯಂಗವದು ಬೇರೆ
ಮರುಳನಂತಿರೆ ಜಗಕೆ ತೋರನೆ
ಪರಮ ತತ್ವಜ್ಞಾನಿ ನಮ್ಮೀ
ಯರಸುತನ ಫಲವಾಯ್ತು ನಡೆಯೆಂದನು ಕುಮಾರಕನು ೧೬

ದರುಶನಕೆ ಮಣಿ ರತುನ ಕನಕವ
ತರಿಸಿ ಮುದದಲಿ ಮುಳುಗಿ ನಿಜ ಪರಿ
ಕರ ಸಹಿತ ಮೈಯಿಕ್ಕಿದನು ಕಾಣಿಕೆಯನೊಪ್ಪಿಸಿದ
ವರ ನೃಪಾಲ ತ್ರಾಹಿ ಭುವನೇ
ಶ್ವರ ಪರಿತ್ರಾಯಸ್ವ ಕರುಣಿಸು
ಕರುಣಿಸೆಂದಂಘ್ರಿಗಳ ಹಿಡಿದನು ಮತ್ಸ್ಯ ಭೂಪಾಲ ೧೭

ಬಗೆದೆನಪರಾಧವನು ಕರುಣಾ
ಳುಗಳ ಬಲ್ಲಹ ನೀನು ನಿನ್ನಂ
ಘ್ರಿಗಳಿಗೀ ತಲೆ ಬಂಟ ನೀನಿದ ಕಾಯಬೇಕೆನುತ
ಮಿಗೆ ಭಕುತಿ ಭಾವದಲಿ ನಿಜ ಮಂ
ತ್ರಿಗಳು ಮಕ್ಕಳು ಸಹಿತ ಮನ ನಂ
ಬುಗೆಯ ಮೆರೆದನು ಮತ್ಸ್ಯ ಭೂಪ ಮಹೀಶರಿದಿರಿನಲಿ ೧೮

ಆ ಸುದೇಷ್ಣೆ ಕುಮಾರಿಯೊಡನೆ ವಿ
ಳಾಸಿನೀಜನ ಸಹಿತ ರಾಣೀ
ವಾಸದಲ್ಲಿಗೆ ಬಂದು ಕಾಣಿಕೆ ಕೊಟ್ಟು ಪೊಡವಂಟು
ಆ ಸಕಲ ಪರಿವಾರ ಪುರಜನ
ದೇಶಜನ ಕಾಣಿಕೆಯನಿತ್ತು ಮ
ಹೀಶನಿಗೆ ಮೈಯಿಕ್ಕಿ ಕಂಡುದು ಬಹಳ ಹರುಷದಲಿ ೧೯

ಮುಗುಳು ನಗೆಯಲಿ ಭೀಮ ಪಾರ್ಥರ
ಮೊಗವ ನೋಡಿದನವನಿಪತಿ ಕೈ
ಮುಗಿದು ತಲೆವಾಗಿದರು ತಮ್ಮಂದಿರು ಮಹಿಪತಿಗೆ
ತೆಗೆಸಿದರು ಕಾಣಿಕೆಯನಾ ಮಂ
ತ್ರಿಗಳನಾ ಪರಿವಾರವನು ದೃಗು
ಯುಗದ ಕರುಣಾ ರಸದಲನಿಬರ ಹೊರೆದು ಮನ್ನಿಸಿದ ೨೦

ಶಿರವನೆತ್ತಿ ವಿರಾಟ ಭೂಪನ
ಕರೆದು ಹತ್ತಿರ ಪೀಠದಲಿ ಕು
ಳ್ಳಿರಿಸಲೊಡೆ ಮುರಿಚಿದನು ಕೆಲದಲಿ ಗದ್ದುಗೆಯ ಸರಿದು
ಪರಮ ಸುಕೃತವಲಾ ಧರಾಧೀ
ಶ್ವರನ ದರುಶನವಾಯ್ತು ಧನ್ಯರು
ಧರೆಯೊಳೆಮಗಿನ್ನಾರು ಸರಿಯೆಂದನು ವಿರಾಟ ನೃಪ ೨೧

ದೇಶ ನಿಮ್ಮದು ನಗರ ಹೆಚ್ಚಿದ
ಕೋಶ ನಿಮ್ಮದು ನನ್ನ ಜೀವ ವಿ
ಳಾಸ ನಿಮ್ಮದು ಸಲಹಬೇಹುದು ಬಿನ್ನಹದ ಹದನ
ಈ ಸಮಂಜಸ ದಿವಸದಲಿ ಸಿಂ
ಹಾಸನದಲಭಿಷೇಕವನು ಭೂ
ಮೀಶ ವಿಸ್ತರಿಸುವೆನು ಚಿತ್ತೈಸೆಂದನಾ ಭೂಪ ೨೨

ಎನಲು ನಗುತೆಂದನು ಮಹೀಪತಿ
ವಿನಯ ಮಧುರ ರಸಾಭಿಷೇಕವ
ನೆನಗೆ ಮಾಡಿದೆ ಸಾಕು ಪುನರುಕ್ತಾಭಿಷೇಕವದು
ಜನವಿದೆಮ್ಮದು ನೀನು ನಮ್ಮಾ
ತನು ಧರಿತ್ರಿಯಿದೆಮ್ಮದೆಂಬೀ
ನೆನಹು ತಾನುಪಚಾರ ನಮಗೇಕೆಂದನಾ ಭೂಪ ೨೩

ನೊಂದವರು ಭೀಮಾರ್ಜುನರು ಹಗೆ
ಯಿಂದ ಹಳುವವ ಹೊಕ್ಕು ಮನಸಿನ
ಕಂದು ಕಸರಿಕೆ ಹೋಗದಾ ದುರ್ಯೋಧನಾದಿಗಳ
ಕೊಂದು ಕಳದಲಿ ಮತ್ತೆ ಗಜ ಪುರಿ
ಗೆಂದು ಗಮಿಸುವೆವೆಂಬ ತವಕಿಗ
ರಿಂದು ತಾನೇ ಬಲ್ಲರೆಂದನು ಧರ್ಮನಂದನನು ೨೪

ಎಂದನುತ್ತರನರಸನಂಘ್ರಿಯೊ
ಳಂದು ಮಕುಟವ ಚಾಚಿ ಬಿನ್ನಹ
ವಿಂದು ನೇಮವ ಕೊಡಿ ಕುಮಾರಿಯನೀವೆನರ್ಜುನಗೆ
ಎಂದಡೇಳೇಳೆಂದು ನಸು ನಗೆ
ಯಿಂದ ಪಾರ್ಥನ ನೋಡೆ ಕೈ ಮುಗಿ
ದೆಂದನಾತನು ಮನದ ನಿಶ್ಚಯವನು ಯುಧಿಷ್ಠಿರಗೆ ೨೫

ವರುಷವಿವಳಲಿ ನಾಟ್ಯ ವಿದ್ಯೆಯ
ಪರುಟವಿಸಿದೆನು ತಂದೆಯಂತೀ
ತರುಣಿ ಭಜಿಸಿದಳಾ ಪ್ರಕಾರ ರಹಸ್ಯ ದೇಶದಲಿ
ಗುರುತನದ ಗರುವಾಯಿಯೆತ್ತಲು
ಅರಸಿಯೆಂಬುದಿದಾವ ಮತವೀ
ವರ ಕುಮಾರಿಯನೀವಡಭಿಮನ್ಯುವಿಗೆ ಕೊಡಲೆಂದ ೨೬

ಎವಗೆ ನೀವೇನಾತನೇನು
ತ್ಸವದೊಳಾಗಲಿಯೆನೆ ವಿರಾಟನ
ನವನಿಪತಿ ಮನ್ನಿಸಿದನಿತ್ತನು ನಗುತ ವೀಳೆಯವ
ಎವಗೆ ಪರಮಸ್ವಾಮಿಯೆಮ್ಮು
ತ್ಸವದ ನೆಲೆಯೆಮ್ಮೈವರಸು ಯಾ
ದವ ಶಿರೋಮಣಿ ಕೃಷ್ಣನಭಿಮತವೆಮ್ಮ ಮತವೆಂದ ೨೭

ಪೊಡವಿಯೊಡೆತನವೆಮಗೆ <ಮಿಗೆ? - ಮೂಲದಲ್ಲಿ ಎರಡಕ್ಷರ ಬಿಟ್ಟಿದೆ> ಕ
ಟ್ಟೊಡೆಯ ಕೃಷ್ಣನು ಕೃಷ್ಣನೊಡಬ
ಟ್ಟೊಡೆ ವಿವಾಹ ನಿರಂತರಾಯವು ಚಿಂತೆ ಬೇಡೆನಲು
ಒಡಬಡಲಿ ಮೇಣಿರಲಿ ಗುರು ನಿ
ಮ್ಮಡಿ ಮುರಾರಿಯ ತೋರಿಸುವಿರಾ
ದೊಡೆ ಕೃತಾರ್ಥನು ತಾನೆನುತ ಹಿಗ್ಗಿದನು ಮತ್ಸ್ಯ ನೃಪ ೨೮

ಪರಿಪರಿಯ ಪಾವುಡವ ಕಟ್ಟಿಸಿ
ಹರುಷದಲಿ ಬಿನ್ನಹದ ವೋಲೆಯ
ಬರೆಸಿದನು ವೇಗಾಯ್ಲ ದೂತರನಟ್ಟಿದನು ಭೂಪ
ಚರರು ಪಯಣದ ಮೇಲೆ ಪಯಣದ
ಭರದಿ ಬಂದರು ಕೃಷ್ಣರಾಯನ
ಪುರಕೆ ಪರಿತೋಷದಲಿ ಹೊಕ್ಕರು ರಾಜ ಮಂದಿರವ ೨೯

ಬರವ ಬಿನ್ನಹ ಮಾಡೆ ಪಡಿಹಾ
ರರು ಮುರಾರಿಯ ನೇಮದಲಿ ಚಾ
ರರನು ಹೊಗಿಸಲು ಬಂದು ಹೊಕ್ಕರು ಕೃಷ್ಣನೋಲಗವ
ದರುಶನವ ಮಾಡುತ್ತ ಚರಣಾಂ
ಬುರುಹದಲಿ ಮೈಯಿಕ್ಕಿ ದೇವನ
ಹೊರೆಯಲಿಳುಹಿದರಿವರು ಕಳುಹಿದ ಬಿನ್ನವತ್ತಳೆಯ ೩೦

ನಸುನಗುತ ಮುರವೈರಿ ಮಿಗೆ ಮ
ನ್ನಿಸಿದನವರನು ಪಾಂಡು ತನಯರ
ಕುಶಲವನು ದುರುಪದಿಯ ಸುಕ್ಷೇಮವನು ಬೆಸಗೊಳಲು
ಕುಶಲರನಿಬರು ಜೀಯ ಭಕ್ತ
ವ್ಯಸನ ಭಾರವು ನಿಮ್ಮಲಿರೆ ಜೀ
ವಿಸುವುದರಿದೇ ಪಾಂಡು ನಂದನರೆಂದರಾ ಚರರು ೩೧

ಕಳುಹಿದುಡುಗೊರೆ ಜೀಯ ನಿಮ್ಮಡಿ
ಗಳಿಗೆ ರಾಣೀವಾಸ ವರ್ಗಕೆ
ಬಲಗೆ ವಸುದೇವರಿಗೆ ದೇವಕಿಯುಗ್ರಸೇನರಿಗೆ
ಕುಲ ಗುರುಗಳಕ್ರೂರನುದ್ಧವ
ಬಲುಭುಜನು ಕೃತವರ್ಮ ಸಾತ್ಯಕಿ
ಲಲಿತ ಸಾಂಬ ಕುಮಾರ ಕಂದರ್ಪಾನಿರುದ್ಧರಿಗೆ ೩೨

ಎನಲು ನಸುನಗೆಯಿಂದ ಕುಂತಿಯ
ತನುಜರಟ್ಟಿದ ಪಾವುಡಂಗಳ
ನನಿತುವನು ತೆಗೆಸಿದನು ಕೆಲದಲಿ ಸಂಧಿ ವಿಗ್ರಹಿಯ
ದನುಜಹರನೀಕ್ಷಿಸಲು ಲಿಖಿತವ
ನನುನಯದೊಳಳವಡಿಸಿ ಬಿನ್ನಹ
ವೆನುತ ನೇಮವ ಕೊಂಡು ಕಳಕಳವಡಗೆ ವಾಚಿಸಿದ ೩೩

ಸ್ವಸ್ತಿ ದಾನವರಾಯಕುಂಜರ
ಮಸ್ತಕಾಂಕುಶ ಖೇಲನಾ ಪರಿ
ಯಸ್ತ ಯದುಕುಲ ಸಿಂಹ ಸಂಹೃತ ಜನ್ಮದುರಿತಭಯ
ಹಸ್ತಕಲಿತ ಸುದರುಶನೋರ್ಧ್ವಗ
ಭಸ್ತಿಲವಶಮಿತಾರ್ಕ ಪರಿವೃಢ
ವಿಸ್ತರಣ ಚಿತ್ತೈಸು ಕುಂತಿಯ ಸುತರ ಬಿನ್ನಪವ ೩೪

ದೇವ ನಿಮ್ಮಡಿಗಳ ಕೃಪಾ ಸಂ
ಜೀವನಿಯಲೆಮ್ಮಸುಗಳೊಡಲಿನ
ಠಾವ ಮೆಚ್ಚಿದವೊದೆದು ಹಾಯ್ದವು ವಿಪಿನ ಮಂದಿರವ
ಈ ವರುಷದಜ್ಞಾತವಾಸ ಗ
ತಾವಶೇಷಣವಾಯ್ತು ಕಂಗಳಿ
ಗೀವುದವಯವ ದರುಶನಾಮೃತಪಾನ ಸಂಪದವ ೩೫

ದಾಟಿದೆವು ನುಡಿದವಧಿಯನು ವೈ
ರಾಟ ಪುರದಲಿ ತುರುವಿಡಿದು ಮೈ
ನೋಟಕೋಸುಗ ಬಂದು ನುಗ್ಗಾಯಿತ್ತು ಕುರುಸೇನೆ
ತೋಟಿ ಜಯಿಸಿದೊಡೆಮ್ಮನರಿದು ವಿ
ರಾಟ ಮನ್ನಿಸಿ ತನ್ನ ಮಗಳ ಕಿ
ರೀಟಿ ತನಯಂಗೀವ ಭರವಿದೆ ದೇವರವಧರಿಸಿ ೩೬

ಮದುವೆಯೆಂಬುದು ನೆವ ನಿಜ ಶ್ರೀ
ಪದವ ತೋರಿಸಬೇಕು ವನ ವಾ
ಸದ ಪರಿಕ್ಲೇಶಾನು ಸಂತಾಪವನು ಬೀಳ್ಕೊಡಿಸಿ
ಕದಡು ಹೋಗಲು ಕಾಣಬೇಹುದು
ಹದುಳವಿಟ್ಟೆಮಗುಚಿತ ವಚನದ
ಹದವಳೆಯಲುತ್ಸಾಹಸಸಿಯನು ದೇವ ಸಲಹುವುದು ೩೭

ಕರುಣಿ ಬಿಜಯಂಗೈದು ಭಕ್ತರ
ಹೊರೆಯ ಬೇಹುದು ಬೇಡಿಕೊಂಬೆನು
ಅರಸಲೇಕೆಳೆಗಂದಿ ತಾಯ್ತಾನರಸುವಂದದಲಿ
ಚರಣಭಜಕ ಕುಟುಂಬನೆಂಬೀ
ಬಿರುದ ಪಾಲಿಸಿ ಬಿನ್ನಹವನವ
ಧರಿಸಿ ಕಾಣಿಸಿ ಕೊಡುವುದೆಮಗೆ ಮಹಾ ಪ್ರಸಾದವನು ೩೮

ಕೇಳಿ ಹರುಷಿತನಾಗಿ ಕಡು ಕರು
ಣಾಳು ಹೊಂಪುಳಿಯೋಗಿ ಭಕ್ತರ
ಮೇಲಣೊಲವಿನ ಬಹಳ ಪರಮ ಸ್ನೇಹ ಪಸರಿಸಿತು
ಕೇಳಿದೆವೆ ಹರ ಹರ ಯುಧಿಷ್ಠಿರ
ನೇಳಿಗೆಯನಾ ಕೌರವೇಶ್ವರ
ನೂಳಿಗವನೆನುತಸುರರಿಪು ನೋಡಿದನು ಕೆಲಬಲನ ೩೯

ಚಿಂತೆ ಬೀತುದು ಪಾಂಡು ಮಾವನ
ಸಂತತಿಗಳಜ್ಞಾತ ವಾಸವ
ನೆಂತು ಪಂಥದ ಮೇಲೆ ಕಳೆದರೊ ನಮ್ಮ ಪುಣ್ಯವಿದು
ಕುಂತಿ ದೇವಿಯರುಮ್ಮಳಿಸೆ ನಾ
ವೆಂತು ಬದುಕುವೆವಕಟೆನುತ್ತ ನಿ
ರಂತರವು ಮರುಗುವನು ಬೊಪ್ಪನು ಶಿವ ಶಿವಾಯೆಂದ ೪೦

ಭವಣಿಗೆಯ ಬಂದಡವಿಯಲಿ ಪಾಂ
ಡವರು ನವೆದರು ರಾಜ್ಯವನು ಯಾ
ದವರು ನಾವನುಭವಿಸುತಿದ್ದೆವು ನವೆದರಿನ್ನಬರ
ಅವರ ಸೊಗಸೇ ನಮ್ಮ ಸೊಗಸುಗ
ಳವರ ದುಗುಡವೆ ನಮ್ಮದದರಿಂ
ದವರ ವಿಮಳಾಭ್ಯುದಯ ನಮಗೆಂದಸುರರಿಪು ನುಡಿದ ೪೧

ಕಾಲ ಕೈಗೂಡುವೊಡೆ ಲೇಸಿನ
ಮೇಲೆ ಲೇಸುಗಳೊದಗುವವು ಭೂ
ಪಾಲ ಕುಂತಿಯ ಸುತರ ಬೆಳವಿಗೆ ಮೊದಲ ಮಂಗಳವು
ಮೇಲೆ ತಂಗಿಯ ಮಗನ ಮದುವೆ ವಿ
ಶಾಲ ಸುಖವದು ನಿಖಿಳ ಯಾದವ
ಜಾಲ ಪಯಣವ ಮಾಡಲೆಂದಸುರಾರಿ ನೇಮಿಸಿದ ೪೨

ಚರರಿಗುಡುಗೊರೆ ಗಂಧ ನಿಖಿಲಾ
ಭರಣ ಕತ್ತುರಿ ಕರ್ಪುರವನಿ
ತ್ತರಿದಿಶಾಪಟ ಬೀಳುಗೊಟ್ಟನು ರಾಯಸವ ಬರೆಸಿ
ಮರಳಿ ದೂತರು ಬಂದು ಮತ್ಸ್ಯನ
ಪುರವ ಹೊಕ್ಕರು ಕೃಷ್ಣರಾಯನ
ಕರುಣದಳತೆಯ ಬಿನ್ನವಿಸಿದರು ಪಾಂಡು ತನಯರಿಗೆ ೪೩

ಬಳಿಕ ಸುಮುಹೂರ್ತದಲಿ ಮತ್ಸ್ಯನ
ಹೊಳಲ ಹೊರವಂಟುತ್ತರ ದಿಶಾ
ವಳಯದಲಿ ರಚಿಸಿದರುಪಪ್ಲವ್ಯಾಖ್ಯ ಪುರವರವ
ನೆಲನಗಲದಲಿ ಕಟ್ಟಿ ಕೇರಿಯ
ನಳವಡಿಸಿದರು ನಿಖಿಳ ನೃಪರಿಗೆ
ಬಳಿಯನಟ್ಟಿದನುತ್ತರೋತ್ತರವಾದುದಿವರುದಯ ೪೪

ಜೋಳಿ ಹರಿದವು ನಿಖಿಳ ರಾಯರಿ
ಗೋಲೆಯುಡುಗೊರೆಯಿಕ್ಕಿದವು ಪಾಂ
ಚಾಲಪತಿ ಹೊರವಂಟ ಮೂರಕ್ಷೋಣಿ ಬಲ ಸಹಿತ
ನೀಲನು ಯುಧಾಮನ್ಯು ಸಮರ ಕ
ರಾಳ ಧೃಷ್ಟದ್ಯುಮ್ನ ಕೀರ್ತಿ ವಿ
ಶಾಲ ಧೀರ ಶಿಖಂಡಿ ಸಹಿತಾ ದ್ರುಪದನೈತಂದ ೪೫

ಇದಿರುಗೊಂಡರು ಹರುಷದಲಿ ದುರು
ಪದಿಯ ಬಾಂಧವ ಪೈಕವನು ಮಿಗೆ
ಮುದದಿ ಕಾಣಿಸಿಕೊಂಡರಖಿಳ ಮಹಾ ಮಹೀಶ್ವರರ
ಒದಗಿತಖಿಳಕ್ಷೋಹಿಣಿ ಬಲ ಸಂ
ಪದವನುನ್ನತ ವಸ್ತುಗಳ ಸೊಂ
ಪೊದವಿದವು ಕೈಗೈದು ಮದುವೆಯ ಮಂಗಳಾಭ್ಯುದಯ ೪೬

ದೇವನೀ ಬಹನೆಂದು ಬಂದರು
ದಾವಣಿಯ ಹವಣರಿದು ಬಳಿಕ ಮ
ಹಾ ವಿಳಾಸದಳೊಪ್ಪವಿಟ್ಟರು ತಮ್ಮ ನಗರಿಗಳ
ಹೂವಲಿಯ ವೀಧಿಗಳ ನವ ರ
ತ್ನಾವಳಿಯ ಸೂಸಕದ ಭದ್ರದ
ಲೋವೆಗಳ ಲಂಬಳದಲೆಸೆದವು ಕೇರಿ ಕೇರಿಗಳು ೪೭

ಚಾರುತರ ಕತ್ತುರಿಯ ಸಾದಿನ
ಸಾರಣೆಯ ಕುಂಕುಮದ ರಸಗಳ
ಕಾರಣೆಯ ನವಚಿತ್ರಪತ್ರದ ಬಹಳ ಭಿತ್ತಿಗಳ
ಓರಣದ ಬೀದಿಗಳ ತಳಿಗೆಯ
ತೋರಣದ ಹೊಂಜಗುಲಿಗಳ ಪ
ನ್ನೀರ ಚಳೆಯದ ರಚನೆಯಲಿ ಮನೆ ಮನೆಗಳೊಪ್ಪಿದವು ೪೮

ಕಟ್ಟಿದವು ಗುಡಿ ಮನೆಗಳಲಿ ಮೇ
ಲ್ಕಟ್ಟು ಬಿಗಿದವು ಪುರದ ನಾರಿಯ
ರುಟ್ಟು ತೊಟ್ಟರು ಕಳಶ ಕನ್ನಡಿ ಸಹಿತ ದೇಶಿಯಲಿ
ಇಟ್ಟಣಿಸಿ ಗಜ ವಾಜಿ ರಥ ಸಾ
ಲಿಟ್ಟು ತೋರುವ ದನುಜರಾಯ ಘ
ರಟ್ಟನನು ನಡೆದಿದಿರುಗೊಂಡರು ಪಾಂಡು ನಂದನರು ೪೯

ಕಳಶ ಕನ್ನಡಿ ವಾದ್ಯರವ ಮಂ
ಗಳ ಮಹಾಂಬುಧಿ ಮಸಗಿದವೊಲು
ಜ್ವಲ ಪತಾಕಾವಳಿಯ ವಿಮಳಚ್ಛತ್ರ ಚಾಮರದ
ಹೊಳೆವ ಕಂಗಳ ಮುಖದ ಕಾಂತಿಯ
ಮೊಲೆಗಳೊಡ್ಡಿನ ಮಂದ ಗಮನದ
ತಳಿದ ಮುಸುಕಿನ ಮೌಳಿಕಾತಿಯರೈದಿತೊಗ್ಗಿನಲಿ ೫೦

ಹೊಳಹು ಮಿಗೆ ದೂರದಲಿ ಗರುಡನ
ಹಳವಿಗೆಯ ಕಂಡಂದಣಂಗಳ
ನಿಳಿದು ಮೈಯಿಕ್ಕಿದರು ದ್ರುಪದ ವಿರಾಟ ಪಾಂಡವರು
ಬಳಿಕ ಭೂಪರು ಕಾಲು ನಡೆಯಲಿ
ನಲಿದು ಬರುತಿರಲಾನೆಯಿಂದಿಳೆ
ಗಿಳಿದು ಬಿಜಯಂಗೈದನಸುರಾರಾತಿ ಕರುಣದಲಿ ೫೧

ಇತ್ತನವರಿಗೆ ಸಮಯವನು ದೇ
ವೋತ್ತಮನು ನಿಗಮೌಘವರಸಿದ
ಡತ್ತಲಿತ್ತಲು ಸರಿವ ಮುನಿಗಳ ಮನಕೆ ಮೈಗೊಡದ
ಹೆತ್ತ ಮಕ್ಕಳು ನಿಲಲಿ ಭಕ್ತರ
ನಿತ್ತ ಕರೆ ನೆನೆವರಿಗೆ ತನ್ನನು
ತೆತ್ತು ಬದುಕುವೆನೆಂಬ ಬೋಳೆಯರರಸ ನಡೆತಂದ ೫೨

ಬಲದ ಪದಘಟ್ಟಣೆಯ ರಜದಿಂ
ಬೆಳುಪಡಗಿದಂಬರದ ಮಾರ್ಗದ
ಝಳದ ಕಿರುಬೆಮರುಗಳ ಲಲಿತ ಕಪೋಲ ಮಂಡಲವ
ಕೆಲದ ಪಾಯವಧಾರುಗಳ ಕಳ
ಕಳದ ಕರುಣಾರಸವ ಸೂಸುವ
ಮೆಲುನಗೆಯ ಸಿರಿಮೊಗದ ಕೃಷ್ಣನ ಕಂಡುದಾ ಸೇನೆ ೫೩

ಬಾಗಿದವು ಬರಿಕೈಗಳನು ಹಣೆ
ಗಾಗಿ ಮುರುಹಿದವಾನೆಗಳು ತಲೆ
ವಾಗಿ ಗುಡಿಗಟ್ಟಿದವು ಹೇಷಾರವದ ತೇಜಿಗಳು
ತೂಗಿ ತನುವನು ಪುಳಕದಲಿ ಮನ
ಲಾಗು ಮಿಗೆ ಮೈಮರೆದು ಹರುಷದ
ಸಾಗರದಲೋಲಾಡುತಿರ್ದುದು ಕೂಡೆ ತಳತಂತ್ರ ೫೪

ಅಂಗನೆಯರರವಿಂದನಾಭನ
ಮಂಗಳ ಶ್ರೀಮೂರ್ತಿ ಸುಧೆಯನು
ಕಂಗಳಲಿ ಕುಡಿಕುಡಿದು ಪಡೆಯರು ಮತ್ತೆ ದಣಿವುಗಳ
ಅಂಗಜನ ಪೆತ್ತಯ್ಯ ನೀ ರೂ
ಹಿಂಗೆ ಬಡವನೆಯೆನುತ ಮುರಹರ
ನಂಗ ಶೋಭೆಯ ಬಂದಿಯಲಿ ಸಿಲುಕಿತ್ತು ಸತಿನಿವಹ ೫೫

ಎರಡು ಸೇರೆಯ ತುಂಬಿ ರತ್ನವ
ಸುರಿದು ಮೈಯಿಕ್ಕಿದನು ಭೂಪತಿ
ಚರಣದಲಿ ಚತುರಾಸ್ಯಜನಕನ ವಿಮಳಭಕ್ತಿಯಲಿ
ನರ ವೃಕೋದರ ನಕುಲ ಸಹದೇ
ವರು ವಿರಾಟ ದ್ರುಪದ ಮೊದಲಾ
ಗಿರೆ ಸಮಸ್ತ ನೃಪಾಲಕರು ಮೈಯಿಕ್ಕಿತೊಗ್ಗಿನಲಿ ೫೬

ಶಿರವ ನೆಗಹಿ ಯುಧಿಷ್ಠಿರನ ಮೈ
ಮುರಿಯಲೀಯದೆ ಕೃಷ್ಣನಪ್ಪಿದ
ನುರುತರ ಪ್ರೇಮದಲಿ ಭೀಮಾರ್ಜುನರ ಯಮಳರನು
ಹರುಷದಲಿ ತೆಗೆದಪ್ಪಿ ಭೂಮೀ
ಶ್ವರರ ಮನ್ನಿಸಿದನು ವಿಳಾಸಿನಿ
ಯರ ವಿಡಾಯಿಯಲರಸಿ ಕಂಡಳು ಬಂದು ಮುರಹರನ ೫೭

ಕಾಣಿಕೆಯ ಕೈಕೊಂಡು ರಾಯನ
ರಾಣಿಯನು ಮನ್ನಿಸಿದ ತನ್ನಯ
ರಾಣಿವಾಸದ ಹೊರಗೆ ನೇಮವ ಕೊಟ್ಟು ಕಳುಹಿದನು
ರಾಣಿ ರುಕುಮಿಣಿಯಾದಿಯಾದ
ಕ್ಷೋಣಿಧರನರಸಿಯರನನಿಬರ
ಕಾಣಿಕೆಯ ಕೊಟ್ಟೆರಗಿ ದುರುಪದಿ ಕಂಡಳೊಲವಿನಲಿ ೫೮

ದರುಶನವನೊಲಿದಿತ್ತು ವಸುದೇ
ವರನು ದೇವಕಿ ದೇವಿಯರ (ಪಾ: ದೇವಕಿಯರ) ಸಂ
ಕರುಷಣನ ಮಹದುಗ್ರಸೇನನ ಕಂಡನವನೀಶ
ವರ ಸುಭದ್ರಾದೇವಿ ಭಾವಂ
ದಿರಿಗೆ ವಂದಿಸಿದಳು ಕುಮಾರನು
ಹರುಷದಲಿ ಬಿಗಿಯಪ್ಪಿದನು ಅಭಿಮನ್ಯು ಪಾಂಡವರ ೫೯

ಕೈದಣಿಯೆ ವಸುದೇವನಳಿಯನ
ಮೈದಡವಿದನು ಮಗನೆ ಬನದೊಳ
ಗೊಯ್ದು ವಿಧಿ ಬಂಧಿಸಿತಲಾ ಸಾಕಿನ್ನು ದೈವವನು
ಬೈದು ಮಾಡುವುದೇನು ದುರುಪದಿ
ಯೈದೆತನವುಂಟಾಗಿ ದುರಿತವ
ಕೊಯ್ದು ನರಲೋಕಕ್ಕೆ ಬಂದಿರಿ ನಮ್ಮ ಪುಣ್ಯದಲಿ ೬೦

ಅರಸಿಯೈದೆತನಕ್ಕೆ ನಮ್ಮೈ
ವರ ನಿಜಾಯುಷ್ಯಕ್ಕೆ ರಾಜ್ಯದ
ಸಿರಿಯ ಸೊಂಪಿಗೆ ನಿಮ್ಮ ಮಗನೀ ಕೃಷ್ಣ ಹೊಣೆ ನಮಗೆ
ಸುರರು ಸರಿಯಿಲ್ಲೆಮಗೆ ಮಿಕ್ಕಿನ
ನರರು ಗಣ್ಯವೆ ಮಾವ ಕೇಳೆಂ
ದರಸ ವಸುದೇವನನು ಮಧುರೋಕ್ತಿಯಲಿ ಮನ್ನಿಸಿದ ೬೧

ತಂದೆ ಬೇಡೆಮಗವ್ವೆ ಬೇಡೆಮ
ಗಿಂದುಮುಖಿಯರನೊಲ್ಲೆವಾವ್ ಮನ
ಸಂದು ಮೆಚ್ಚಿಹೆವೆಮ್ಮ ಭಕ್ತರಿಗೆಂಬನನವರತ
ನೊಂದೆನೆಂಬನು ತನ್ನವರು ಮನ
ನೊಂದರಾದೊಡೆ ತನ್ನವರ ಸುಖ
ವಿಂದು ತನ್ನದದೆಂಬುದೇ ಸಿರಿಕೃಷ್ಣ ಮತವೆಂದ ೬೨

ಅರಸಿಯರ ಬಗೆಗೊಳ್ಳ ಮಕ್ಕಳ
ಸರಕು ಮಾಡನು ದೇಶ ಕೋಶದ
ಸಿರಿಯ ಗಣಿಸನು ಖಡ್ಡಿಗೊಳ್ಳನು ಗಾಢಗರ್ವಿತರ
ಹರಿ ಪರಾಯಣರೆಂದೊಡವರಿಗೆ
ಹರಹಿಕೊಂಬನು ಮಗನ ಶೀಲವು
ನರರ ಪರಿಯಲ್ಲೆಂದನಾ ವಸುದೇವನಳಿಯಂಗೆ ೬೩

ಲೋಗರೇ ನೀವೆಮಗೆ ನಿವಗರ
ಗಾಗಿ ಕರಗುವನದು ನಿಲಲಿ ತನ
ಗಾಗದವರಿಗೆ ತನ್ನ ತೆರುವನು ಕೊಲುವ ಹಗೆಗೊಲಿವ
ಲೋಗರೆನ್ನವರೆಂದು ಲೋಗರಿ
ಗಾಗಿ ಬದುಕುವೆನೆಂಬ ಬಲುಗೈ
ಚಾಗಿ ಕೃಷ್ಣನನೇನ ಹೇಳುವೆನೆಂದನರಸಂಗೆ ೬೪

ಬೊಪ್ಪನವರೇಯೆಮ್ಮ ದೂರದೆ
ಯಿಪ್ಪವರು ತಾವಲ್ಲ ಸಾಕಿ
ನ್ನೊಪ್ಪದಲಿ ಬಾಯೆಂದು ಮುರರಿಪು ಕರೆದನವನಿಪನ
ಚಪ್ಪರಿಸಿ ಕೌರವರು ತುರುಗಳ
ತಪ್ಪಿಸಿದುದೇನಾಯ್ತು ಪಾರ್ಥನ
ದರ್ಪದನುವೆಂತೆಂದು ಬೆಸಗೊಂಡನು ಮುರಧ್ವಂಸಿ ೬೫

ಹೂಹೆಗೆಲ್ಲಿಯ ದರ್ಪ ಮನುಜನ
ಸಾಹಸವು ಬೇರೇನು ಯಂತ್ರದ
ಹಾಹೆ ಯಂತ್ರವನುಳಿದು ಜೀವಿಸಲರಿವುದೇ ಬೇರೆ
ದೇಹಿ ನೀ ನಾವೆಲ್ಲ ನಿನ್ನಯ
ದೇಹವಿದರೊಳಗೆಮಗೆ ಗರ್ವದ
ಗಾಹಿದೆಲ್ಲಿಯದೆಂದು ಬಿನ್ನವಿಸಿದನು ಯಮಸೂನು ೬೬

ಎಸಳು ಮೊನೆಯೊಂದಾಗಿ ತಾವರೆ
ಮುಸುಕುತಿದೆ ನೈದಿಲೆಯ ನೆತ್ತಿಯ
ಬೆಸುಗೆ ಬಿಡುತಿದೆ ಜಕ್ಕವಕ್ಕಿಯ ತೆಕ್ಕೆ ಸಡಿಲುತಿದೆ
ದೆಸೆದೆಸೆಯ ತಾಣಾಂತರದ ಹೊಂ
ಬಿಸಿಲು ಬೀತುದು ಜೀಯ ಬಿನ್ನಹ
ವಸುಧೆ ತಂಪೇರಿತ್ತು ಸಂಧ್ಯಾ ಸಮಯವಾಯ್ತೆಂದ ೬೭

ನಗುತ ಹರಿ ನಿಂದಿರಲು ಕೈ ದಂ
ಡಿಗೆಯವರು ಹೊದ್ದಿದರು ರೂವಾ
ರಿಗೆಗೆ ಬಿಜಯಂಗೈದನುಘೆಯೆಂದುದು (ಪಾ: ಬಿಜಯಂಗೈದನುಘೇಯೆಂದುದು) ಸುರಸ್ತೋಮ
ಬಿಗಿದ ದಡ್ಡಿಯ ಬದ್ದರದ ಬೀ
ಯಗದ ರಾಣೀವಾಸದಂದಣ
ತೆಗೆದು ನಡೆದುದು ಮುಂದೆ ಸಂತೋಷದಲಿ ಯದುಸೇನೆ ೬೮

ಹೊಕ್ಕನಸುರಾರಾತಿ ಪಾಂಡವ
ರಿಕ್ಕೆಲದಿ ಬರೆ ನಗರಜನ ಮೈ
ಯಿಕ್ಕಿ ಬೀದಿಯ ಧೂಳು ಕವಿದುದು ಮುಂದೆ ಸಂದಣಿಸಿ
ಹೊಕ್ಕು ಹೊಗಳುವ ಸುತಿಗಳಿಗೆ (ಸ್ತುತಿಗಳಿಗೆ?) ಕೈ
ಮಿಕ್ಕ ಕಳ್ಳನು ಪಾಂಡು ಸುತರಿಗೆ
ಸಿಕ್ಕಿದನು ಶಿವಯೆನುತಲಿರ್ದುದು ಸೂರಿ ಸಂದೋಹ ೬೯

ಮೇಲೆ ಬೀಳುವ ಮಂದಿಯನು ಕೈ
ಗೋಲಿನವರಪ್ಪಳಿಸೆ ಲಕ್ಷ್ಮೀ
ಲೋಲನವದಿರ ಜರೆದು ಕಾಣಿಸಿಕೊಳುತ ಪುರಜನವ
ಮೇಲು ನೆಲೆಯುಪ್ಪರಿಗೆಗಳ ವರ
ಬಾಲೆಯರ ಕಡೆಗಂಗಳೆಸೆವ ನಿ
ವಾಳಿಗಳ ಕೈಕೊಳುತ ಹೊಕ್ಕನು ರಾಜಮಂದಿರವ ೭೦

ಹಿಡಿದರಾರತಿಗಳನು ಬಣ್ಣದ
ಸೊಡರು ಸುಳಿದವು ಮುಂದೆ ನೆಲನು
ಗ್ಗಡಿಪ ಭೀಮಾರ್ಜುನರ ಮೇಳಾಪದಲಿ ಹರುಷದಲಿ
ಹಿಡಿದ ಕೈದೀವಿಗೆಗಳನು ಕೈ
ದುಡುಕಿ ತಿವಿದಾಡುತ್ತ ಕಾಂತಿಯ
ಕಡಲ ಮಣಿಮಯ ಪೀಠದಲಿ ಮಂಡಿಸಿದನಸುರಾರಿ ೭೧

ಬೀಳುಗೊಟ್ಟನು ಸಕಲ ಭೂಮೀ
ಪಾಲರನು ಕುಂತಿಯ ಕುಮಾರರ
ಮೇಳದಲಿ ಪರಿಮಿತದಲಸುರಾರಾತಿ ನಸು ನಗುತ
ಸೋಲದಲಿ ಮೈದಣಿದು ಕುರು ಭೂ
ಪಾಲನುಚಿತವ ಮಾಡಿ ರಾಜ್ಯವ
ನಾಳಿಸುವ ಹದನುಂಟೆ ನಿಮ್ಮಾಳಾಪವೇನೆಂದ ೭೨

ಮರಳಿದವು ತುರುವಿತ್ತಲಹಿತರು
ಸರಿದರತ್ತಲು ಮತ್ಸ್ಯನೆಮ್ಮೈ
ವರನು ನಾವೆಂದರಿದು ಕೊಂಡಾಡಿದನು ವಿನಯದಲಿ
ವರ ಸುಭದ್ರಾ ನಂದನಂಗು
ತ್ತರೆಯನೀವರ್ಥಿಯಲಿಯಿರಲಾ
ಕರೆಯಲಟ್ಟಿದೆವೆಂದು ಬಿನ್ನವಿಸಿದನು ಭೂಪಾಲ ೭೩

ಕೊಳುಗೊಡೆಗೆ ಸೇರುವರೆ ಮದುವೆಯ
ನೊಲಿದು ದೇವರು ಮಾಡುವುದು ಮೇ
ಲಿಳೆಯ ಕಾರ್ಯವ ಬುದ್ಧಿಗಲಿಸುವದೆಮ್ಮನುದ್ಧರಿಸಿ
ಬಳಿಕ ಬಿಜಯಂಗೈವುದಿದು ಹದ
ನೆಲೆ ದಯಾಂಬುಧಿ ಕೇಳೆನಲು ನೃಪ
ತಿಲಕನುಚಿತದ ಬಿನ್ನಹಕೆ ಮನವೊಲಿದು ಹರಿ ನುಡಿದ ೭೪

ಕೊಳುಗೊಡೆಗೆ ತಪ್ಪೇನು ವಸುವಿನ
ಕುಲ ವಿರಾಟನು ಇಂದು ವಂಶಾ
ವಳಿಯವರು ನೀವಾಭಿಜಾತ್ಯದೊಳಿಲ್ಲ ಹಳಿವುಗಳು
ಒಳನುಡಿಗಳಲಿ ದೈವ ಶಕುನಾ
ವಳಿಗಳಾದೊಡೆ ಹರುಷದಲಿ ಮಂ
ಗಳ ಮುಹೂರ್ತವ ಮಾಡಿಯೆಂದನು ಕೃಷ್ಣ ನಸುನಗುತ ೭೫

ಒಸಗೆಯಲಿ ನಿಸ್ಸಾಳ ತತಿ ಗ
ರ್ಜಿಸಿದವಖಿಳ ಜನಂಗಳುತ್ಸಾ
ಹಿಸಿತು ಕನ್ಯಾವರಣವಾಯಿತು ವೈದಿಕೋಕ್ತಿಯಲಿ
ಎಸೆಯಲಭಿಮನ್ಯುವನು ಸಿಂಗಾ
ರಿಸಿತು ಯದು ಪಾಂಚಾಲ ಮತ್ಸ್ಯ
ಪ್ರಸರದಲಿ ಮೆಟ್ಟಕ್ಕಿ ಜೀರಿಗೆ ಬೆಲ್ಲವನುವಾಯ್ತು ೭೬

ವರ ಮುಹೂರ್ತದ ಘಳಿಗೆವಟ್ಟಲ
ಭರಿತದೊಳು ಪುಣ್ಯಾಹವದ ವಿ
ಸ್ತರದಲಕ್ಷತೆ ತಳಿದು ತಂದರು ವಿಮಲ ಮಂಟಪಕೆ
ಪರಮ ಋಷಿಗಳ ಹೋಮದಲಿ ಶಿಖಿ
ವರನ ಬಲಗೊಂಡರು ಕುಮಾರಿಯ
ವರಿಸೆ ವೈದಿಕದಿಂದ ಬಂದಳು ವರನ ವಾಮದಲಿ ೭೭

ವಿಭವವೈವಡಿಯಾಗೆ ಸದ್ವಿಜ
ಸಭೆಯನಾರಾಧಿಸಿದನವನೀ
ವಿಭುಗಳಿತ್ತರು ಮುಯ್ಗಳುಡುಗೊರೆ ರತ್ನ ಭೂಷಣವ
ಅಭವ ಸನ್ನಿಭ ವೀರನಾಗೆಂ
ದಿಭಗಮನೆಯರು ಕೃಷ್ಣನರಸಿಯ
ರಭಿಜನಾಮಲ ತಿಲಕನನು ಹರಸಿದರು ಹರುಷದಲಿ ೭೮

ಇದು ಶುಭೌಘದ ಗರುಡಿ ಬಹು ಸಂ
ಪದದ ನೆಲೆಮನೆ ಸೊಂಪಿನಾಗರ
ವಿದು ಪರಾನಂದ ಪ್ರವಾಹದ ಜನ್ಮಭೂಮಿಯಿದು
ಮುದದ ಕೇಳೀಸ್ಥಾನ ವಿಮಲಾ
ಭ್ಯುದಯದೋಲಗಶಾಲೆ ಲಕ್ಷ್ಮೀ
ಸದನವೆನೆ ರಂಜಿಸಿದುದಭಿಮನ್ಯುವಿನ ವೈವಾಹ ೭೯

ಯಾದವರು ಪಾಂಚಾಲ ಮತ್ಸ್ಯರು
ಮೇದಿನೀಪತಿ ಪಾಂಡು ಸೋಮಕ
ರಾದಿಯಾದನ್ವಯವನಗಣಿತ ಬಂಧು ಬಳಗವನು
ಆದರಿಸಿದನು ವಿನಯದಲಿ ವಿ
ತ್ತಾದಿ ಸತ್ಕಾರದಲಿ ದಣಿದುದು
ಮೇದಿನೀಜನವವನಿಪನ ಸನ್ಮಾನ ದಾನದಲಿ ೮೦

ವರ ಚತುರ್ಥಿಯೊಳಿರುಳು ಮೆರೆದರು
ಪುರದಲುತ್ಸಾಹದಲಿ ದಂಪತಿ
ವರರು ಭೂಮೀಚಾರ ಚಮರದ ಚಾತುರಂಗದಲಿ
ಮರುದಿವಸವವಭೃತವ ನೆರೆ ವಿ
ಸ್ತರಿಸಿದರು ಪನ್ನೀರ ಹೊಂಗೊ
ಪ್ಪರಿಗೆಗಳ ಕುಂಕುಮದ ಘಟವಾಸಕದ ರಚನೆಯಲಿ ೮೧

ಕನಕ ಮಣಿಗಳ ತೊಟ್ಟು ಜಾಜಿಯ
ನನೆಯ ಆದಳಿಕೆಯಲಿ ಮದನನ
ಮೊನೆಯ ಖಾಡಾಖಾಡಿ ಖಾತಿಯರೈದೆ ಹೊಯ್ ಹೊಯ್ದು
ದನುಜಹರನರಸಿಯರು ಕುಂತಿಯ
ತನಯರರಸಿಯರೊಡನೆ ಮತ್ಸ್ಯನ
ವನಿತೆಯರು ಪಾಂಚಾಲಿನಿಯರೋಕುಳಿಯನಾಡಿದರು ೮೨

ಧರಣಿ ನೆನೆದುದು ಗಂಧ ರಸ ಕ
ತ್ತುರಿಯ ಪನ್ನೀರುಗಳ ಹೊನಲೊಡೆ
ವೆರಸಿ ದೆಸೆ ಕಂಪಿಟ್ಟುದಂಬುಧಿ ನವ ತುಷಾರದಲಿ
ತರಣಿ ಪರಿಮಳಿಸಿದನು ಪವನನ
ಸುರಭಿತನವಚ್ಚರಿಯೆ ಗಗನದ
ಪರಮ ಸೌರಭಕಲಸಿ ಕೊಂಡುದು ಸಕಲ ಸುರಕುಲವ ೮೩

ಬಳುವಳಿಯ ನಿಖಿಳಾವನೀ ಮಂ
ಡಲವನನುಪಮ ಕೋಶ ವರ್ಗದ
ಲಲನೆಯರ ಗಜ ವಾಜಿ ರಥ ಪಾದಾತಿ ಗೋವ್ರಜವ
ಅಳಿಯಗಿತ್ತು ವಿರಾಟ ನೃಪ ಯದು
ಕುಲವನಾ ಪಾಂಚಾಲ ಚೈದ್ಯಾ
ವಳಿಯನುತ್ತಮ ವಸ್ತು ವಾಹನದಿಂದ ಮನ್ನಿಸಿದ ೮೪

ಆದುದಭಿಮನ್ಯುವಿನ ಮದುವೆ ಮ
ಹಾ ದಯಾಂಬುಧಿ ಕೃಷ್ಣ ರಾಯನ
ಪಾದ ದರುಶನವಾಗಲಿಮ್ಮಡಿಸಿತ್ತು ನಮ್ಮುದಯ
ಮೇದಿನಿಯ ನಾವೊತ್ತೆಯಿಟ್ಟೆವು
ಕಾದುಕೊಂಡೆವು ಸತ್ಯವನು ಮೇ
ಲಾದುದನು ನೀ ಕರುಣಿಸೆಂದರು ವೀರ ನರಯಣನ ೮೫

ಇತಿ ಶ್ರೀಮದಚಿಂತ್ಯ ಮಹಿಮ ಗದುಗಿನ ವೀರನಾರಾಯಣ ಚರಣಾರವಿಂದ
ಮಕರಂದ ಮಧುಪಾನ ಪರಿಪುಷ್ಟ ವಚಃ ಷಟ್ಪದೀ ನಿಕಾಯ
ಶ್ರೀಮತ್ಕುಮಾರವ್ಯಾಸ ಯೋಗೀಂದ್ರ ವಿರಚಿತಮಪ್ಪ
ಕರ್ಣಾಟ ಭಾರತ ಕಥಾಮಂಜರಿಯೊಳ್
ವಿರಾಟಪರ್ವಂ ಸಮಾಪ್ತಮಾದುದು




ಕೃಪೆ :  http://gaduginabharata.blogspot.in/
Contributors

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...